ಪದ್ಯ ೫೨: ಕರ್ಣನೇಕೆ ಕೋಪಗೊಂಡನು?

ಗದೆಯ ಹೊಯ್ಲಲಿ ನೊಂದು ಕೋಪದೊ
ಳದಿರೆನುತ ಸೈಗೆಡೆದ ರೋಮದ
ಹೊದರುಗಳ ಬಿಡುಗಣ್ಣ ಕೆಂಪಿನ ಕುಣಿವ ಮೀಸೆಗಳ
ಕುದಿದ ಹೃದಯದ ಕಾದ ದೇಹದ
ಕದನಗಲಿ ರವಿಸೂನು ಮೇಲಿ
ಕ್ಕಿದನು ಫಡ ಹೋಗದಿರು ಹೋಗದಿರೆನುತ ತೆಗೆದೆಚ್ಚ (ದ್ರೋಣ ಪರ್ವ, ೬ ಸಂಧಿ, ೫೨ ಪದ್ಯ)

ತಾತ್ಪರ್ಯ:
ಗದೆಯ ಬಡಿತದಿಂದ ನೊಂದು ಕರ್ಣನು ಬಹಳ ಕೋಪಗೊಂಡನು. ಅವನ ರೋಮಗಳು ಜೋಲು ಬಿದ್ದವು. ನಟ್ಟ ನೋಟದಿಂದ ನೋಡುವ ತನ್ನ ಕಣ್ಣುಗಳು ಕೆಂಪಾಗಿ ಕೋಪವನ್ನು ಕಾರಿದವು. ಅವನ ಮೀಸೆಗಳು ಕುಣಿದವು. ಹೃದಯವು ಕುದಿಯಿತು. ದೇಹ ಕಾವೇರಿತು. ಆಗ ಕರ್ಣನು ಹೋಗಬೇಡ ಹೋಗಬೇಡ ಎಂದು ಕೂಗಿ ಬಾಣಗಳಿಂದ ಅಭಿಮನ್ಯುವನ್ನು ಹೊಡೆದನು.

ಅರ್ಥ:
ಗದೆ: ಮುದ್ಗರ; ಹೊಯ್ಲು: ಏಟು, ಹೊಡೆತ; ನೊಂದು: ನೋವು; ಕೋಪ: ಖತಿ; ಅದಿರು: ನಡುಕ, ಕಂಪನ; ಸೈಗೆಡೆ: ನೇರವಾಗಿ ಕೆಳಕ್ಕೆ ಬೀಳು; ರೋಮ: ಕೂದಲು; ಹೊದರು: ಗುಂಪು, ಸಮೂಹ; ಬಿಡುಗಣ್ಣ: ಬಿಟ್ಟಕಣ್ಣು; ಕೆಂಪು: ರಕ್ತವರ್ಣ; ಕುಣಿ: ನರ್ತಿಸು; ಕುದಿ: ಮರಳು; ಹೃದಯ: ಎದೆ; ಕಾದ: ಬಿಸಿಯಾದ; ದೇಹ: ತನು; ಕದನ: ಯುದ್ಧ; ಕಲಿ: ಶೂರ; ರವಿ: ಸೂರ್ಯ; ಸೂನು: ಮಗ; ಫಡ: ತಿರಸ್ಕಾರದ ಮಾತು; ಹೋಗು: ತೆರಳು; ಎಚ್ಚು: ಬಾಣ ಪ್ರಯೋಗ ಮಾಡು;

ಪದವಿಂಗಡಣೆ:
ಗದೆಯ +ಹೊಯ್ಲಲಿ +ನೊಂದು +ಕೋಪದೊಳ್
ಅದಿರೆನುತ +ಸೈಗೆಡೆದ +ರೋಮದ
ಹೊದರುಗಳ +ಬಿಡುಗಣ್ಣ +ಕೆಂಪಿನ +ಕುಣಿವ +ಮೀಸೆಗಳ
ಕುದಿದ +ಹೃದಯದ +ಕಾದ+ ದೇಹದ
ಕದನ+ಕಲಿ +ರವಿಸೂನು +ಮೇಲಿ
ಕ್ಕಿದನು +ಫಡ +ಹೋಗದಿರು +ಹೋಗದಿರ್+ಎನುತ+ ತೆಗೆದ್+ಎಚ್ಚ

ಅಚ್ಚರಿ:
(೧) ಕೋಪವನ್ನು ವರ್ಣಿಸುವ ಪರಿ – ಬಿಡುಗಣ್ಣ ಕೆಂಪಿನ ಕುಣಿವ ಮೀಸೆಗಳ ಕುದಿದ ಹೃದಯದ ಕಾದ ದೇಹದ

ನಿಮ್ಮ ಟಿಪ್ಪಣಿ ಬರೆಯಿರಿ