ಪದ್ಯ ೯೪: ದ್ರೌಪದಿಯು ತನ್ನ ಪ್ರಶ್ನೆಗೆ ಉತ್ತರವನ್ನು ಯಾರಿಂದ ನಿರೀಕ್ಷಿಸಿದಳು?

ಅಕಟ ಧರ್ಮಜ ಭೀಮ ಫಲುಗುಣ
ನಕುಲ ಸಹದೇವಾದ್ಯರಿರ ಬಾ
ಲಿಕಿಯನೊಪ್ಪಿಸಿ ಕೊಟ್ಟಿರೇ ಮೃತ್ಯುವಿನ ತಾಳಿಗೆಗೆ
ವಿಕಳರಾದಿರೆ ನಿಲ್ಲಿ ನೀವೀ
ಗಕುಟಿಲರಲಾ ಭೀಷ್ಮ ಗುರು ಬಾ
ಹ್ಲಿಕ ಕೃಪಾದಿಗಳುತ್ತರವ ಕೊಡಿಯೆಂದಳಬುಜಾಕ್ಷಿ (ಸಭಾ ಪರ್ವ, ೧೫ ಸಂಧಿ, ೯೪ ಪದ್ಯ)

ತಾತ್ಪರ್ಯ:
ದ್ರೌಪದಿಯು ತನ್ನ ಪ್ರಶ್ನೆಗೆ ಉತ್ತರವನ್ನು ಹುಡುಕುತ್ತಾ, ಅಯ್ಯೋ ಯುಧಿಷ್ಠಿರ, ಭೀಮ, ಅರ್ಜುನ, ನಕುಲ, ಸಹದೇವರೇ ನಿಮ್ಮ ಪತ್ನಿಯನ್ನು ಮರಣದ ಗಂಟಲಿಗೆ ಒಪ್ಪಿಸಿ ಕೊಟ್ಟಿರಾ? ಭ್ರಮೆಯಿಂದ ವಿವೇಚನೆಯನ್ನೇ ಕಳೆದುಕೊಂಡಿರಾ? ಹಾಗೆ ಆಗಲಿ, ಆದರೆ ಭೀಷ್ಮ, ದ್ರೋಣ, ಬಾಹ್ಲಿಕ, ಕೃಪನೇ ಮೊದಲಾದವರೇ ನನ್ನ ಪ್ರಶ್ನೆಗೆ ಉತ್ತರವನ್ನು ನೀಡಲಿ ಎಂದು ದ್ರೌಪದಿ ಕೇಳಿದಳು.

ಅರ್ಥ:
ಅಕಟ: ಅಯ್ಯೋ; ಆದಿ: ಮೊದಲಾಗಿ; ಬಾಲಕಿ: ಹೆಣ್ಣು; ಒಪ್ಪು: ಸಮ್ಮತಿ; ಕೊಡು: ನೀಡು; ಮೃತ್ಯು: ಸಾವು; ತಾಳಿಗೆ: ಗಂಟಲು; ವಿಕಳ: ಭ್ರಮೆ, ಭ್ರಾಂತಿ, ಖಿನ್ನತೆ; ಕುಟಿಲ: ಮೋಸ; ಉತ್ತರ: ಪರಿಹಾರ; ಕೊಡಿ: ನೀಡಿ; ಅಬುಜಾಕ್ಷಿ: ಕಮಲದ ಕಣ್ಣಿನವಳು, ಹೆಣ್ಣು (ದ್ರೌಪದಿ)

ಪದವಿಂಗಡಣೆ:
ಅಕಟ +ಧರ್ಮಜ +ಭೀಮ +ಫಲುಗುಣ
ನಕುಲ +ಸಹದೇವ+ಆದ್ಯರಿರ+ ಬಾ
ಲಿಕಿಯನ್+ಒಪ್ಪಿಸಿ +ಕೊಟ್ಟಿರೇ +ಮೃತ್ಯುವಿನ +ತಾಳಿಗೆಗೆ
ವಿಕಳರಾದಿರೆ+ ನಿಲ್ಲಿ+ ನೀವೀಗ್
ಅಕುಟಿಲರಲಾ +ಭೀಷ್ಮ +ಗುರು+ ಬಾ
ಹ್ಲಿಕ+ ಕೃಪಾದಿಗಳ್+ಉತ್ತರವ+ ಕೊಡಿ+ಎಂದಳ್+ಅಬುಜಾಕ್ಷಿ

ಅಚ್ಚರಿ:
(೧) ದ್ರೌಪದಿಯ ಸಂಕಟ – ಬಾಲಿಕಿಯನೊಪ್ಪಿಸಿ ಕೊಟ್ಟಿರೇ ಮೃತ್ಯುವಿನ ತಾಳಿಗೆಗೆ,
ವಿಕಳರಾದಿರೆ
(೨) ದ್ರೌಪದಿಯನ್ನು ಕರೆದ ಪರಿ – ಬಾಲಕಿ, ಅಬುಜಾಕ್ಷಿ

ನಿಮ್ಮ ಟಿಪ್ಪಣಿ ಬರೆಯಿರಿ