ಪದ್ಯ ೪೩: ಅರ್ಜುನನು ಕೃಷ್ಣನಲ್ಲಿ ಏನೆಂದು ಬೇಡಿದನು?

ದೇವ ಬೆಸಸಿನ್ನನಿಲಸೂನು ಸ
ಜೀವನಹಿತನಿಬರ್ಹಣ ಪ್ರ
ಸ್ತಾವವನು ಕರುಣಿಸುವುದಾತನ ಧರ್ಮವಿಕೃತಿಗ
ನೀವು ಕಂಡಿರೆ ನಾಭಿ ಜಂಘೆಗೆ
ಡಾವರಿಸಿದನು ಹಲವು ಬಾರಿ ಜ
ಯಾವಲಂಬನವೆಂತು ಕೃಪೆಮಾಡೆಂದನಾ ಪಾರ್ಥ (ಗದಾ ಪರ್ವ,೭ ಸಂಧಿ, ೪೩ ಪದ್ಯ)

ತಾತ್ಪರ್ಯ:
ಅರ್ಜುನನು ಕೃಷ್ಣನ ಬಳಿಗೆ ಹೋಗಿ, ಭೀಮನು ಜೀವಿಸಿದ್ದಾನೆ, ಶತ್ರುವು ಹಲವು ಬಾರಿ ಅವನ ನಾಭಿ ಮತ್ತು ಜಂಘೆಗೂ ಹೊಡೆದಿದ್ದಾನೆ. ಶತ್ರುವಿನ ವಧೆ ಹೇಗಾಗಬೇಕೆಂದು ದಯವಿಟ್ಟು ತಿಳಿಸು ಎಂದು ಅರ್ಜುನನು ಬೇಡಿದನು.

ಅರ್ಥ:
ದೇವ: ಭಗವಂತ; ಬೆಸಸು: ಹೇಳು; ಅನಿಲಸೂನು: ಭೀಮ; ಸಜೀವ: ಪ್ರಾಣವಿರುವ; ಅಹಿತ: ವೈರಿ; ಪ್ರಸ್ತಾವ: ವಿಚಾರ ಹೇಳುವುದು; ಕರುಣಿಸು: ದಯೆ ತೋರು; ಧರ್ಮ: ಧಾರಣೆ ಮಾಡಿದುದು; ವಿಕೃತಿ: ಬದಲಾವಣೆ, ವ್ಯತ್ಯಾಸ, ಕುರೂಪ; ಕಂಡು: ನೋಡು; ನಾಭಿ: ಹೊಕ್ಕಳು; ಜಂಘೆ: ತೊಡೆ; ಡಾವರಿಸು: ಹೊಡೆ; ಹಲವು: ಬಹಳ; ಬಾರಿ: ಸಾರ್ತಿ; ಜಯ: ಗೆಲುವು; ಅವಲಂಬನ: ಆಶ್ರಯ, ಆಸರೆ; ಕೃಪೆ: ದಯೆ;

ಪದವಿಂಗಡಣೆ:
ದೇವ +ಬೆಸಸಿನ್ನ್+ಅನಿಲಸೂನು +ಸ
ಜೀವನ್+ಅಹಿತನಿಬರ್ಹಣ+ ಪ್ರ
ಸ್ತಾವವನು +ಕರುಣಿಸುವುದ್+ಆತನ +ಧರ್ಮ+ವಿಕೃತಿಗ
ನೀವು +ಕಂಡಿರೆ +ನಾಭಿ +ಜಂಘೆಗೆ
ಡಾವರಿಸಿದನು +ಹಲವು +ಬಾರಿ +ಜಯ
ಅವಲಂಬನವೆಂತು +ಕೃಪೆಮಾಡೆಂದನಾ +ಪಾರ್ಥ

ಅಚ್ಚರಿ:
(೧) ಕರುಣಿಸು, ಕೃಪಮಾಡು – ಸಾಮ್ಯಾರ್ಥ ಪದಗಳು

ಪದ್ಯ ೪೨: ಅರ್ಜುನನು ಕೃಷ್ಣನಿಗೆ ಭೀಮನ ಬಗ್ಗೆ ಏನು ಹೇಳಿದ?

ಅರಸ ಕೇಳೈ ಬಿದ್ದ ಭೀಮನ
ಹೊರಗೆ ಬಂದರ್ಜುನನು ಮೋರೆಗೆ
ಬೆರಳನೊಡ್ಡಿ ಸಮೀರನಂದನನುಸಾರನಾರೈದು
ಮರಳಿದನು ಮುರಹರನನೆಕ್ಕಟಿ
ಗರೆದು ಸಪ್ರಾಣನು ಗದಾನಿ
ರ್ಭರಪರಿಶ್ರಮ ಭೀಮ ಬಳಲಿದನೆಂದನಾ ಪಾರ್ಥ (ಗದಾ ಪರ್ವ, ೭ ಸಂಧಿ, ೪೨ ಪದ್ಯ)

