ಪದ್ಯ ೬: ಭೀಮನು ದ್ರೌಪದಿಗೆ ಏನು ಹೇಳಿದನು?

ಹಿರಿದು ಸೊಗಸಾಯ್ತೆನಗಪೂರ್ವದ
ಪರಿಮಳದ ಕೇಳಿಯಲಿ ನೀನಾ
ಸರಸಿಜವ ತಂದಿತ್ತು ತನ್ನ ಮನೋಗತ ವ್ಯಥೆಯ
ಪರಿಹರಿಪುದೆನಲಬುಜವದನೆಯ
ಕುರುಳನಗುರಲಿ ತಿದ್ದಿದನು ತ
ತ್ಸರಸಿಜವ ತಹೆನೆನುತ ಕೊಂಡನು ನಿಜ ಗದಾಯುಧವ (ಅರಣ್ಯ ಪರ್ವ, ೧೧ ಸಂಧಿ, ೬ ಪದ್ಯ)

ತಾತ್ಪರ್ಯ:
ದ್ರೌಪದಿಯು ಭೀಮನ ಬಳಿ ಬಂದು, ಈ ಪುಷ್ಪದ ಅಪೂರ್ವ ಪರಿಮಳವು ನನಗೆ ಬಹಳ ಇಷ್ಟವಾಗಿದೆ. ಅದನ್ನು ತಂದು ಕೊಟ್ಟು ನನ್ನ ಮನಸ್ಸಿನ ಇಚ್ಛೆಯನ್ನು ಪೂರೈಸಲೆಂದು ಕೇಳಲು, ಭೀಮನು ಪ್ರೀತಿಯಿಂದ ತನ್ನು ಉಗುರಿನಿಂದ ಆಕೆಯ ಮುಂಗುರುಳನ್ನು ಸರಿಪಡಿಸಿ, ಆ ಪದ್ಮವನ್ನು ತರುವೆನೆಂದು ಹೇಳಿ ತನ್ನ ಗದೆಯನ್ನು ತೆಗೆದುಕೊಂಡು ಹೊರಟನು.

ಅರ್ಥ:
ಹಿರಿದು: ದೊಡ್ಡದು, ಶ್ರೇಷ್ಠ; ಸೊಗಸು: ಚೆಲುವು; ಪೂರ್ವ: ಮೂಡಣ; ಪರಿಮಳ: ಸುಗಂಧ; ಕೇಳಿ:ವಿನೋದ; ಸರಸಿಜ: ಕಮಲ; ತಂದು: ಪಡೆದು; ಮನೋಗತ: ಮನಸ್ಸಿನಲ್ಲಿರುವ, ಅಭಿಪ್ರಾಯ; ವ್ಯಥೆ: ಯಾತನೆ; ಪರಿಹರಿಸು: ನಿವಾರಿಸು; ಅಬುಜ: ಕಮಲ; ವದನ: ಮುಖ; ಕುರುಳ: ಮುಂಗುರುಳು; ಉಗುರು: ನಖ; ತಿದ್ದು: ಸರಿಪಡಿಸು; ಸರಸಿಜ: ಕಮಲ; ತಹೆ: ತರುವೆ; ಕೊಂಡು: ತೆಗೆದುಕೊ; ಗಧೆ: ಮುದ್ಗರ;

ಪದವಿಂಗಡಣೆ:
ಹಿರಿದು +ಸೊಗಸಾಯ್ತ್+ಎನಗ್+ಪೂರ್ವದ
ಪರಿಮಳದ+ ಕೇಳಿಯಲಿ +ನೀನ್ +ಆ
ಸರಸಿಜವ +ತಂದಿತ್ತು +ತನ್ನ +ಮನೋಗತ+ ವ್ಯಥೆಯ
ಪರಿಹರಿಪುದ್+ಎನಲ್+ಅಬುಜವದನೆಯ
ಕುರುಳನ್+ಉಗುರಲಿ +ತಿದ್ದಿದನು +ತತ್
ಸರಸಿಜವ +ತಹೆನೆನುತ +ಕೊಂಡನು +ನಿಜ +ಗದಾಯುಧವ

ಅಚ್ಚರಿ:
(೧) ಭೀಮನ ಪ್ರೀತಿಯನ್ನು ತೋರುವ ಪರಿ – ಅಬುಜವದನೆಯ ಕುರುಳನಗುರಲಿ ತಿದ್ದಿದನು
(೨) ಸರಸಿಜ, ಅಬುಜ – ಸಮನಾರ್ಥಕ ಪದ

ನಿಮ್ಮ ಟಿಪ್ಪಣಿ ಬರೆಯಿರಿ