ನರನ ಕರೆ ಕರೆ ಸಿಂಧುರಾಜನ
ಹರಿಬವೆಮ್ಮದು ತಮ್ಮದೆಂದ
ಬ್ಬರಿಸಿ ನೂಕಿತು ಕದನ ಲಂಪಟರಾಗಿ ಪಟುಭಟರು
ಸರಿಸದಲಿ ಲಟಕಟಿಸಿ ಮೋಹರ
ಮರಳಿ ನಿಂದುದು ರಣಕೆ ರಜನೀ
ಚರರ ಥಟ್ಟಣೆ ಧಾತುಗೆಡಿಸಿತು ದಿಟ್ಟರುಬ್ಬಟೆಯ (ದ್ರೋಣ ಪರ್ವ, ೧೫ ಸಂಧಿ, ೨೩ ಪದ್ಯ)
ತಾತ್ಪರ್ಯ:
ಯುದ್ಧ ಲಂಪಟರಾದ ವೀರರು, ಸೈಂಧವನ ಸೇಡು ನಮ್ಮದು, ಅರ್ಜುನನನ್ನು ಕರೆಯಿರಿ ಎಂದು ಅಬ್ಬರಿಸಿ ನುಗ್ಗಿದರು. ಒಂದೇ ಸಾಲಿನಲ್ಲಿ ಉತ್ಸಾಹಿಸಿ ಸೈನ್ಯವು ರಾತ್ರಿಯಲ್ಲಿ ನಿಂತಿತು. ಅವರ ಉತ್ಸಾಹವು ಶತ್ರು ವೀರರ ಧೈರ್ಯವನ್ನು ಅಲುಗಾಡಿಸಿತು.
ಅರ್ಥ:
ನರ: ಅರ್ಜುನ; ಕರೆ: ಬರೆಮಾಡು; ರಾಜ: ಅರಸ; ಹರಿಬ: ಕೆಲಸ, ಕಾರ್ಯ; ಅಬ್ಬರಿಸು: ಗರ್ಜಿಸು; ನೂಕು: ತಳ್ಳು; ಕದನ: ಯುದ್ಧ; ಲಂಪಟ: ವಿಷಯಾಸಕ್ತ, ಕಾಮುಕ; ಪಟುಭಟ: ಪರಾಕ್ರಮಿ; ಸರಿಸ:ನೇರವಾಗಿ, ಸರಳವಾಗಿ; ಲಟಕಟ: ಉದ್ರೇಕ, ಚಕಿತನಾಗು; ಮೋಹರ: ಯುದ್ಧ; ಮರಳಿ: ಹಿಂದಿರುಗು ನಿಂದು: ನಿಲ್ಲು; ರಣ: ಯುದ್ಧ; ರಜನೀ: ರಾತ್ರಿ; ಚರರು: ಓಡಾಡುವ; ಥಟ್ಟಣೆ: ಗುಂಪು; ಧಾತು: ತೇಜಸ್ಸು, ಮೂಲವಸ್ತು; ಕೆಡಿಸು: ಹಾಳುಮಾಡು; ದಿಟ್ಟ: ವೀರ; ಉಬ್ಬಟೆ: ಅತಿಶಯ, ಹಿರಿಮೆ;
ಪದವಿಂಗಡಣೆ:
ನರನ +ಕರೆ +ಕರೆ +ಸಿಂಧುರಾಜನ
ಹರಿಬವ್+ಎಮ್ಮದು +ತಮ್ಮದೆಂದ್
ಅಬ್ಬರಿಸಿ +ನೂಕಿತು +ಕದನ +ಲಂಪಟರಾಗಿ +ಪಟುಭಟರು
ಸರಿಸದಲಿ +ಲಟಕಟಿಸಿ +ಮೋಹರ
ಮರಳಿ +ನಿಂದುದು +ರಣಕೆ +ರಜನೀ
ಚರರ +ಥಟ್ಟಣೆ +ಧಾತುಗೆಡಿಸಿತು +ದಿಟ್ಟರ್+ಉಬ್ಬಟೆಯ
ಅಚ್ಚರಿ:
(೧) ಶೂರರ ಉತ್ಸಾಹ – ಅಬ್ಬರಿಸಿ ನೂಕಿತು ಕದನ ಲಂಪಟರಾಗಿ ಪಟುಭಟರು
(೨) ಲಟಕಟಿಸಿ, ಲಂಪಟ – ಲ ಕಾರದ ಪದಗಳ ಬಳಕೆ