ಪದ್ಯ ೬: ಕೌರವವನನ್ನು ಕಂಡ ಸಂಜಯನ ಸ್ಥಿತಿ ಹೇಗಿತ್ತು?

ಕಂಡೆನರಸನ ನಿಬ್ಬರವ ಬಳಿ
ಕಂಡಲೆದುದತಿಶೋಕಶಿಖಿ ಕೈ
ಗೊಂಡುದಿಲ್ಲರೆಘಳಿಗೆ ಬಳಿಕೆಚ್ಚತ್ತು ಕಂದೆರೆದು
ಖಂಡಿಸಿದನೆನ್ನುಬ್ಬೆಯನು ಹುರಿ
ಗೊಂಡುದಾತನ ಸತ್ವವಾತನ
ದಂಡಿಯಲಿ ಬಹರಾರು ಸುರ ನರ ನಾಗಲೋಕದಲಿ (ಗದಾ ಪರ್ವ, ೪ ಸಂಧಿ, ೬ ಪದ್ಯ)

ತಾತ್ಪರ್ಯ:
ಸಂಜಯನು ಮಾತನಾಡುತ್ತಾ, ನಾನು ರಾಜನ ಕಳವಳವನ್ನು ನೋಡಿದೆ, ಅತಿಶಯ ಶೋಕಜ್ವಾಲೆಯಲ್ಲಿ ಬೆಂದಿದ್ದೆ. ಒಂದು ನಿಮಿಷ ಮೂರ್ಛಿತನಾಗಿ, ನಂತರ ಎಚ್ಚೆತ್ತು, ಕಣ್ಣುತೆರೆದು ನನ್ನ ಶೋಕವನ್ನು ನಿಲ್ಲಿಸಿದನು. ಅವನ ಸತ್ವ ಹುರಿಗೊಂಡಿತು. ಅವನಿಗೆ ಸ್ವರ್ಗ, ಮರ್ತ್ಯ, ಪಾತಾಳ ಲೋಕಗಳಲ್ಲಿ ಸಮರಾರಿದ್ದಾರೆ?

ಅರ್ಥ:
ಕಂಡು: ನೋಡು; ಅರಸ: ರಾಜ; ನಿಬ್ಬರ: ಅತಿಶಯ, ಹೆಚ್ಚಳ; ಬಳಿ: ಹತ್ತಿರ; ಅತಿ: ಬಹಳ: ಶೋಕ: ದುಃಖ; ಶಿಖಿ: ಬೆಂಕಿ; ಕೈಗೊಂಡು: ಪಡೆದು; ಅರೆ: ಅರ್ಧ; ಘಳಿಗೆ: ಸಮಯ; ಬಳಿಕ: ನಂತರ; ಎಚ್ಚತ್ತು: ಎಚ್ಚರನಾಗಿ; ಕಂದೆರೆದು: ಕಣ್ಣುಬಿಟ್ಟು; ಖಂಡಿಸು: ಕಡಿ, ಕತ್ತರಿಸು; ಉಬ್ಬೆ: ಸೆಕೆ, ಕಾವು; ಹುರಿ: ಕಾಯಿಸು, ತಪ್ತಗೊಳಿಸು; ಸತ್ವ: ಸಾರ; ದಂಡಿ: ಶಕ್ತಿ, ಸಾಮರ್ಥ್ಯ; ಬಹರು: ಆಗಮಿಸು; ಸುರ: ದೇವತೆ; ನರ: ಮನುಷ್ಯ; ನಾಗಲೋಕ: ಪಾತಾಳ;

ಪದವಿಂಗಡಣೆ:
ಕಂಡೆನ್+ಅರಸನ +ನಿಬ್ಬರವ +ಬಳಿ
ಕಂಡಲೆದುದ್+ಅತಿ+ಶೋಕಶಿಖಿ+ ಕೈ
ಗೊಂಡುದಿಲ್ಲ್+ಅರೆ+ಘಳಿಗೆ +ಬಳಿಕ್+ಎಚ್ಚತ್ತು +ಕಂದೆರೆದು
ಖಂಡಿಸಿದನ್+ಎನ್ನ್+ಉಬ್ಬೆಯನು +ಹುರಿ
ಗೊಂಡುದಾತನ +ಸತ್ವವ್+ಆತನ
ದಂಡಿಯಲಿ +ಬಹರಾರು +ಸುರ+ ನರ+ ನಾಗಲೋಕದಲಿ

ಅಚ್ಚರಿ:
(೧) ದುರ್ಯೋಧನನ ಪರಾಕ್ರಮ – ಆತನ ದಂಡಿಯಲಿ ಬಹರಾರು ಸುರ ನರ ನಾಗಲೋಕದಲಿ

ನಿಮ್ಮ ಟಿಪ್ಪಣಿ ಬರೆಯಿರಿ