ಪುರದೊಳೆಲ್ಲಿಯ ಶಾಂತಿ ನಾರದ
ನೊರೆದನುತ್ಪಾತ ಪ್ರಬಂಧದ
ಹೊರಿಗೆಯನು ನಿಮ್ಮೈಶ್ವರಿಯ ವಿಧ್ವಂಸಕರವೆಂದು
ಇರುಳು ನಾನಾ ಸ್ವಪ್ನಕಾನನ
ಗಿರಿ ಪರಿಭ್ರಮಣೈಕ ಚಿಂತಾ
ಭರಿತನಾದೆನು ದೈವಕೃತವುಪಭೋಗವೆನಗೆಂದ (ಸಭಾ ಪರ್ವ, ೧೪ ಸಂಧಿ, ೧೮ ಪದ್ಯ)
ತಾತ್ಪರ್ಯ:
ಧೌಮ್ಯನು ಊರಿಗೆ ತೆರಳಿದ ಮೇಲೆ ಶಾಂತಿಕಾರ್ಯವನ್ನು ಮಾಡಿಸೋಣ ಎಂದುದಕ್ಕೆ, ಯುಧಿಷ್ಠಿರನು ಊರಿಗೆ ತೆರಳಿದ ಮೇಲೆ ಶಾಂತಿ ಕಾರ್ಯ ಮಾಡಿಸಿ ಏನು ಪ್ರಯೋಜನ. ಅಲ್ಲಿರುವಾಗ ನಾರದನು ನನ್ನ ಸ್ವಪ್ನಗಳ ವಿಷಯವನ್ನು ಕೇಳಿ ಇದು ನಿಮ್ಮ ಐಶ್ವರ್ಯನಾಶವನ್ನು ಸೂಚಿಸುತ್ತದೆ ಎಂದನು. ನಿನ್ನೆ ರಾತ್ರಿ ಕನಸಿನಲ್ಲಿ ಬೆಟ್ಟ ಅಡವಿಗಳಲ್ಲಿ ತಿರುಗಾಡಿದಂತೆ ಕನಸನ್ನು ಕಂಡೆ. ದೈವಚಿತ್ತದಿಂದ ಬಂದುದನ್ನು ಉಪಭೋಗಿಸೋಣ ಎಂದನು.
ಅರ್ಥ:
ಪುರ: ಊರು; ಒರೆ: ಹೇಳು; ಉತ್ಪಾತ: ಅಪಶಕುನ; ಪ್ರಬಂಧ: ವ್ಯವಸ್ಥೆ, ಏರ್ಪಾಡು; ಹೊರಿಗೆ: ಭಾರ, ಹೊರೆ; ಐಶ್ವರ್ಯ: ಸಂಪತ್ತು, ಸಿರಿ; ವಿಧ್ವಂಸಕ: ವಿನಾಶ; ಇರುಳು: ಕತ್ತಲೆ; ಸ್ವಪ್ನ: ಕನಸು; ಕಾನನ: ಅಡವಿ; ಗಿರಿ: ಬೆಟ್ಟ; ಪರಿಭ್ರಮಣೆ: ತಿರುಗು; ಚಿಂತೆ: ಯೋಚನೆ; ಭರಿತ: ಮುಳುಗು; ದೈವ: ಭಗವಂತ; ಕೃತ: ನಿರ್ಮಿಸಿದ; ಉಪಭೋಗ: ವಿಷಯಾನುಭವ;
ಪದವಿಂಗಡಣೆ:
ಪುರದೊಳ್+ಎಲ್ಲಿಯ +ಶಾಂತಿ +ನಾರದನ್
ಒರೆದನ್+ಉತ್ಪಾತ +ಪ್ರಬಂಧದ
ಹೊರಿಗೆಯನು +ನಿಮ್+ಐಶ್ವರಿಯ +ವಿಧ್ವಂಸಕರವೆಂದು
ಇರುಳು +ನಾನಾ +ಸ್ವಪ್ನ+ಕಾನನ
ಗಿರಿ+ ಪರಿಭ್ರಮಣೈಕ+ ಚಿಂತಾ
ಭರಿತನಾದೆನು+ ದೈವಕೃತವ್+ಉಪಭೋಗವೆನಗೆಂದ
ಅಚ್ಚರಿ:
(೧) ಮನಸ್ಸಿನ ಸ್ಥೈರ್ಯವನ್ನು ಹೆಚ್ಚಿಸುವ ನುಡಿ – ದೈವಕೃತವುಪಭೋಗವೆನಗೆಂದ