ತಾತ್ಪರ್ಯ:
ಧೃತರಾಷ್ಟ್ರ ರಾಜ ಕೇಳು, ನೆಲದ ಮೇಲೆ ಬಿದ್ದಿದ್ದ ಭೀಮನ ಬಳಿಗೆ ಅರ್ಜುನನು ಬಂದು, ಮೂಗಿಗೆ ಬೆರಳನ್ನಿಟ್ತುನೋಡಿ, ಕೃಷ್ಣನನ್ನು ಪಕ್ಕಕ್ಕೆ ಕರೆದು ಭೀಮನಿಗೆ ಪ್ರಾಣವಿದೆ, ಯುದ್ಧದ ಬಳಲಿಕೆಯಿಂದ ಮೂರ್ಛಿತನಾಗಿದ್ದಾನೆ ಎಂದು ಹೇಳಿದನು.

ಅರ್ಥ:
ಅರಸ: ರಾಜ; ಕೇಳು: ಆಲಿಸು; ಬಿದ್ದ: ಎರಗು; ಹೊರಗೆ: ಆಚೆಗೆ; ಮೋರೆ: ಮುಖ; ಬೆರಳು: ಅಂಗುಲಿ; ಒಡ್ಡು: ನೀಡು; ಸಮೀರ: ವಾಯು; ನಂದನ: ಮಗ; ಉಸುರು: ಜೀವ; ಮರಳು: ಹಿಂದಿರುಗು; ಮುರಹರ: ಕೃಷ್ಣ; ಎಕ್ಕಟಿ: ಏಕಾಕಿ, ಗುಟ್ಟಾಗಿ; ಕರೆದು: ಬರೆಮಾಡು; ಪ್ರಾಣ: ಜೀವ; ನಿರ್ಭರ: ವೇಗ, ರಭಸ; ಪರಿಶ್ರಮ: ಬಳಲಿಕೆ, ಆಯಾಸ; ಬಳಲು: ಆಯಾಸಗೊಳ್ಳು;

ಪದವಿಂಗಡಣೆ:
ಅರಸ+ ಕೇಳೈ +ಬಿದ್ದ+ ಭೀಮನ
ಹೊರಗೆ +ಬಂದ್+ಅರ್ಜುನನು +ಮೋರೆಗೆ
ಬೆರಳನೊಡ್ಡಿ+ ಸಮೀರನಂದನನ್+ಉಸಾರನಾರೈದು
ಮರಳಿದನು +ಮುರಹರನನ್+ಎಕ್ಕಟಿ
ಕರೆದು +ಸಪ್ರಾಣನು +ಗದಾ+ನಿ
ರ್ಭರ+ಪರಿಶ್ರಮ+ ಭೀಮ +ಬಳಲಿದನೆಂದನಾ +ಪಾರ್ಥ

ಅಚ್ಚರಿ:
(೧) ಹೊರೆಗೆ, ಮೋರೆಗೆ – ಪ್ರಾಸ ಪದಗಳು, ೨ ಸಾಲು
(೨) ಭೀಮನನ್ನು ಸಮೀರನಂದನ ಎಂದು ಕರೆದ ಪರಿ

ಪದ್ಯ ೪೧: ಬಲರಾಮನು ಕೃಷಂಗೆ ಏನು ಹೇಳಿದನು?

ದುಗುಡದಲಿ ಹರಿ ರೌಹಿಣೀಯನ
ಮೊಗವ ನೋಡಿದಡಾತನಿದು ಕಾ
ಳೆಗವಲೇ ಕೃತಸಮಯರಾದಿರಿ ಪೂರ್ವಕಾಲದಲಿ
ಹಗೆಯ ಬಿಡಿ ಕುರುಪತಿಯ ಸಂಧಿಗೆ
ಸೊಗಸಿ ನಿಲಲಿ ಯುಧಿಷ್ಠಿರನ ಮಾ
ತುಗಳ ಕೆಡಿಸದಿರೆಂದನಾ ಕೃಷಂಗೆ ಬಲರಾಮ (ಗದಾ ಪರ್ವ, ೭ ಸಂಧಿ, ೪೧ ಪದ್ಯ)

ತಾತ್ಪರ್ಯ:
ಶ್ರೀಕೃಷ್ಣನು ದುಃಖಿಸುತ್ತಾ ಬಲರಾಮನ ಕಡೆಗೆ ನೋಡಲು, ಅವನು, ಇದು ಯುದ್ಧ, ಹಿಂದೆ ನೀವು ಗೆದ್ದಿದ್ದಿರಿ, ಈಗ ನಿಮ್ಮ ಕಾಲ ಕೆಟ್ಟಿತು, ವೈರವನ್ನು ಬಿಟ್ಟು ಕೌರವನೊಂದಿಗೆ ಸಂಧಿಯನ್ನು ಮಾಡಿಕೊಳ್ಳಿರಿ, ಧರ್ಮಜನ ಮಾತನ್ನು ಕೆಡಿಸಬೇಡಿ ಎಂದನು.

