ಧರೆಯ ಭಂಡಾರವನು ರಥವನು
ಕರಿತುರಗರಥಪಾಯದಳವನು
ಕುರುಕುಲಾಗ್ರಣಿ ಸೆಳೆದುಕೊಂಡನು ನಿಮ್ಮ ಹೊರವಡಿಸಿ
ದುರುಳ ಕೀಚಕಗೆನ್ನ ಕೊಟ್ಟಿರಿ
ಪರಿಮಿತದಲಿರವಾಯ್ತು ನಿಮ್ಮೈ
ವರಿಗೆ ಲೇಸಾಯ್ತಕಟಯೆಂದಬುಜಾಕ್ಷಿ ಹಲುಬಿದಳು (ವಿರಾಟ ಪರ್ವ, ೩ ಸಂಧಿ, ೬೩ ಪದ್ಯ)
ತಾತ್ಪರ್ಯ:
ಭೂಮಿ, ಕೋಶ, ಚತುರಂಗ ಸೈನ್ಯ, ಇವೆಲ್ಲವೂ ದುರ್ಯೋಧನನು ನಿಮ್ಮಿಂದ ಕಿತ್ತುಕೊಂಡು ಹೊರಯಟ್ಟಿದನು, ಉಳಿದವಳು ನಾನು, ನನ್ನನ್ನು ಈಗ ಕೀಚಕನಿಗೆ ಕೊಟ್ಟಿರಿ, ಐವರೇ ಇರಲು ನಿಮಗೆ ಅನುಕೂಲವಾಯ್ತು, ರಾಜ್ಯವಾಗಲೀ, ಹೆಂಡತಿಯಾಗಲೀ ನಿಮಗೆ ಭೂಷಣವಲ್ಲ ಅಯ್ಯೋ ಎಂದು ದ್ರೌಪದಿಯು ದುಃಖಿಸಿದಳು.
ಅರ್ಥ:
ಧರೆ: ಭೂಮಿ; ಭಂಡಾರ: ಬೊಕ್ಕಸ, ಖಜಾನೆ; ರಥ: ತೇರು; ಕರಿ: ಆನೆ; ತುರಗ: ಕುದುರೆ; ಪಾಯದಳ: ಸೈನಿಕರು; ಕುಲ: ವಂಶ; ಅಗ್ರಣಿ: ಶ್ರೇಷ್ಠ, ಮೊದಲಿಗ; ಸೆಳೆ: ವಶಪಡಿಸಿಕೊಳ್ಳು; ಹೊರವಡಿಸು: ದೂರವಿಟ್ಟನು; ದುರುಳ: ದುಷ್ಟ; ಕೊಟ್ಟು: ನೀಡು; ಪರಿಮಿತ: ಮಿತ, ಸ್ವಲ್ಪವಾದ; ಇರವು: ಜೀವಿಸು, ಇರು; ಲೇಸು: ಒಳಿತು; ಅಕಟ: ಅಯ್ಯೋ; ಅಬುಜಾಕ್ಷಿ: ಕಮಲದಂತ ಕಣ್ಣುಳ್ಳವಳು; ಹಲುಬು: ದುಃಖಿಸು;
ಪದವಿಂಗಡಣೆ:
ಧರೆಯ +ಭಂಡಾರವನು +ರಥವನು
ಕರಿ+ತುರಗ+ರಥ+ಪಾಯದಳವನು
ಕುರುಕುಲಾಗ್ರಣಿ +ಸೆಳೆದುಕೊಂಡನು +ನಿಮ್ಮ +ಹೊರವಡಿಸಿ
ದುರುಳ +ಕೀಚಕಗ್+ಎನ್ನ +ಕೊಟ್ಟಿರಿ
ಪರಿಮಿತದಲ್+ಇರವಾಯ್ತು +ನಿಮ್ಮೈ
ವರಿಗೆ +ಲೇಸಾಯ್ತ್+ಅಕಟ+ಎಂದ್+ಅಬುಜಾಕ್ಷಿ +ಹಲುಬಿದಳು
ಅಚ್ಚರಿ:
(೧) ಪಾಂಡವರನ್ನು ಹಂಗಿಸುವ ಪರಿ – ಪರಿಮಿತದಲಿರವಾಯ್ತು ನಿಮ್ಮೈವರಿಗೆ