ಪದ್ಯ ೧: ಸಂಜಯನು ಯಾವ ಮೂರು ರಥಗಳನ್ನು ನೋಡಿದನು?

ಕೇಳು ಜನಮೇಜಯ ಧರಿತ್ರೀ
ಪಾಲ ಸಂಜಯ ಬರುತ ಕುರುಭೂ
ಪಾಲನರಕೆಯ ಭೀಮನವರಿವರಲ್ಲಲೇ ಎನುತ
ಮೇಲೆ ಹತ್ತಿರ ಬರಬರಲು ಸಮ
ಪಾಳಿಯಲಿ ರಥ ಮೂರರಲಿ ಕೃಪ
ಕೋಲ ಗುರುವಿನ ಮಗನಲಾ ಎನುತಲ್ಲಿಗೈತಂದ (ಗದಾ ಪರ್ವ, ೪ ಸಂಧಿ, ೧ ಪದ್ಯ)

ತಾತ್ಪರ್ಯ:
ರಾಜ ಜನಮೇಜಯ ಕೇಳು, ಕೃಪಚಾರ್ಯ ಮುಂತಾದವರುಗಳನ್ನು ನೋಡಿ ಇವರು ಭೀಮನ ಕಡೆಯವರಲ್ಲವಲ್ಲ ಎಂದು ಬೆದರುತ್ತಾ ಹತ್ತಿರಕ್ಕೆ ಬಂದು ಮೂರೂ ರಥಗಳು ಒಂದೇ ಗತಿಯಲ್ಲಿ ಬರುವುದನ್ನೂ ಅದರಲ್ಲಿ ಕೃಪ ಅಶ್ವತ್ಥಾಮರಿರುವುದನ್ನು ಕಂಡು ಹತ್ತಿರಕ್ಕೆ ಬಂದನು.

ಅರ್ಥ:
ಕೇಳು: ಆಲಿಸು; ಧರಿತ್ರೀಪಾಲ: ರಾಜ; ಬರುತ: ಆಗಮಿಸು; ಭೂಪಾಲ: ರಾಜ; ಅರಕೆ: ಕೊರತೆ, ನ್ಯೂನತೆ; ಹತ್ತಿರ: ಸಮೀಪ; ಸಮಪಾಳಿ: ಒಂದೇ ಗತಿ; ರಥ: ಬಂಡಿ; ಕೋಲ: ಬಾಣ; ಗುರು: ಆಚಾರ್ಯ; ಮಗ: ಸುತ; ಐತಂದ: ಬಂದುಸೇರು;

ಪದವಿಂಗಡಣೆ:
ಕೇಳು +ಜನಮೇಜಯ +ಧರಿತ್ರೀ
ಪಾಲ +ಸಂಜಯ +ಬರುತ +ಕುರು+ಭೂ
ಪಾಲನ್+ಅರಕೆಯ +ಭೀಮನವರಿವರಲ್ಲಲೇ+ ಎನುತ
ಮೇಲೆ +ಹತ್ತಿರ +ಬರಬರಲು +ಸಮ
ಪಾಳಿಯಲಿ +ರಥ +ಮೂರರಲಿ +ಕೃಪ
ಕೋಲ +ಗುರುವಿನ +ಮಗನಲಾ +ಎನುತ್+ಅಲ್ಲಿಗ್+ಐತಂದ

ಅಚ್ಚರಿ:
(೧) ಧರಿತ್ರೀಪಾಲ, ಭೂಪಾಲ – ಸಮಾನಾರ್ಥಕ ಪದ

ನಿಮ್ಮ ಟಿಪ್ಪಣಿ ಬರೆಯಿರಿ