ಪದ್ಯ ೧೯: ಧರ್ಮಜನು ಯಾವ ವನಕ್ಕೆ ಹೊರಟನು?

ಕೇಳಲಷ್ಟಾವಕ್ರ ಚರಿತವ
ಹೇಳಿದನು ಲೋಮಶ ಮುನೀಂದ್ರ ನೃ
ಪಾಲಕಂಗರುಹಿದನು ಪೂರ್ವಾಪರದ ಸಂಗತಿಯ
ಭಾಳಡವಿ ಬಯಲಾಯ್ತು ಖಗಮೃಗ
ಜಾಲ ಸವೆದುದು ಗಂಧಮಾದನ
ಶೈಲವನದಲಿ ವಾಸವೆಂದವನೀಶ ಹೊರವಂಟ (ಅರಣ್ಯ ಪರ್ವ, ೧೦ ಸಂಧಿ, ೧೯ ಪದ್ಯ)

ತಾತ್ಪರ್ಯ:
ಅಷ್ಟಾವಕ್ರನ ಚರಿತ್ರೆಯನ್ನು ಹೇಳೆಂದು ಕೇಳಲು ಲೋಮಶನು ಆ ಕಥೆಯನ್ನೆಲ್ಲವನ್ನೂ ಹೇಳಿದನು. ಪಾಂಡವರಿದ್ದ ಅಡವಿಯಲ್ಲಿ ಹಣ್ಣು ಹೂವುಗಳು ಪಕ್ಷಿ ಮೃಗಗಳು ಸವೆದು ಹೋಗಲು, ಗಂಧಮಾದನಗಿರಿಯ ವನಕ್ಕೆ ಹೋಗೋಣವೆಂದು ಧರ್ಮಜನು ಹೊರಟನು.

ಅರ್ಥ:
ಕೇಳು: ಆಲಿಸು; ಚರಿತ: ಕಥೆ; ಮುನಿ: ಋಷಿ; ನೃಪಾಲ: ರಾಜ; ಅರುಹು: ತಿಳಿಸು, ಹೇಳು; ಪೂರ್ವಾಪರ: ಹಿಂದು ಮುಂದು; ಸಂಗತಿ: ವಿಷಯ; ಭಾಳಡವಿ: ದೊಡ್ಡ ಕಾಡು; ಬಯಲು: ಬರಿದಾದ ಜಾಗ; ಖಗ: ಪಕ್ಷಿ; ಮೃಗ: ಪ್ರಾಣಿ; ಜಾಲ: ಗುಂಪು; ಸವೆ: ಉಂಟಾಗು; ಶೈಲ: ಬೆಟ್ಟ; ವಾಸ: ಜೀವಿಸು; ಅವನೀಶ: ರಾಜ; ಹೊರವಂಟ: ತೆರಳು;

ಪದವಿಂಗಡಣೆ:
ಕೇಳಲ್+ಅಷ್ಟಾವಕ್ರ +ಚರಿತವ
ಹೇಳಿದನು +ಲೋಮಶ +ಮುನೀಂದ್ರ +ನೃ
ಪಾಲಕಂಗ್+ಅರುಹಿದನು +ಪೂರ್ವಾಪರದ+ ಸಂಗತಿಯ
ಭಾಳಡವಿ+ ಬಯಲಾಯ್ತು +ಖಗ+ಮೃಗ
ಜಾಲ +ಸವೆದುದು +ಗಂಧಮಾದನ
ಶೈಲವನದಲಿ +ವಾಸವೆಂದ್+ಅವನೀಶ +ಹೊರವಂಟ

ಅಚ್ಚರಿ:
(೧) ಅಡವಿಯು ಬರಡಾಯಿತು ಎಂದು ಹೇಳಲು – ಭಾಳಡವಿ ಬಯಲಾಯ್ತು ಖಗಮೃಗ
ಜಾಲ ಸವೆದುದು

ನಿಮ್ಮ ಟಿಪ್ಪಣಿ ಬರೆಯಿರಿ