ಪದ್ಯ ೪೨: ಕೃಷ್ಣನು ಭೀಮನಿಗೆ ಏನು ಮಾಡಲು ಹೇಳಿದನು?

ಇವರೊಳುಂಟೇ ಕೈದುವೊತ್ತವ
ರವರನರಸುವೆನೆನುತ ಬರಲಾ
ಪವನಸುತನನು ಥಟ್ಟಿಸಿದನಾ ದನುಜರಿಪು ಮುಳಿದು
ಅವನಿಗಿಳಿದೀಡಾಡಿ ಕಳೆ ಕೈ
ದುವನು ತಾ ಮೊದಲಾಗಿ ನಿಂದಂ
ದವನು ನೋಡೆನಲನಿಲಸುತ ನಸುನಗುತಲಿಂತೆಂದ (ದ್ರೋಣ ಪರ್ವ, ೧೯ ಸಂಧಿ, ೪೨ ಪದ್ಯ)

ತಾತ್ಪರ್ಯ:
ಎದುರಿನಲ್ಲಿ ಎಲ್ಲರೂ ಶಸ್ತ್ರವನ್ನು ತ್ಯಜಿಸಿರುವುದನ್ನು ಕಂಡ ನಾರಾಯಣಾಸ್ತ್ರವು, ಶಸ್ತ್ರವನ್ನು ಹಿಡಿದವರನ್ನು ಹುಡುಕುತ್ತಾ ಬರುತ್ತಿತ್ತು. ಆಗ ಕೃಷ್ಣನು ಭೀಮನಿಗೆ ಕೋಪದಿಂದ, ತನ್ನ ಕೈಯಲ್ಲಿರುವ ಆಯುಧವನ್ನು ಭೂಮಿಗೆ ಎಸೆದು ನನ್ನನ್ನೇ ನೋಡೆಂದು ಹೇಳಲು ಭೀಮನು ನಗುತ್ತಾ ಹೀಗೆ ಉತ್ತರಿಸಿದನು.

ಅರ್ಥ:
ಕೈದು: ಶಸ್ತ್ರ; ಒತ್ತ: ಹಿಡಿದ; ಅಸರು: ಹುಡುಕು; ಬರಲು: ಆಗಮಿಸು; ಪವನಸುತ: ಭೀಮ; ಸುತ: ಮಗ; ಥಟ್ಟು: ಪಕ್ಕ, ಕಡೆ, ಗುಂಪು; ದನುಜರಿಪು: ಕೃಷ್ಣ; ಮುಳಿ: ಸಿಟ್ಟು, ಕೋಪ; ಅವನಿ: ಭೂಮಿ; ಈಡಾಡು: ಕಿತ್ತು, ಒಗೆ, ಚೆಲ್ಲು; ಕಳೆ: ಬೀಡು, ತೊರೆ; ಕೈದು: ಆಯುಧ; ಮೊದಲು: ಮುಂಚೆ; ನಿಂದು: ನಿಲ್ಲು; ನೋಡು: ವೀಕ್ಷಿಸು; ಅನಿಲಸುತ: ಭೀಮ; ನಸುನಗು: ಹಸನ್ಮುಖ;

ಪದವಿಂಗಡಣೆ:
ಇವರೊಳ್+ಉಂಟೇ +ಕೈದು+ ವೊತ್ತವರ್
ಅವರನ್+ಅರಸುವೆನ್+ಎನುತ +ಬರಲ್+ಆ
ಪವನಸುತನನು+ ಥಟ್ಟಿಸಿದನಾ +ದನುಜರಿಪು+ ಮುಳಿದು
ಅವನಿಗ್+ಇಳಿದ್+ಈಡಾಡಿ +ಕಳೆ +ಕೈ
ದುವನು +ತಾ +ಮೊದಲಾಗಿ +ನಿಂದಂದ್
ಅವನು+ ನೋಡೆನಲ್+ಅನಿಲಸುತ +ನಸುನಗುತಲ್+ಇಂತೆಂದ

ಅಚ್ಚರಿ:
(೧) ಪವನಸುತ, ಅನಿಲಸುತ – ಭೀಮನನ್ನು ಕರೆದ ಪರಿ

ನಿಮ್ಮ ಟಿಪ್ಪಣಿ ಬರೆಯಿರಿ