ಪದ್ಯ ೧೯: ಕೃಷ್ಣನ ಯಾವ ಪರಾಕ್ರಮವನ್ನು ವರ್ಣಿಸಲಿಲ್ಲ ಎಂದು ಶಿಶುಪಾಲ ಹೇಳಿದ?

ಆದರಿಸಿ ಬಣ್ಣಿಸಿದೆ ನಾಚದೆ
ಯಾದವನ ಕೌಳಿಕ ಪರಾಕ್ರಮ
ವಾದಿಯಾದ ಸಮಸ್ತಗುಣ ವಿಸ್ತಾರ ವೈಭವವ
ಆದರಾ ಗೋವಳರ ಹೆಂಡಿರ
ಹಾದರದ ಹೆಕ್ಕಳವ ಬಣ್ಣಿಸ
ದಾದೆ ನಿನಗೇಕಕಟ ನಾಚಿಕೆಯೆಂದನಾ ಚೈದ್ಯ (ಸಭಾ ಪರ್ವ, ೧೧ ಸಂಧಿ, ೧೯ ಪದ್ಯ)

ತಾತ್ಪರ್ಯ:
ಎಲೈ ಭೀಷ್ಮ ನೀನು ಈ ಯಾದವನ ಸಮಸ್ತ ಪರಾಕ್ರಮದ ಮೋಸದ ಕೃತ್ಯಗಳನ್ನೆಲ್ಲಾ ವಿವರವಾಗಿ ವೈಭವಪೂರ್ಣವಾಗಿ ಹೇಳಿದ, ಆದರೆ ಗೋವಳರ ಹೆಂಡಿರ ಜೊತೆಗೆ ಇವನು ಮಾಡಿದ ಹಾದರವನ್ನು ಏಕೆ ವಿವರಿಸಲಿಲ್ಲ, ಅಯ್ಯೋ ನೀನಗೇಕೆ ನಾಚಿಕೆ ಎಂದು ಶಿಶುಪಾಲನು ಮೂದಲಿಸಿದನು.

ಅರ್ಥ:
ಆದರಿಸು: ಗೌರವಿಸು; ಬಣ್ಣಿಸು: ವರ್ಣಿಸು; ನಾಚು: ನಾಚಿಕೆಪಡು, ಸಿಗ್ಗಾಗು; ಕೌಳಿಕ:ಕಟುಕ, ಕಸಾಯಿಗಾರ, ಮೋಸ; ಪರಾಕ್ರಮ: ಶೌರ್ಯ; ವಾದಿ: ತರ್ಕಮಾಡುವವನು; ಸಮಸ್ತ: ಎಲ್ಲಾ; ಗುಣ: ನಡತೆ, ಸ್ವಭಾವ; ವಿಸ್ತಾರ: ವೈಶಾಲ್ಯ; ವೈಭವ: ಶಕ್ತಿ, ಸಾಮರ್ಥ್ಯ, ಆಡಂಬರ; ಗೋವಳ: ಗೋಪಾಲಕ; ಹೆಂಡಿರ: ಭಾರ್ಯ; ಹಾದರ: ವ್ಯಭಿಚಾರ, ಜಾರತನ; ಹೆಕ್ಕಳ: ಹೆಚ್ಚಳ, ಅತಿಶಯ; ಅಕಟ: ಅಯ್ಯೋ; ನಾಚಿಕೆ: ಲಜ್ಜೆ, ಸಿಗ್ಗು; ಚೈದ್ಯ: ಶಿಶುಪಾಲ;

ಪದವಿಂಗಡಣೆ:
ಆದರಿಸಿ +ಬಣ್ಣಿಸಿದೆ +ನಾಚದೆ
ಯಾದವನ +ಕೌಳಿಕ +ಪರಾಕ್ರಮವ್
ಆದಿಯಾದ +ಸಮಸ್ತಗುಣ +ವಿಸ್ತಾರ +ವೈಭವವ
ಆದರ್+ಆ+ ಗೋವಳರ +ಹೆಂಡಿರ
ಹಾದರದ +ಹೆಕ್ಕಳವ +ಬಣ್ಣಿಸ
ದಾದೆ+ ನಿನಗೇಕ್+ಅಕಟ +ನಾಚಿಕೆ+ಎಂದನಾ +ಚೈದ್ಯ

ಅಚ್ಚರಿ:
(೧) ಹ ಕಾರದ ತ್ರಿವಳಿ ಪದ – ಹೆಂಡಿರ ಹಾದರದ ಹೆಕ್ಕಳವ
(೨) ಬಣ್ಣಿಸಿದೆ, ಬಣ್ಣಿಸದಾದೆ – ಪದಗಳ ಬಳಕೆ
(೩) ಆದರಾ, ಹಾದರ – ಪದಗಳ ಬಳಕೆ

ನಿಮ್ಮ ಟಿಪ್ಪಣಿ ಬರೆಯಿರಿ