ಪದ್ಯ ೫೨: ಅರ್ಜುನನ ಬಾಣವನ್ನು ಎದುರಿಸಲು ಯಾರು ಬಂದರು?

ನೂಕಿದರು ಶಲ್ಯಂಗೆ ಪಡಿಬಲ
ದಾಕೆವಾಳರು ಗುರುಸುತಾದ್ಯರು
ತೋಕಿದರು ಶರಜಾಳವರ್ಜುನನಂಬಿನಂಬುಧಿಯ
ಬೀಕಲಿನ ಭಟರುಬ್ಬಿದರೆ ಸು
ವ್ಯಾಕುಲರು ತುಬ್ಬಿದರೆ ತಪ್ಪೇ
ನೀ ಕಳಂಬವ ಕಾಯುಕೊಳ್ಳೆನುತೆಚ್ಚನಾ ಪಾರ್ಥ (ಶಲ್ಯ ಪರ್ವ, ೨ ಸಂಧಿ, ೫೨ ಪದ್ಯ)

ತಾತ್ಪರ್ಯ:
ಶಲ್ಯನಿಗೆ ಸಹಾಯಮಾಡಲು ಅಶ್ವತ್ಥಾಮನೇ ಮೊದಲಾದ ವೀರರು ಅರ್ಜುನನ ಬಾಣಗಳ ಸಮುದ್ರವನ್ನು ತಮ್ಮ ಬಾಣಗಳಿಂದ ಇದಿರಿಸಿದರು. ದುರ್ಬಲ ಯೋಧರು ಉಬ್ಬಿದರೆ, ನೊಂದವರು ಉತ್ಸಾಹದಿಂದ ಮುಂದೆ ಬಂದರೆ, ತಪ್ಪೇನು? ಈ ಬಾಣದಿಂದ ನಿನ್ನನ್ನು ರಕ್ಷಿಸಿಕೋ ಎಂದು ಅರ್ಜುನನು ಹೊಡೆದನು.

ಅರ್ಥ:
ನೂಕು: ತಳ್ಳು; ಪಡಿಬಲ: ವೈರಿಸೈನ್ಯ; ಆಕೆವಾಳ: ಪರಾಕ್ರಮಿ; ಸುತ: ಮಗ; ಆದಿ: ಮುಂತಾದ; ತೋಕು: ಎಸೆ, ಪ್ರಯೋಗಿಸು, ಚೆಲ್ಲು; ಶರ: ಬಾಣ; ಜಾಲ: ಗುಂಪು; ಅಂಬು: ಬಾಣ; ಅಂಬುಧಿ: ಸಾಗರ; ಬೀಕಲು: ಕೊನೆ, ಅಂತ್ಯ; ಭಟ: ಸೈನಿಕ; ಉಬ್ಬು: ಅತಿಶಯ, ಉತ್ಸಾಹ; ವ್ಯಾಕುಲ: ದುಃಖ, ವ್ಯಥೆ; ತುಬ್ಬು: ಪತ್ತೆ ಮಾಡು, ಶೋಧಿಸು; ಕಳಂಬ: ಬಾಣ, ಅಂಬು; ಕಾಯ್ದು: ಕಾಪಾಡು; ಎಚ್ಚು: ಬಾಣ ಪ್ರಯೋಗ ಮಾಡು;

ಪದವಿಂಗಡಣೆ:
ನೂಕಿದರು +ಶಲ್ಯಂಗೆ +ಪಡಿಬಲದ್
ಆಕೆವಾಳರು +ಗುರುಸುತಾದ್ಯರು
ತೋಕಿದರು +ಶರಜಾಳವ್+ಅರ್ಜುನನ್+ಅಂಬಿನ್+ಅಂಬುಧಿಯ
ಬೀಕಲಿನ+ ಭಟರ್+ಉಬ್ಬಿದರೆ+ ಸು
ವ್ಯಾಕುಲರು +ತುಬ್ಬಿದರೆ +ತಪ್ಪೇನ್
ಈ+ ಕಳಂಬವ+ ಕಾಯ್ದುಕೊಳ್ಳೆನುತ್+ಎಚ್ಚನಾ +ಪಾರ್ಥ

ಅಚ್ಚರಿ:
(೧) ಶರಜಾಳವರ್ಜುನನಂಬಿನಂಬುಧಿಯ – ಅಂಬು ಪದದ ಬಳಕೆ
(೨) ಉಬ್ಬಿದರೆ, ತುಬ್ಬಿದರೆ – ಪ್ರಾಸ ಪದಗಳು
(೩) ಕಳಂಬ, ಅಂಬು, ಶರ – ಸಮಾನಾರ್ಥಕ ಪದ

ನಿಮ್ಮ ಟಿಪ್ಪಣಿ ಬರೆಯಿರಿ