ಪದ್ಯ ೫೩: ಅಧಮ ರಾಜರ ವಿನಾಶಕ್ಕೆ ಯಾವೆಂಟು ಕಾರಣಗಳು?

ಬುಧರೊಳಗೆ ಹಗೆಗೊಳುವ ಬುಧರನು
ನಿಧನವೈದಿಪ ಬುಧರನೇಳಿಪ
ಬುಧರ ಜರೆದೊಡೆ ನಲಿವ ಬುಧರನು ಹೊಗಳುವರ ಹಳಿವ
ಬುಧರನಧಮರ ಮಾಳ್ಪ ಬುಧರಂ
ವಿಧಿಗೊಳಿಪ ಬುಧರೆನಲು ಕನಲುವ
ನಧಮ ಭೂಪರಿಗೆಂಟು ಗುಣವು ವಿನಾಶಕರವೆಂದ (ಉದ್ಯೋಗ ಪರ್ವ, ೩ ಸಂಧಿ, ೫೩ ಪದ್ಯ)

ತಾತ್ಪರ್ಯ:
ಅಧಮ ರಾಜನ ವಿನಾಶಕ್ಕೆ ಈ ಎಂಟು ಗುಣಗಳನ್ನು ವಿದುರ ಇಲ್ಲಿ ಹೇಳುತ್ತಾರೆ. ಈ ಪದ್ಯದಲ್ಲಿ ವಿದ್ವಾಂಸರನ್ನು ರಾಜ್ಯದಲ್ಲಿ ಹೇಗೆ ನಡೆಸಿಕೊಳ್ಳಬೇಕೆಂದು ನಾವು ಅರ್ಥೈಸಬಹುದು. ಪಂಡಿತರನ್ನು ದ್ವೇಷಿಸುವುದು, ವಿದ್ವಾಂಸರನ್ನು ಕೊನೆಗೊಳಿಸುವುದು, ಬುಧರನ್ನು ಅಪಹಾಸ್ಯ ಮಾದುವುದು, ಜ್ಞಾನಿಗಳನ್ನು ಬೈದಾಗ ಸಂತೋಷಪಡುವುದು, ಅವರನ್ನು ಹೊಗಳುವವರನ್ನು ನಿಂದಿಸುವುದು, ಜ್ಞಾನಿಗಳನ್ನು ಅಧಮರೆಂದು ಪರಿಗಣಿಸುವುದು, ಅವರ ಮೇಲೆ ನಿಯಂತ್ರಣ ಸಾಧಿಸಲು ಆಜ್ಞೆಯನ್ನು ಮಾಡುವುದು, ತಿಳಿದವರೆಂದರೆ ಕೋಪಗೊಳ್ಳುವುದು, ಈ ಎಂಟು ಗುಣಗಳು ರಾಜನಲ್ಲಿ ವ್ಯಕ್ತವಾದರೆ ಆವನು ವಿನಾಶದ ಹಾದಿಯಲ್ಲಿದ್ದಾನೆ ಎಂದು ತಿಳಿಯಬಹುದು.

ಅರ್ಥ:
ಬುಧ: ಪಂಡಿತ, ವಿದ್ವಾಂಸ; ಹಗೆ: ದ್ವೇಷ, ವೈರತ್ವ; ನಿಧನ: ಕೊನೆಗೊಳ್ಳು, ಸಾವು; ಐದು: ಹೊಂದು; ಏಳು:ಜೀವವನ್ನು ಪಡೆ; ಜರಿ: ನಿಂದಿಸು; ನಲಿ: ಸಂತೋಷ ಪಡು; ಹೊಗಳು: ಗೌರವಿಸು; ಹಳಿ: ನಿಂದಿಸು, ದೂಷಿಸು; ಅಧಮ: ಕೀಳು; ಮಾಳ್ಪ: ಮಾಡು; ವಿಧಿ:ಆಜ್ಞೆ, ಆದೇಶ; ಎನಲು: ಹೇಳುತ್ತಲೆ; ಕನಲು:ಸಿಟ್ಟಿಗೇಳು; ಅಧಮ: ಕೀಳುದರ್ಜೆಯ; ಭೂಪ: ರಾಜ; ಗುಣ: ನಡತೆ, ಸ್ವಭಾವ; ವಿನಾಶ: ಅಂತ್ಯ;

ಪದವಿಂಗಡಣೆ:
ಬುಧರೊಳಗೆ+ ಹಗೆಗೊಳುವ +ಬುಧರನು
ನಿಧನವೈದಿಪ+ ಬುಧರನ್+ಏಳಿಪ
ಬುಧರ+ ಜರೆದೊಡೆ +ನಲಿವ +ಬುಧರನು+ ಹೊಗಳುವರ+ ಹಳಿವ
ಬುಧರನ್+ಅಧಮರ+ ಮಾಳ್ಪ +ಬುಧರಂ
ವಿಧಿಗೊಳಿಪ+ ಬುಧರೆನಲು +ಕನಲುವನ್
ಅಧಮ +ಭೂಪರಿಗೆಂಟು +ಗುಣವು +ವಿನಾಶಕರವೆಂದ

ಅಚ್ಚರಿ:
(೧) ಬುಧ – ೮ ಬಾರಿ ಪ್ರಯೋಗ
(೨) ೮ ಗುಣಗಳನ್ನು ವಿವರಿಸುವ ಪದ್ಯ, ಹಗೆ, ನಿಧನ, ಏಳು, ಜರೆ, ಹಳಿ, ಅಧಮ, ವಿಧಿ, ಕನಲು

ನಿಮ್ಮ ಟಿಪ್ಪಣಿ ಬರೆಯಿರಿ