ಸೊಸೆಯಲಾ ದೇವೆಂದ್ರಯೆನ್ನಯ
ಘಸಣಿ ಯಾರದು ಹಿರಿಯ ಮಾವನ
ವಶವಲಾ ತ್ರೈಜಗದ ಜೀವರ ಜೀವ ವಿಭ್ರಮಣ
ಉಸುರು ನಿನ್ನಾಧೀನವೀ ದು
ರ್ವ್ಯಸನಿಗಳ ಕೊಂಡಾಡುವರೆ ಕರು
ಣಿಸು ಸಮೀರಣಯೆಂದು ಹಲುಬಿದಳಾಶ್ವಿನೇಯರಿಗೆ (ಸಭಾ ಪರ್ವ, ೧೬ ಸಂಧಿ, ೨೭ ಪದ್ಯ)
ತಾತ್ಪರ್ಯ:
ಪರಮಾತ್ಮರಲ್ಲಿ ಮೊರೆಯಿಟ್ಟ ದ್ರೌಪದಿ ನಂತರ ತನ್ನ ಮಾವನಾದ ಇಂದ್ರನಲ್ಲಿ ಬೇಡಿದಳು. ಹೇ ಇಂದ್ರದೇವ ನಾನು ನಿನಗೆ ಸೊಸೆಯಲ್ಲವೇ, ಈ ಕಷ್ಟದಿಂದ ನನ್ನನ್ನು ಪಾರು ಮಾಡುವವರು ಯಾರು, ಅದು ನಿನ್ನ ಕೆಲಸವಲ್ಲವೇ? ಹೇ ವಾಯುದೇವ, ಮೂರುಲೋಕಗಳಲ್ಲಿರುವ ಜೀವರಲ್ಲಿ ಜೀವವಾಗಿರುವ ಉಸಿರು ನಿನ್ನ ಅಧೀನವಲ್ಲವೇ? ಈ ದುರಾಚಾರಿಗಳನ್ನು ನೀನು ಸೈರಿಸಬಹುದೇ? ಹೇ ವಾಯುದೇವ ಕರುಣಿಸು, ಹೇ ಅಶ್ವಿನೀ ದೇವತೆಗಳೇ ನೀವಾದರೂ ನನ್ನನ್ನು ಕಷ್ಟದಿಂದ ಪಾರುಮಾಡಬಹುದಲ್ಲವೇ ಎಂದು ದ್ರೌಪದಿಯು ದೇವತೆಗಳಲ್ಲಿ ಮೊರೆಯಿಟ್ಟಳು.
ಅರ್ಥ:
ಸೊಸೆ: ಮಗನ ಹೆಂಡತಿ; ದೇವೇಂದ್ರ; ಇಂದ್ರ; ಘಸಣಿ: ತೊಂದರೆ; ಹಿರಿಯ: ದೊಡ್ಡವ; ಮಾವ: ಗಂಡನ ತಂದೆ; ವಶ: ಅಧೀನ, ಅಂಕೆ; ತ್ರೈಜಗ: ಮೂರುಲೋಕ; ಜೀವ: ಉಸಿರು; ವಿಭ್ರಮಣ: ಅಲೆಯುವಿಕೆ; ಉಸುರು: ವಾಯು; ಅಧೀನ: ವಶ, ಕೈಕೆಳಗಿರುವ; ದುರ್ವ್ಯಸನ: ಕೆಟ್ಟ ಚಟವುಳ್ಳ; ಕೊಂಡಾಡು: ಹೊಗಳು, ಆದರಿಸು; ಕರುಣಿಸು: ದಯಪಾಲಿಸು; ಸಮೀರ: ವಾಯು; ಹಲುಬು: ಗೋಳಿಡು, ಬೇಡಿಕೋ; ಅಶ್ವಿನಿ: ದೇವತೆಗಳ ಒಂದು ಗುಂಪು;
ಪದವಿಂಗಡಣೆ:
ಸೊಸೆಯಲಾ +ದೇವೆಂದ್ರ+ಎನ್ನಯ
ಘಸಣಿ +ಯಾರದು +ಹಿರಿಯ +ಮಾವನ
ವಶವಲಾ +ತ್ರೈಜಗದ+ ಜೀವರ +ಜೀವ +ವಿಭ್ರಮಣ
ಉಸುರು +ನಿನ್+ಅಧೀನವ್+ಈ+ ದು
ರ್ವ್ಯಸನಿಗಳ +ಕೊಂಡಾಡುವರೆ +ಕರು
ಣಿಸು +ಸಮೀರಣ+ಎಂದು +ಹಲುಬಿದಳ್+ಅಶ್ವಿನೇಯರಿಗೆ
ಅಚ್ಚರಿ:
(೧) ವಾಯುದೇವನನ್ನು ಹೊಗಳುವ ಪರಿ – ಜಗದ ಜೀವರ ಜೀವ ವಿಭ್ರಮಣ ಉಸುರು ನಿನ್ನಾಧೀನವೀ