ಪದ್ಯ ೧೦: ಅಂತಃಪುರದಲ್ಲಿ ಯಾವ ಭೀತಿ ಹಬ್ಬಿತು?

ಅರಮನೆಗೆ ಬಂದಖಿಳ ಸಚಿವರ
ಕರಸಿದನು ಸರಹಸ್ಯವನು ವಿ
ಸ್ತರಿಸಿದನು ಸರ್ವಾಪಹಾರವ ನೃಪಪಲಾಯನವ
ಅರಸಿಯರಿದಳು ಭಾನುಮತಿ ಮಿ
ಕ್ಕರಸಿಯರಿಗರುಹಿಸಿದಳಂತಃ
ಪುರದೊಳಲ್ಲಿಂದಲ್ಲಿ ಹರೆದುದು ಕೂಡೆ ರಣಭೀತಿ (ಗದಾ ಪರ್ವ, ೪ ಸಂಧಿ, ೧೦ ಪದ್ಯ)

ತಾತ್ಪರ್ಯ:
ಪಾಳೆಯದ ಅರಮನೆಗೆ ಸಂಜಯನು ಬಂದು, ಮಂತ್ರಿಗಳನ್ನು ಅಕ್ರೆಸಿ, ಕೌರವನ ಸರ್ವವೂ ಇಲ್ಲದಂತಾಗಿದೆ. ಅರಸನು ಓಡಿಹೋಗಿದ್ದಾನೆ ಎಂಬ ಗುಟ್ಟನ್ನು ಅವರಿಗೆ ತಿಳಿಸಿದನು. ಭಾನುಮತಿಗೆ ಇದು ತಿಳಿಯಿತು, ಅವಳು ಉಳಿದ ರಾಣಿಯರಿಗೆ ತಿಳಿಸಿದಳು. ಅಂತಃಪುರದಲ್ಲಿ ಯುದ್ಧದಲ್ಲಿ ಸೋಲಾದ ಭೀತಿ ಹಬ್ಬಿತು.

ಅರ್ಥ:
ಅರಮನೆ: ರಾಜರ ಆಲಯ; ಬಂದು: ಆಗಮಿಸು; ಅಖಿಳ: ಎಲ್ಲಾ; ಸಚಿವ: ಮಂತ್ರಿ; ಕರಸು: ಬರೆಮಾಡು; ರಹಸ್ಯ: ಗುಟ್ಟು; ವಿಸ್ತರಿಸು: ವಿಸ್ತಾರವಾಗಿ ತಿಳಿಸು; ಸರ್ವ: ಎಲ್ಲವೂ; ಅಪಹಾರ: ಕಿತ್ತುಕೊಳ್ಳುವುದು; ನೃಪ: ರಾಜ; ಪಲಾಯನ: ಓಡಿಹೋಗು; ಅರಸಿ: ರಾಣಿ; ಅರಿ: ತಿಳಿ; ಮಿಕ್ಕ: ಉಳಿದ; ಅರುಹು: ತಿಳಿಸು; ಅಂತಃಪುರ: ರಾಣಿಯರ ವಾಸಸ್ಥಾನ; ಹರೆದು: ವ್ಯಾಪಿಸು; ರಣ: ಯುದ್ಧ; ಭೀತಿ: ಭಯ;

ಪದವಿಂಗಡಣೆ:
ಅರಮನೆಗೆ +ಬಂದ್+ಅಖಿಳ +ಸಚಿವರ
ಕರಸಿದನು +ಸರಹಸ್ಯವನು +ವಿ
ಸ್ತರಿಸಿದನು +ಸರ್ವ+ಅಪಹಾರವ +ನೃಪ+ಪಲಾಯನವ
ಅರಸಿ+ಅರಿದಳು +ಭಾನುಮತಿ +ಮಿ
ಕ್ಕರಸಿಯರಿಗ್+ಅರುಹಿಸಿದಳ್+ಅಂತಃ
ಪುರದೊಳ್+ಅಲ್ಲಿಂದಲ್ಲಿ +ಹರೆದುದು +ಕೂಡೆ +ರಣಭೀತಿ

ಅಚ್ಚರಿ:
(೧) ಅರಸಿ, ಮಿಕ್ಕರಸಿ, ಕರಸಿ, ವಿಸ್ತರಿಸಿ – ಪ್ರಾಸ ಪದ

ನಿಮ್ಮ ಟಿಪ್ಪಣಿ ಬರೆಯಿರಿ