ಪದ್ಯ ೧೫: ಹನುಮಂತ ಭೀಮನಲ್ಲಿ ಯಾವ ಪ್ರಶ್ನೆಯನ್ನು ಕೇಳಿದ?

ಮುರಿಯದಂತಿರೆ ಲಘುವಿನಲಿ ಹೆ
ಮ್ಮರನನೊಯ್ಯನೆ ನೆಮ್ಮಿ ಕುಳ್ಳಿ
ರ್ದರಿದಿಶಾಪಟ ನುಡಿಸಿದನು ಪವಮಾನ ನಂದನನ
ಭರವಿದೆಲ್ಲಿಗೆ ಮರ್ತ್ಯನೋ ಖೇ
ಚರನೊ ದೈತ್ಯನೊದಿವಿಜನೋಕಿ
ನ್ನರನೊ ನೀನಾರೆಂದು ಭೀಮನು ನುಡಿಸಿದನು ಹನುಮ (ಅರಣ್ಯ ಪರ್ವ, ೧೧ ಸಂಧಿ, ೧೫ ಪದ್ಯ)

ತಾತ್ಪರ್ಯ:
ಆ ಮೇಲೆ ಹನುಮಂತನು ಮಗ್ಗುಲಾಗಿ ಒಂದು ದೊಡ್ಡ ಮರಕ್ಕೆ ಬೆನ್ನು ನೀಡಿ ಸ್ವಲ್ಪ ಆ ಮರವು ಬೀಳದಂತೆ, ಅವನ ದೇಹವು ತಗುಲಿರುವಂತೆ ಕುಳಿತುಕೊಂಡನು. ವೇಗವಾಗಿ ಬರುತ್ತಿದ್ದ ಭೀಮನನ್ನು ಕಂಡು ಎಲ್ಲಿಗೆ ಹೋಗುತ್ತಿರುವೆ, ನೀನು ಮನುಷ್ಯನೋ, ಖೇಚರನೋ, ರಾಕ್ಷಸನೋ, ದೇವನೋ, ಕಿಂಪುರುಷನೋ, ನೀನಾರೆಂದು ಹನುಮನು ಪ್ರಶ್ನಿಸಿದನು.

ಅರ್ಥ:
ಮುರಿ: ಸೀಳು; ಲಘು: ಹಗುರ; ಹೆಮ್ಮರ: ದೊಡ್ಡ ವೃಕ್ಷ; ಒಯ್ಯನೆ: ಮೆಲ್ಲಗೆ; ನೆಮ್ಮು: ಆಧಾರವನ್ನು ಪಡೆ; ಕುಳ್ಳಿರ್ದ: ಆಸೀನನಾದ; ಅರಿ: ವೈರಿ; ದಿಶಾಪಟ: ಎಲ್ಲಾ ದಿಕ್ಕುಗಳಿಗೆ ಓಡಿಸುವವ; ನುಡಿಸು: ಮಾತಾಡು; ಪವಮಾನ: ಗಾಳಿ, ವಾಯು; ನಂದನ: ಮಗ; ಭರ: ರಭಸ; ಮರ್ತ್ಯ: ಮನುಷ್ಯ; ಖೇಚರ: ಗಂಧರ್ವ; ದೈತ್ಯ: ರಾಕ್ಷಸ; ದಿವಿಜ: ಸುರ, ದೇವತೆ; ಕಿನ್ನರ: ಕಿಂಪುರುಷ; ನುಡಿಸು: ಮಾತಾಡು;

ಪದವಿಂಗಡಣೆ:
ಮುರಿಯದಂತಿರೆ +ಲಘುವಿನಲಿ +ಹೆ
ಮ್ಮರನನ್+ಒಯ್ಯನೆ +ನೆಮ್ಮಿ +ಕುಳ್ಳಿರ್ದ್
ಅರಿದಿಶಾಪಟ+ ನುಡಿಸಿದನು +ಪವಮಾನ +ನಂದನನ
ಭರವಿದ್+ಎಲ್ಲಿಗೆ +ಮರ್ತ್ಯನೋ +ಖೇ
ಚರನೊ+ ದೈತ್ಯನೊ+ದಿವಿಜನೋ+ಕಿ
ನ್ನರನೊ +ನೀನಾರೆಂದು +ಭೀಮನು +ನುಡಿಸಿದನು +ಹನುಮ

ಅಚ್ಚರಿ:
(೧) ಹನುಮನನ್ನು ಕರೆದ ಪರಿ – ಅರಿದಿಶಾಪಟ
(೨) ಹಲವು ಬಗೆಯ ಜನರ ಪರಿಚಯ – ಮರ್ತ್ಯ, ಖೇಚರ, ದೈತ್ಯ, ದಿವಿಜ, ಕಿನ್ನರ

ನಿಮ್ಮ ಟಿಪ್ಪಣಿ ಬರೆಯಿರಿ