ಪದ್ಯ ೨೫: ಭೀಮನು ಹೇಗೆ ಕೌರವನನ್ನು ಪ್ರಚೋದಿಸಿದನು – ೨?

ಎಲವೊ ರಾಯನ ಪಟ್ಟದರಸಿಯ
ಸುಲಿಸಿದಾ ಛಲವೆಲ್ಲಿ ಹಗೆಗಳ
ಹಳುವದಲಿ ಹೊಗಿಸಿದೆನೆನಿಪ ಸುಮ್ಮಾನ ತಾನೆಲ್ಲಿ
ಖಳ ಶಿರೋಮಣಿ ನಿನ್ನ ತಲೆಗೂ
ದಲಲಿ ಕೈಗಳ ಕಟ್ಟಿ ಖೇಚರ
ನೆಳೆಯೆ ಬಿಡಿಸಿದರಾರು ಕೌರವ ಎಂದನಾ ಭೀಮ (ಗದಾ ಪರ್ವ, ೫ ಸಂಧಿ, ೨೫ ಪದ್ಯ)

ತಾತ್ಪರ್ಯ:
ಎಳೊ ಕೌರವ, ಹಿಂದೆ ಯುಧಿಷ್ಠಿರನ ಪಟ್ಟದ ರಾಣಿಯಾದ ದ್ರೌಪದಿಯ ಸೀರೆಯನ್ನು ಸಭೆಯಲ್ಲಿ ಸುಲಿಸಿದ ಛಲವು ಎಲ್ಲಿಗೆ ಹೋಯಿತು? ವೈರಿಗಳನ್ನು ಕಾಡಿಗಟ್ಟಿದೆನಂಬ ಸಂತೋಷ ಎಲ್ಲಿಗೆ ಹೋಯಿತು? ಎಲವೋ ದುಷ್ಟಶಿರೋಮಣಿ, ಗಂಧರ್ವನು ನಿನ್ನ ಕೂದಲುಗಳಿಂದ ನಿನ್ನ ಕೈಗಳನ್ನು ಕಟ್ಟಿ ಎಳೆದುಕೊಂಡು ಹೋದಾಗ ಬಿಡಿಸಿದವರು ಯಾರು?

ಅರ್ಥ:
ರಾಯ: ರಾಜ; ಪಟ್ಟದರಸಿ: ಮಹಾರಾಣಿ; ಪಟ್ಟ: ಸ್ಥಾನ; ಸುಲಿಸು: ಕಿತ್ತುಕೊಳ್ಳು; ಛಲ: ದೃಢ ನಿಶ್ಚಯ; ಹಗೆ: ವೈರ; ಹಳುವು: ಕಾಡು; ಹೊಗಿಸು: ಸೇರಿಸು; ಸುಮ್ಮಾನ: ಸಂತೋಷ; ಖಳ: ದುಷ್ತ; ಶಿರೋಮಣಿ: ಅಗ್ರಗಣ್ಯ, ಶ್ರೇಷ್ಠ; ಕೂದಲು: ರೋಮ; ಕೈ: ಹಸ್ತ; ಕಟ್ಟು: ಬಂಧಿಸು; ಖೇಚರ: ಗಗನದಲ್ಲಿ ಸಂಚರಿಸುವವ, ಗಂಧರ್ವ, ದೇವತೆ; ಎಳೆ: ನೂಲಿನ ಎಳೆ, ಸೂತ್ರ; ಬಿಡಿಸು: ಸಡಲಿಸು;

ಪದವಿಂಗಡಣೆ:
ಎಲವೊ +ರಾಯನ +ಪಟ್ಟದರಸಿಯ
ಸುಲಿಸಿದ+ಆ +ಛಲವೆಲ್ಲಿ +ಹಗೆಗಳ
ಹಳುವದಲಿ +ಹೊಗಿಸಿದೆನ್+ಎನಿಪ+ ಸುಮ್ಮಾನ +ತಾನೆಲ್ಲಿ
ಖಳ +ಶಿರೋಮಣಿ +ನಿನ್ನ +ತಲೆಗೂ
ದಲಲಿ +ಕೈಗಳ+ ಕಟ್ಟಿ +ಖೇಚರನ್
ಎಳೆಯೆ +ಬಿಡಿಸಿದರ್+ಆರು +ಕೌರವ +ಎಂದನಾ +ಭೀಮ

ಅಚ್ಚರಿ:
(೧) ದುರ್ಯೋಧನನನ್ನು ಖಳ ಶಿರೋಮಣಿ ಎಂದು ಕರೆದಿರುವುದು
(೨) ಹ ಕಾರದ ತ್ರಿವಳಿ ಪದ – ಹಗೆಗಳ ಹಳುವದಲಿ ಹೊಗಿಸಿದೆನೆನಿಪ

ನಿಮ್ಮ ಟಿಪ್ಪಣಿ ಬರೆಯಿರಿ