ಖೇದವೇಕೆಲೆ ಮಗನೆ ನಿನ್ನೋ
ಪಾದಿಯಲಿ ಸುಚರಿತ್ರನಾವನು
ಮೇದಿನಿಯೊಳಾ ಮಾತು ಸಾಕೈ ಕ್ಷತ್ರಧರ್ಮವನು
ಆದರಿಸುವುದೆ ಧರ್ಮ ನಿನಗಪ
ವಾದ ಪಾತಕವಿಲ್ಲ ಸುಕೃತ
ಕ್ಕೀ ದಯಾಂಬುಧಿ ಕೃಷ್ಣ ಹೊಣೆ ನಿನಗಂಜಲೇಕೆಂದ (ಭೀಷ್ಮ ಪರ್ವ, ೧೦ ಸಂಧಿ, ೨೧ ಪದ್ಯ)
ತಾತ್ಪರ್ಯ:
ಭೀಷ್ಮನು ಧರ್ಮಜನನ್ನು ಸಮಾಧಾನಪಡಿಸಿ, ಮಗನೇ, ಏಕೆ ದುಃಖಿಸುವೆ? ನಿನ್ನಂತಹ ಸುಚರಿತ್ರರು, ಸನ್ಮಾರ್ಗದಲ್ಲಿ ನಡೆಯುವವರು ಯಾರಿದ್ದಾರೆ? ಆ ಮಾತು ಸಾಕು, ಕ್ಷತ್ರಿಯ ಧರ್ಮವನ್ನು ಆಚರಿಸಬೇಕಾದುದೇ ಕರ್ತವ್ಯ. ನಿನಗೆ ಅಪವಾದ ಹೊರವು ಪಾಪ ಬರುವುದಿಲ್ಲ. ನಿನ್ನ ಪುಣ್ಯ ಪಾಪಗಳ ಹೊಣೆಯು ದಯಾನಿಧಿಯಾದ ಶ್ರೀಕೃಷ್ಣನ ಮೇಲಿದೆ ಎಂದು ಭೀಷ್ಮರು ಹೇಳಿದರು.
ಅರ್ಥ:
ಖೇದ: ದುಃಖ; ಮಗ: ಸುತ; ಉಪಾಧಿ: ಧರ್ಮದ ವಿಷಯವಾಗಿ ಮಾಡುವ ಚಿಂತನೆ; ಸುಚರಿತ್ರ: ಒಳ್ಳೆಯ ನಡತೆಯುಳ್ಳವ; ಮೇದಿನಿ: ಭೂಮಿ; ಸಾಕು: ನಿಲ್ಲಿಸು; ಕ್ಷತ್ರ: ಕ್ಷತ್ರಿಯ; ಧರ್ಮ: ಧಾರಣೆ ಮಾಡಿದುದು; ಆದರಿಸು: ಗೌರವಿಸು; ಅಪವಾದ: ನಿಂದನೆ; ಪಾತಕ: ಪಾಪ; ಸುಕೃತ: ಒಳ್ಳೆಯ ನಡತೆ; ದಯಾಂಬುಧಿ: ಕರುಣಾಸಾಗರ; ಹೊಣೆ: ಜವಾಬ್ದಾರಿ; ಅಂಜು: ಹೆದರು;
ಪದವಿಂಗಡಣೆ:
ಖೇದವ್+ಏಕೆಲೆ +ಮಗನೆ +ನಿನ್ನ
ಉಪಾದಿಯಲಿ +ಸುಚರಿತ್ರನ್+ಆವನು
ಮೇದಿನಿಯೊಳ್+ಆ+ ಮಾತು +ಸಾಕೈ+ ಕ್ಷತ್ರ+ಧರ್ಮವನು
ಆದರಿಸುವುದೆ +ಧರ್ಮ +ನಿನಗ್+ಅಪ
ವಾದ +ಪಾತಕವಿಲ್ಲ+ ಸುಕೃತಕ್+
ಈ+ ದಯಾಂಬುಧಿ +ಕೃಷ್ಣ +ಹೊಣೆ +ನಿನಗ್+ಅಂಜಲೇಕೆಂದ
ಅಚ್ಚರಿ:
(೧) ಧರ್ಮಜನಿಗೆ ಯಾವುದು ಧರ್ಮ? – ಕ್ಷತ್ರಧರ್ಮವನು ಆದರಿಸುವುದೆ ಧರ್ಮ
(೨) ಧರ್ಮಜನಿಗೆ ಅಭಯವನ್ನು ಹೇಳುವ ಪರಿ – ನಿನಗಪವಾದ ಪಾತಕವಿಲ್ಲ