ಪದ್ಯ ೧೦: ಲೋಮಶ ಮುನಿಯು ಯಾವ ಕಥೆಯನ್ನು ಧರ್ಮಜನಿಗೆ ಹೇಳಿದರು?

ಬಳಿಕ ಲೋಮಶ ಸಹಿತ ನೃಪಕುಲ
ತಿಲಕ ಬಂದನಗಸ್ತ್ಯನಾಶ್ರಮ
ದೊಳಗೆ ಬಿಟ್ಟನು ಪಾಳೆಯವನಾ ಮುನಿಯಚರಿತವನು
ತಿಳುಹಿದನು ಲೋಮಶನು ವೃತ್ರನ
ಕಲಹಕೆಂದು ದಧೀಚಿ ಮುನಿಪತಿ
ಯೆಲುವನಮರರು ಬೇಡಿದುದನರುಹಿದನು ಜನಪತಿಗೆ (ಅರಣ್ಯ ಪರ್ವ, ೧೦ ಸಂಧಿ, ೧೦ ಪದ್ಯ)

ತಾತ್ಪರ್ಯ:
ನಂತರ ಲೋಮಶ ಮುನಿಯ ಜೊತೆ ಧರ್ಮರಾಯನು ಅಗಸ್ತ್ಯರ ಆಶ್ರಮಕ್ಕೆ ಬಂದು ಅಲ್ಲಿ ಬೀಡು ಬಿಟ್ಟನು. ಲೋಮಶನು ಅಗಸ್ತ್ಯನ ಚರಿತ್ರೆಯನ್ನು ಹೇಳಿದ ಬಳಿಕ ದಧೀಚಿಯ ಎಲುಬನ್ನು ದೇವತೆಗಳು ಬೇಡಿದ ಕಥೆಯನ್ನು ಹೇಳಿದನು.

ಅರ್ಥ:
ಬಳಿಕ: ನಂತರ; ಸಹಿತ: ಜೊತೆ; ನೃಪ: ರಾಜ; ಕುಲ: ವಂಶ; ತಿಲಕ: ಶ್ರೇಷ್ಠ; ನೃಪಕುಲತಿಲಕ: ಶ್ರೇಷ್ಠನಾದ ರಾಜ; ಆಶ್ರಮ: ಕುಟೀರ; ಪಾಳೆಯ: ಬೀಡು, ಶಿಬಿರ; ಮುನಿ: ಋಷಿ; ಚರಿತ: ವಿಚಾರ, ಕಥೆ; ತಿಳುಹು: ತಿಳಿಸು; ಕಲಹ: ಜಗಳ; ಮುನಿಪತಿ: ಋಷಿ; ಯೆಲುಬು: ಮೂಳೆ; ಅಮರ: ದೇವತೆ; ಬೇಡು: ಕೇಳು; ಅಉಹು: ತಿಳಿಸು; ಜನಪತಿ: ರಾಜ;

ಪದವಿಂಗಡಣೆ:
ಬಳಿಕ +ಲೋಮಶ +ಸಹಿತ +ನೃಪಕುಲ
ತಿಲಕ +ಬಂದನ್+ಅಗಸ್ತ್ಯನ್+ಆಶ್ರಮ
ದೊಳಗೆ +ಬಿಟ್ಟನು +ಪಾಳೆಯವನಾ+ ಮುನಿಯ+ಚರಿತವನು
ತಿಳುಹಿದನು +ಲೋಮಶನು +ವೃತ್ರನ
ಕಲಹಕೆಂದು +ದಧೀಚಿ +ಮುನಿಪತಿ
ಯೆಲುವನ್+ಅಮರರು +ಬೇಡಿದುದನ್+ಅರುಹಿದನು +ಜನಪತಿಗೆ

ಅಚ್ಚರಿ:
(೧) ಯುಧಿಷ್ಠಿರನನ್ನು ನೃಪಕುಲತಿಲಕ ಎಂದು ಕರೆದಿರುವುದು

ನಿಮ್ಮ ಟಿಪ್ಪಣಿ ಬರೆಯಿರಿ