ಅರಸನಲಿ ಮೇಣ್ ನಕುಲ ಸಹದೇ
ವರಲಿ ತನ್ನ ಮನೋರಥಕೆ ವಿ
ಸ್ತರಣವಾಗದು ನುಡಿವಡಿಲ್ಲರ್ಜುನ ಸಮೀಪದಲಿ
ಅರಿಭಯಂಕರ ಭೀಮನೇ ಗೋ
ಚರಿಸುವನಲಾಯೆನುತಲಾತನ
ಹೊರೆಗೆ ಬಂದಳು ನಗುತ ನುಡಿದಲು ಮಧುರ ವಚನದಲಿ (ಅರಣ್ಯ ಪರ್ವ, ೧೧ ಸಂಧಿ, ೫ ಪದ್ಯ)
ತಾತ್ಪರ್ಯ:
ದ್ರೌಪದಿಯನ್ನು ಆ ಸುಗಂಧ ಹೂವಿನ ಪರಿಮಳ ಆಕರ್ಷಿಸಿತು. ಅದನ್ನು ನೋಡಲು ಬಯಸಿದ ಆಕೆ, ಧರ್ಮಜ, ನಕುಲ ಅಥವ ಸಹದೇವರಿಂದ ನನ್ನ ಆಶೆಯು ಪೂರೈಸಲಾಗುವುದಿಲ್ಲ ಎಂದು ಅರಿತು, ಅರ್ಜುನನು ಸಮೀಪದಲ್ಲಿರದ ಕಾರಣ, ವೈರಿಗಳಲ್ಲಿ ಭಯವನ್ನುಂಟುಮಾಡುವ ಭೀಮನೇ ಈ ಕಾರ್ಯಕ್ಕೆ ಸರಿಯೆಂದು ತಿಳಿದು ದ್ರೌಪದಿಯು ಆತನ ಬಳಿಗೆ ಹೋಗಿ ಮಧುರ ವಚನದಿಂದ ಹೀಗೆ ಹೇಳಿದಳು.
ಅರ್ಥ:
ಅರಸ: ರಾಜ; ಮೇಣ್: ಅಥವ; ಮನೋರಥ: ಕಾಮನೆ, ಆಸೆ; ವಿಸ್ತರಣ: ಹರಡು, ವಿಸ್ತಾರ; ನುಡಿ: ಮಾತು; ಸಮೀಪ: ಹತ್ತಿರ; ಅರಿ: ವೈರಿ; ಭಯಂಕರ: ಸಾಹಸಿ, ಗಟ್ಟಿಗ; ಗೋಚರಿಸು: ತೋರು; ಹೊರೆ: ಆಶ್ರಯ,ರಕ್ಷಣೆ; ಬಂದು: ಆಗಮಿಸು; ನಗು: ಸಂತಸ; ನುಡಿ: ಮಾತಾಡು; ಮಧುರ: ಸಿಹಿ; ವಚನ: ನುಡಿ, ಮಾತು;
ಪದವಿಂಗಡಣೆ:
ಅರಸನಲಿ +ಮೇಣ್ +ನಕುಲ +ಸಹದೇ
ವರಲಿ +ತನ್ನ +ಮನೋರಥಕೆ +ವಿ
ಸ್ತರಣವಾಗದು +ನುಡಿವಡಿಲ್ಲ್+ಅರ್ಜುನ +ಸಮೀಪದಲಿ
ಅರಿ+ಭಯಂಕರ+ ಭೀಮನೇ +ಗೋ
ಚರಿಸುವನಲಾ+ಎನುತಲ್+ಆತನ
ಹೊರೆಗೆ +ಬಂದಳು +ನಗುತ +ನುಡಿದಲು +ಮಧುರ +ವಚನದಲಿ
ಅಚ್ಚರಿ:
(೧) ಭೀಮನನ್ನು ಪರಿಚಯಿಸುವ ಪರಿ – ಅರಿಭಯಂಕರ
(೨) ಕೋರಿಕೆಯನ್ನು ತಿಳಿಸುವ ಮುನ್ನ – ಆತನ ಹೊರೆಗೆ ಬಂದಳು ನಗುತ ನುಡಿದಲು ಮಧುರ ವಚನದಲಿ