ಪದ್ಯ ೨೪: ದ್ರೌಪದಿಯು ಕೃಷ್ಣನನ್ನು ಹೇಗೆ ಆರಾಧಿಸಿದಳು?

ಶ್ರೀ ರಮಾವರ ದೈತ್ಯಕುಲ ಸಂ
ಹಾರ ಹರಿ ಭವ ಜನನ ಮರಣಕು
ಠಾರ ನಿಗಮವಿದೂರ ಸಚರಾಚರ ಜಗನ್ನಾಥ
ಚಾರುಗುಣ ಗಂಭೀರ ಕರುಣಾ
ಕಾರ ವಿಹಿತ ವಿಚಾರ ಪಾರಾ
ವಾರ ಹರಿ ಮೈದೋರೆನುತ ಹಲುಬಿದಳು ಲಲಿತಾಂಗಿ (ಅರಣ್ಯ ಪರ್ವ, ೧೭ ಸಂಧಿ, ೨೪ ಪದ್ಯ)

ತಾತ್ಪರ್ಯ:
ಲಕ್ಷ್ಮೀ ದೇವಿಯ ಪತಿಯೇ, ರಾಕ್ಷಸ ಕುಲ ಸಂಹಾರಕನೇ, ಹುಟ್ತು ಸಾವಿನ ಚಕ್ರರೂಪವಾದ ಸಂಸಾರ ವೃಕ್ಷಕ್ಕೆ ಕೊಡಲಿಯಾದವನೇ, ವೇದಗಳಿಗೆ ನಿಲುಕದವನೇ, ಸಮಸ್ತ ಜೀವಿಸುವ ಮತ್ತು ನಿರ್ಜೀವ ವಸ್ತುಗಳ ಜಗತ್ತಿನ ಈಶ್ವರನೇ, ಕಲ್ಯಾಣ ಗುಣಗುಂಭೀರನೇ, ಕರುಣೆಯೇ ಮೂರ್ತಿಯಾದಂತಿರುವವನೇ, ಸಕ್ರಮ ವಿಚಾರದ ಎಲ್ಲೆಯಲ್ಲಿ ದೊರಕುವವನೇ, ಶ್ರೀಕೃಷ್ಣನು ಪ್ರತ್ಯಕ್ಷನಾಗು ಎಂದು ದ್ರೌಪದಿ ಬೇಡಿದಳು.

ಅರ್ಥ:
ರಮಾವರ: ಲಕ್ಷಿಯ ಪಿತ; ದೈತ್ಯ: ರಾಕ್ಷಸ; ಕುಲ: ವಂಶ; ಸಂಹಾರ: ನಾಶ; ಭವ: ಇರುವಿಕೆ, ಅಸ್ತಿತ್ವ; ಜನನ: ಹುಟ್ಟು; ಮರಣ: ಸಾವು; ಕುಠಾರ: ಕೊಡಲಿ; ನಿಗಮ: ಶೃತಿ, ವೇದ; ವಿದೂರ: ನಿಲುಕದವ; ಚರಾಚರ: ಜೀವವಿರುವ ಮತ್ತು ಇಲ್ಲದಿರುವ; ಜಗನ್ನಾಥ: ಜಗತ್ತಿನ ಒಡೆಯ; ಚಾರು: ಸುಂದರ; ಗುಣ: ಸ್ವಭಾವ; ಗಂಭೀರ: ಆಳವಾದ, ಗಹನವಾದ; ಕರುಣ: ದಯೆ; ವಿಹಿತ: ಯೋಗ್ಯ; ವಿಚಾರ: ವಿಷಯ, ಸಂಗತಿ; ಪಾರಾವಾರ: ಸಮುದ್ರ, ಕಡಲು, ಎಲ್ಲೆ; ಮೈದೋರು: ಕಾಣಿಸಿಕೋ, ಪ್ರತ್ಯಕ್ಷನಾಗು; ಹಲುಬು: ಬೇಡು; ಲಲಿತಾಂಗಿ: ಬಳ್ಳಿಯಂತೆ ದೇಹವುಳ್ಳವಳು, ಸುಂದರಿ (ದ್ರೌಪದಿ)

ಪದವಿಂಗಡಣೆ:
ಶ್ರೀ+ ರಮಾವರ +ದೈತ್ಯಕುಲ +ಸಂ
ಹಾರ +ಹರಿ +ಭವ +ಜನನ +ಮರಣ+ಕು
ಠಾರ +ನಿಗಮವಿದೂರ +ಸಚರಾಚರ +ಜಗನ್ನಾಥ
ಚಾರುಗುಣ+ ಗಂಭೀರ +ಕರುಣಾ
ಕಾರ +ವಿಹಿತ +ವಿಚಾರ +ಪಾರಾ
ವಾರ +ಹರಿ +ಮೈದೋರೆನುತ +ಹಲುಬಿದಳು +ಲಲಿತಾಂಗಿ

ಅಚ್ಚರಿ:
(೧) ಸಂಹಾರ, ಕುಠಾರ, ಪಾರಾವಾರ – ಪ್ರಾಸಪದ
(೨) ಕೃಷ್ಣನ ಗುಣಗಾನ – ದೈತ್ಯಕುಲ ಸಂಹಾರ, ನಿಗಮವಿದೂರ, ಚಾರುಗುಣ, ಗಂಭೀರ, ವಿಹಿತ ವಿಚಾರ, ಪಾರಾವಾರ

ನಿಮ್ಮ ಟಿಪ್ಪಣಿ ಬರೆಯಿರಿ