ಪದ್ಯ ೨೬: ಸಂಜಯನಿಗೆ ವ್ಯಾಸರು ಯಾವ ಅಪ್ಪಣೆ ನೀಡಿದರು?

ಆವ ವಹಿಲದೊಳಾದುದಾವಿ
ರ್ಭಾವವೆಂದಾನರಿಯೆನಾಗಳೆ
ದೇವಮುನಿಯಡ್ಡೈಸಿ ಹಿಡಿದನು ಕೊರಳಡಾಯುಧವ
ಸಾವು ತಪ್ಪಿತು ಬಾದರಾಯಣ
ನೋವಿ ಕೃಪೆಯಲಿ ಮೈದಡವಿ ಸಂ
ಭಾವಿಸುತ ಕುರುಪತಿಯನರಸೆಂದೆನಗೆ ನೇಮಿಸಿದ (ಗದಾ ಪರ್ವ, ೪ ಸಂಧಿ, ೨೬ ಪದ್ಯ)

ತಾತ್ಪರ್ಯ:
ಎಷ್ಟು ಬೇಗದಿಂದ ವೇದವ್ಯಾಸ ಮುನಿಗಳು ಪ್ರಕಟವಾಗಿ ನನ್ನ ಕೊರಳಿಗೆ ಹೂಡಿದ್ದ ಕತ್ತಿಯನ್ನು ಹಿಡಿದುಕೊಂಡರೋ ತಿಳಿಯಲಿಲ್ಲ. ಸಾವು ತಪ್ಪಿತು. ಬಾದರಾಯಣನು ಪ್ರೀತಿಯಿಂದ ನನ್ನ ಮೈದಡವಿ ಕೌರವನನ್ನು ಹುಡುಕು ಎಂದು ಅಪ್ಪಣೆಕೊಟ್ಟನು.

ಅರ್ಥ:
ವಹಿಲ: ಬೇಗ, ತ್ವರೆ; ಆವಿರ್ಭಾವ: ಹುಟ್ಟುವುದು, ಪ್ರಕಟವಾಗುವುದು; ಅರಿ: ತಿಳಿ; ಮುನಿ: ಋಷಿ; ಅಡ್ಡೈಸು: ಅಡ್ಡ ಬಂದು; ಹಿಡಿ: ಗ್ರಹಿಸು; ಕೊರಳು: ಗಂಟಲು ಆಯುಧ: ಶಸ್ತ್ರ; ಸಾವು: ಮರಣ; ಕೃಪೆ: ದಯೆ; ಮೈದಡವಿ: ನೇವರಿಸು; ಸಂಭಾವಿಸು: ತೃಪ್ತಿಪಡಿಸು, ಗೌರವಿಸು; ಅರಸು: ಹುಡುಕು; ನೇಮಿಸು: ಅಪ್ಪಣೆ ಮಾಡು;

ಪದವಿಂಗಡಣೆ:
ಆವ+ ವಹಿಲದೊಳ್+ಆದುದ್+ಆವಿ
ರ್ಭಾವವೆಂದ್+ಆನ್+ಅರಿಯೆನ್+ಆಗಳೆ
ದೇವಮುನಿ+ಅಡ್ಡೈಸಿ +ಹಿಡಿದನು +ಕೊರಳಡ್+ಆಯುಧವ
ಸಾವು +ತಪ್ಪಿತು +ಬಾದರಾಯಣನ್
ಓವಿ+ ಕೃಪೆಯಲಿ +ಮೈದಡವಿ +ಸಂ
ಭಾವಿಸುತ +ಕುರುಪತಿಯನ್+ಅರಸ್+ಎಂದೆನಗೆ +ನೇಮಿಸಿದ

ಅಚ್ಚರಿ:
(೧) ಅ ಕಾರದ ಪದಗಳ ಬಳಕೆ – ಆವ ವಹಿಲದೊಳಾದುದಾವಿರ್ಭಾವವೆಂದಾನರಿಯೆನಾಗಳೆ
(೨) ವ್ಯಾಸರನ್ನು ಕರೆದ ಪರಿ – ಬಾದರಾಯಣ, ದೇವಮುನಿ

ನಿಮ್ಮ ಟಿಪ್ಪಣಿ ಬರೆಯಿರಿ