ಪದ್ಯ ೨೧: ಭೀಮನೇಕೆ ಮರುಗಿದನು?

ಮಿಡುಕದದು ಮಹಿಯಿಂದ ಭೀಮನ
ಕಡುಹು ನಿಮ್ದುದು ಬಾಲದಲಿ ತುದಿ
ನಡುಗದನಿಲಜನಂಗವಟ್ಟದ ಕಡುಹು ಕಂಪಿಸದು
ತೊಡಕೆ ಕೆಟ್ಟುದು ಕಾರ್ಯ ದುರ್ಬಲ
ನೊಡನೆ ಭಂಗವ್ಯಾಪ್ತಿ ತನ್ನನು
ಸುಡಲೆನುತ ಹಿಮ್ಮೆಟ್ಟಿ ಮಮ್ಮಲ ಮರುಗಿದನು ಭೀಮ (ಅರಣ್ಯ ಪರ್ವ, ೧೧ ಸಂಧಿ, ೨೧ ಪದ್ಯ)

ತಾತ್ಪರ್ಯ:
ಹನುಮನ ಬಾಲವು ಭೂಮಿಯಿಂದ ಒಂದು ಚೂರು ಅಲುಗಾಡಲಿಲ್ಲ. ಭೀಮನ ಶಕ್ತಿಯು ಅದರೆದುರು ನಿಂತು ಹೋಯಿತು. ಬಾಲದ ತುದಿಯೂ ನಡುಗಲಿಲ್ಲ. ಭೀಮನ ಸರ್ವಶಕ್ತಿಯ ಪ್ರಯೋಗವೂ ನಿಷ್ಫಲವಾಯಿತು. ಆಗ ಭೀಮನು ಕಾರ್ಯದಲ್ಲಿ ತೊಡಗಿ ಕೆಟ್ಟು ಹೋದೆ, ದುರ್ಬಲನ ಜೊತೆ ಹೋರಿ ಅವಮಾನಿತನಾದೆ, ಹೀಗೆ ಯತ್ನದಲ್ಲಿ ಸೋತ ನನ್ನನ್ನು ಸುಡಬೇಕು ಎಂದುಕೊಂಡು ಹಿಂದಕ್ಕೆ ಸರಿದು ತುಂಬ ತಳಮಳಗೊಂಡನು.

ಅರ್ಥ:
ಮಿಡುಕು: ಅಲುಗಾಟ, ಚಲನೆ; ಮಹಿ: ಭೂಮಿ; ಕಡುಹು: ಸಾಹಸ, ಹುರುಪು; ನಿಂದು: ನಿಲ್ಲು; ಬಾಲ: ಪುಚ್ಛ; ತುದಿ: ಅಗ್ರಭಾಗ; ನಡುಗು: ನಡುಕ, ಕಂಪನ; ಅನಿಲಜ: ವಾಯುಪುತ್ರ (ಭೀಮ); ಅಂಗವಟ್ಟ: ಶರೀರ; ಕಂಪಿಸು: ಅಲುಗಾಡು; ತೊಡಕು: ಗೋಜು, ಗೊಂದಲ; ಕೆಟ್ಟು: ಸರಿಯಿಲ್ಲದ; ಕಾರ್ಯ: ಕೆಲಸ; ದುರ್ಬಲ: ಶಕ್ತಿಹೀನ; ಭಂಗ: ಚೂರು, ಮುರಿಯುವಿಕೆ; ವ್ಯಾಪ್ತಿ: ಹರಹು; ಸುಡು: ದಹಿಸು; ಹಿಮ್ಮೆಟ್ಟು: ಹಿಂದೆಸರಿ; ಮಮ್ಮಲ: ಅತಿಶಯವಾಗಿ, ವಿಶೇಷವಾಗಿ; ಮರುಗು: ತಳಮಳ;

ಪದವಿಂಗಡಣೆ:
ಮಿಡುಕದದು +ಮಹಿಯಿಂದ +ಭೀಮನ
ಕಡುಹು +ನಿಂದುದು +ಬಾಲದಲಿ+ ತುದಿ
ನಡುಗದ್+ಅನಿಲಜನ್+ಅಂಗವಟ್ಟದ +ಕಡುಹು +ಕಂಪಿಸದು
ತೊಡಕೆ +ಕೆಟ್ಟುದು +ಕಾರ್ಯ +ದುರ್ಬಲ
ನೊಡನೆ +ಭಂಗವ್ಯಾಪ್ತಿ +ತನ್ನನು
ಸುಡಲೆನುತ +ಹಿಮ್ಮೆಟ್ಟಿ +ಮಮ್ಮಲ +ಮರುಗಿದನು +ಭೀಮ

ಅಚ್ಚರಿ:
(೧) ಭಿಮನು ಕೊರಗಿದ ಪರಿ – ತೊಡಕೆ ಕೆಟ್ಟುದು ಕಾರ್ಯ ದುರ್ಬಲ ನೊಡನೆ ಭಂಗವ್ಯಾಪ್ತಿ ತನ್ನನು ಸುಡಲೆನುತ ಹಿಮ್ಮೆಟ್ಟಿ ಮಮ್ಮಲ ಮರುಗಿದನು ಭೀಮ

ನಿಮ್ಮ ಟಿಪ್ಪಣಿ ಬರೆಯಿರಿ