ಪದ್ಯ ೩೦: ವಂದಿ ಮಾಗಧರು ಏನೆಂದು ಹೊಗಳಿದರು?

ಜೀಯ ಬುಧನ ಪುರೂರವನ ಸುತ
ನಾಯುವಿನ ನಹುಷನ ಯಯಾತಿಯ
ದಾಯಭಾಗದ ಭೋಗನಿಧಿಯವತರಿಸಿದೈ ಧರೆಗೆ
ಜೇಯನೆನಿಸಿದೆ ಜೂಜಿನಲಿ ರಣ
ಜೇಯನಹನೀ ಕೌರವನು ನಿ
ನ್ನಾಯತಿಯ ಸಂಭಾವಿಸೆಮ್ದುದು ವಂದಿಜನಜಲಧಿ (ಶಲ್ಯ ಪರ್ವ, ೩ ಸಂಧಿ, ೩೦ ಪದ್ಯ)

ತಾತ್ಪರ್ಯ:
ವಂದಿಗಳು ನುಡಿಯುತ್ತಾ ಜೀಯಾ, ಬುಧ, ಪುರೂರವ ಅವನ ಮಗ ಆಯು, ನಹುಷ, ಯಯಾತಿಗಳು ಅನುಭವಿಸಿದ ರಾಜ್ಯಭೋಗವನ್ನು ಅನುಭವಿಸಲು ನೀನು ಭೂಮಿಯಲ್ಲಿ ಅವತರಿಸಿರುವೆ. ಜೂಜಿನಲ್ಲಿ ಸೋತೆ, ಯುದ್ಧದಲ್ಲಿ ಕೌರವನು ಸೋಲುತ್ತಾನೆ, ನಿನ್ನ ಘನತೆಯನ್ನು ಯುದ್ಧದಲ್ಲಿ ತೋರಿಸು ಎಂದು ವಂದಿ ಮಾಗಧರು ಹೊಗಳಿದರು.

ಅರ್ಥ:
ಜೀಯ: ಒಡೆಯ; ಸುತ: ಮಗ; ಭೋಗ: ಸುಖವನ್ನು ಅನುಭವಿಸುವುದು; ನಿಧಿ: ಐಶ್ವರ್ಯ; ಅವತರಿಸು: ಕಾಣಿಸು; ಧರೆ: ಭೂಮಿ; ಜೀಯ: ಒಡೆಯ; ಜೂಜು: ಜುಗಾರಿ, ಸಟ್ಟ; ರಣ: ಯುದ್ಧ; ಆಯತಿ: ವಿಸ್ತಾರ; ಸಂಭಾಸಿವು: ಯೋಚಿಸು, ಯೋಚಿಸು; ವಂದಿ: ಹೊಗಳುಭಟ್ಟ; ಜಲಧಿ: ಸಾಗರ; ಜನ: ಮನುಷ್ಯ; ಜೇಯ: ಗೆಲುವು;

ಪದವಿಂಗಡಣೆ:
ಜೀಯ +ಬುಧನ +ಪುರೂರವನ+ ಸುತನ್
ಆಯುವಿನ +ನಹುಷನ+ ಯಯಾತಿಯದ್
ಆಯಭಾಗದ+ ಭೋಗ+ನಿಧಿ+ಅವತರಿಸಿದೈ+ ಧರೆಗೆ
ಜೇಯನ್+ಎನಿಸಿದೆ +ಜೂಜಿನಲಿ +ರಣ
ಜೇಯನಹನ್+ಈ +ಕೌರವನು+ ನಿನ್ನ್
ಆಯತಿಯ +ಸಂಭಾವಿಸೆಂದುದು +ವಂದಿ+ಜನಜಲಧಿ

ಅಚ್ಚರಿ:
(೧) ಜೇಯ ಪದದ ಬಳಕೆ – ೪, ೫ ಸಾಲು
(೨) ಬಹಳ ಹೊಗಳುಭಟರು ಎಂದು ಹೇಳಲು – ವಂದಿಜನಜಲಧಿ ಪದದ ಬಳಕೆ

ನಿಮ್ಮ ಟಿಪ್ಪಣಿ ಬರೆಯಿರಿ