ಪದ್ಯ ೧೫: ನಾರಾಯಣಾಸ್ತ್ರದ ಪ್ರಕಾಶವು ಹೇಗಿತ್ತು?

ಪ್ರಳಯ ಮೇಘವನೊಡೆವ ರವಿಮಂ
ಡಲ ಸಹಸ್ರದ ರಶ್ಮಿಯೋ ಜಗ
ದಳಿವಿನಲಿ ಝೊಂಪಿಸುವ ಹರನುರಿಗಣ್ಣ ದೀಧಿತಿಯೊ
ಮುಳಿದ ನರಕೇಸರಿಯ ದಾಡೆಯ
ಥಳಥಲತ್ಕಾರವೊ ಮಹಾಸ್ತ್ರದ
ಬೆಳಗೊ ಹೆಸರಿಡಲಾರು ಬಲ್ಲರು ಭೂಪ ಕೇಳೆಂದ (ದ್ರೋಣ ಪರ್ವ, ೧೯ ಸಂಧಿ, ೧೫ ಪದ್ಯ)

ತಾತ್ಪರ್ಯ:
ಪ್ರಳಯ ಮೇಘವನ್ನು ಭೇದಿಸಬಲ್ಲ ಸಹಸ್ರ ಸೂರ್ಯರ ಕಿರಣಗಳೋ, ಪ್ರಳಯಕಾಲದಲ್ಲಿ ಶಿವನು ತೆಗೆಯುವ ಉರಿಗಣ್ಣಿನ ಪ್ರಕಾಶವೋ, ಕೋಪಗೊಂಡ ನರಸಿಂಹನ ಹಲ್ಲುಗಳ ಹೊಳಪೋ ಎಂಬಂತೆ ನಾರಾಯಣಾಸ್ತ್ರದ ಪ್ರಕಾಶ ಹಬ್ಬುತ್ತಿತ್ತು, ಅದನ್ನು ಹೇಗೆಂದು ಹೇಳೋಣ ಎಂದು ಸಂಜಯನು ವಿವರಿಸಿದನು.

ಅರ್ಥ:
ಪ್ರಳಯ: ಕಲ್ಪದ ಕೊನೆಯಲ್ಲಿ ಉಂಟಾಗುವ ಪ್ರಪಂಚದ ನಾಶ, ಅಳಿವು; ಮೇಘ: ಮೋಡ; ಒಡೆವ: ಸೀಳು; ರವಿ: ಸೂರ್ಯ; ಮಂಡಲ: ನಾಡಿನ ಒಂದು ಭಾಗ, ವರ್ತುಲಾಕಾರ; ಸಹಸ್ರ: ಸಾವಿರ; ರಶ್ಮಿ: ಕಾಂತಿ, ಪ್ರಕಾಶ; ಜಗ: ಪ್ರಪಂಚ; ಅಳಿವು: ನಾಶ; ಝೊಂಪಿಸು: ಬೆಚ್ಚಿಬೀಳು; ಹರ: ಶಂಕರ; ಉರಿಗಣ್ಣು: ಬೆಂಕಿಯ ಕಣ್ಣು; ದೀಧಿತಿ: ಹೊಳಪು; ಮುಳಿ: ಸಿಟ್ಟು, ಕೋಪ; ನರಕೇಸರಿ: ನರಸಿಂಹ; ದಾಡೆ: ದವಡೆ, ಒಸಡು; ಥಳ: ಪ್ರಕಾಶ, ಹೊಳಪು; ಮಹಾಸ್ತ್ರ: ಶ್ರೇಷ್ಠವಾದ ಆಯುಧ; ಬೆಳಗು: ಕಾಂತಿ, ಪ್ರಕಾಶ; ಹೆಸರು: ನಾಮ; ಬಲ್ಲರು: ತಿಳಿದವರು; ಭೂಪ: ರಾಜ; ಕೇಳು: ಆಲಿಸು;

ಪದವಿಂಗಡಣೆ:
ಪ್ರಳಯ +ಮೇಘವನ್+ಒಡೆವ +ರವಿ+ಮಂ
ಡಲ +ಸಹಸ್ರದ +ರಶ್ಮಿಯೋ +ಜಗದ್
ಅಳಿವಿನಲಿ +ಝೊಂಪಿಸುವ +ಹರನ್+ಉರಿಗಣ್ಣ+ ದೀಧಿತಿಯೊ
ಮುಳಿದ +ನರಕೇಸರಿಯ +ದಾಡೆಯ
ಥಳಥಳತ್ಕಾರವೊ+ ಮಹಾಸ್ತ್ರದ
ಬೆಳಗೊ +ಹೆಸರಿಡಲಾರು+ ಬಲ್ಲರು +ಭೂಪ +ಕೇಳೆಂದ

ಅಚ್ಚರಿ:
(೧) ರೂಪಕದ ಪ್ರಯೋಗ – ಪ್ರಳಯ ಮೇಘವನೊಡೆವ ರವಿಮಂಡಲ ಸಹಸ್ರದ ರಶ್ಮಿಯೋ ಜಗದಳಿವಿನಲಿ ಝೊಂಪಿಸುವ ಹರನುರಿಗಣ್ಣ ದೀಧಿತಿಯೊ

ನಿಮ್ಮ ಟಿಪ್ಪಣಿ ಬರೆಯಿರಿ