ಪದ್ಯ ೩೮: ಭೀಮನೊಡನೆ ಯಾರು ಯುದ್ಧಕ್ಕಿಳಿದರು?

ಭೀಮನಿನ್ನ ರೆಘಳಿಗೆಯಲಿ ನಿ
ರ್ನಾಮನೋ ತಡವಿಲ್ಲ ದಮ್ತಿಯ
ತಾಮಸಿಕೆ ಘನ ತೆಗಿಯಿ ತಮ್ಮನನೆನುತ ಕಳವಳಿಸೆ
ಭೂಮಿಪತಿ ಕೈ ಕೊಂಡನೊಡನೆ ಸ
ನಾಮರೈದಿತು ನಕುಲ ಸಾತ್ಯಕಿ
ಭೀಮಸುತನಭಿಮನ್ಯು ದ್ರುಪದ ಶಿಖಂಡಿ ಕೈಕೆಯರು (ದ್ರೋಣ ಪರ್ವ, ೩ ಸಂಧಿ, ೩೮ ಪದ್ಯ)

ತಾತ್ಪರ್ಯ:
ಭೀಮನು ಇನ್ನು ಅರೆಗಳಿಗೆಯಲ್ಲಿ ನಿರ್ನಾಮನಾಗುತ್ತಾನೆ. ಹೆಚ್ಚು ಹೊತ್ತು ಬೇಕಾಗಿಲ್ಲ. ಆನೆಯ ಬಲ ಕೋಪಗಳು ಅತಿಶಯವಾಗಿವೆ. ಅವನನ್ನು ಯುದ್ಧದಿಂದ ಹಿಂದಕ್ಕೆ ತೆಗೆಸಿ ಎನ್ನುತ್ತಾ ಧರ್ಮಜನು ಯುದ್ಧಕ್ಕೆ ಮುಂದಾಗಲು, ನಕುಲ, ಸಾತ್ಯಕಿ, ಘಟೋತ್ಕಚ, ಅಭಿಮನ್ಯು, ದ್ರುಪದ, ಶಿಖಂಡಿ, ಕೈಕೆಯರು ಅವನೊಡನೆ ಯುದ್ಧಕ್ಕಿಳಿದರು.

ಅರ್ಥ:
ಅರೆ: ಅರ್ಧ; ಘಳಿಗೆ: ಸಮಯ; ನಿರ್ನಾಮ: ನಾಶ; ತಡ: ನಿಧಾನ; ದಂತಿ: ಆನೆ; ತಾಮಸ: ಜಾಡ್ಯ, ಜಡತೆ; ಘನ: ಶ್ರೇಷ್ಠ; ತೆಗೆ: ಹೊರತರು; ತಮ್ಮ: ಸಹೋದರ; ಕಳವಳ: ಗೊಂದಲ; ಭೂಮಿಪತಿ: ರಾಜ; ಒಡನೆ: ಕೂಡಲೆ; ಸನಾಮ: ಪ್ರಸಿದ್ಧವಾದ ಹೆಸರುಳ್ಳ; ಐದು: ಬಂದು ಸೇರು; ಸುತ: ಮಗ;

ಪದವಿಂಗಡಣೆ:
ಭೀಮನ್+ಇನ್ನ್+ಅರೆ+ಘಳಿಗೆಯಲಿ +ನಿ
ರ್ನಾಮನೋ +ತಡವಿಲ್ಲ+ ದಂತಿಯ
ತಾಮಸಿಕೆ +ಘನ +ತೆಗಿಯಿ +ತಮ್ಮನನ್+ಎನುತ +ಕಳವಳಿಸೆ
ಭೂಮಿಪತಿ +ಕೈ +ಕೊಂಡನೊಡನೆ +ಸನಾಮರ್
ಐದಿತು +ನಕುಲ +ಸಾತ್ಯಕಿ
ಭೀಮಸುತನ್+ಅಭಿಮನ್ಯು +ದ್ರುಪದ +ಶಿಖಂಡಿ +ಕೈಕೆಯರು

ಅಚ್ಚರಿ:
(೧) ಭೀಮ – ೧, ೬ ಸಾಲಿನ ಮೊದಲ ಪದ

ನಿಮ್ಮ ಟಿಪ್ಪಣಿ ಬರೆಯಿರಿ