ಅರ್ಥ:
ದುಗುಡ: ದುಃಖ; ಹರಿ: ವಿಷ್ಣು; ರೌಹಿಣೀಯ: ಬಲರಾಮ; ಮೊಗ: ಮುಖ; ನೋಡು: ವೀಕ್ಷಿಸು; ಕಾಳೆಗ: ಯುದ್ಧ; ಕೃತ: ಕಾರ್ಯ; ಸಮಯ: ಕಾಲ; ಪೂರ್ವ: ಹಿಂದಿನ; ಹಗೆ: ವೈರಿ; ಬಿಡಿ: ತೊರೆ; ಸಂಧಿ: ರಾಜಿ, ಒಡಂಬಡಿಕೆ; ಸೊಗಸು: ಅಂದ, ಚೆಲುವು; ನಿಲುವು: ಅಭಿಪ್ರಾಯ, ಅಭಿಮತ; ನಿಲು: ತಡೆ; ಮಾತು: ನುಡಿ; ಕೆಡಸು: ಹಾಳುಮಾಡು;

ಪದವಿಂಗಡಣೆ:
ದುಗುಡದಲಿ +ಹರಿ +ರೌಹಿಣೀಯನ
ಮೊಗವ +ನೋಡಿದಡ್+ಆತನ್+ಇದು +ಕಾ
ಳೆಗವಲೇ +ಕೃತ+ಸಮಯರಾದಿರಿ +ಪೂರ್ವಕಾಲದಲಿ
ಹಗೆಯ +ಬಿಡಿ +ಕುರುಪತಿಯ +ಸಂಧಿಗೆ
ಸೊಗಸಿ +ನಿಲಲಿ +ಯುಧಿಷ್ಠಿರನ+ ಮಾ
ತುಗಳ +ಕೆಡಿಸದಿರ್+ಎಂದನಾ +ಕೃಷಂಗೆ +ಬಲರಾಮ

ಅಚ್ಚರಿ:
(೧) ಬಲರಾಮನ ಕಿವಿಮಾತು – ಹಗೆಯ ಬಿಡಿ ಕುರುಪತಿಯ ಸಂಧಿಗೆ ಸೊಗಸಿ ನಿಲಲಿ
(೨) ರೌಹಿಣೀಯ – ಬಲರಾಮನನ್ನು ಕರೆದ ಪರಿ

ಪದ್ಯ ೪೦: ಪಾಂಡವರೇಕೆ ದುಃಖಿಸಿದರು?

ಮಿಡಿದನರ್ಜುನ ಧನುವ ಯಮಳರು
ತುಡುಕಿದರು ಕಯ್ದುಗಳ ಸಾತ್ಯಕಿ
ಮಿಡುಕಿದನು ಮರುಗಿದರು ಪಂಚದ್ರೌಪದೀಸುತರು
ಒಡೆಯನಳಿವಿನಲೆಲ್ಲಿಯದು ನೃಪ
ನುಡಿದ ನುಡಿಯೆನುತನಿಲತನುಜನ
ಪಡೆ ಗಜಾಶ್ವವ ಬಿಗಿಯೆ ಗಜಬಜಿಸಿತು ಭಟಸ್ತೋಮ (ಗದಾ ಪರ್ವ, ೭ ಸಂಧಿ, ೪೦ ಪದ್ಯ)

ತಾತ್ಪರ್ಯ:
ಅರ್ಜುನನು ಧನುಷ್ಟಂಕಾರ ಮಾಡಿದನು. ನಕುಲ ಸಹದೇವರು ಆಯುಧಗಳನ್ನು ಹಿದಿದರು. ಉಪಪಾಂಡವರೂ, ಸಾತ್ಯಕಿ, ದುಃಖಿಸಿದರು. ನಮ್ಮ ಒಡೆಯನು ಮರಣ ಹೊಂದಿದನೇ? ಧರ್ಮಜನ ಪ್ರತಿಜ್ಞೆ ಏನಾಯಿತು? ಎಂದುಕೊಂಡು ಆನೆ, ಕುದುರೆಗಳನ್ನು ಯುದ್ಧಕ್ಕೆ ಅನುವು ಮಾಡಿಕೊಂಡರು.

ಅರ್ಥ:
ಮಿಡಿ: ತವಕಿಸು; ಧನು: ಬಿಲ್ಲು; ಯಮಳ: ಅವಳಿ ಮಕ್ಕಳು; ತುಡುಕು: ಹೋರಾಡು, ಸೆಣಸು; ಕಯ್ದು: ಆಯುಧ; ಮಿಡುಕು: ಅಲುಗಾಟ, ಚಲನೆ; ಮರುಗು: ತಳಮಳ, ಸಂಕಟ; ಪಂಚ: ಐದು; ಸುತ: ಮಕ್ಕಳು; ಒಡೆಯ: ನಾಯಕ, ರಾಜ; ಅಳಿ: ನಾಶ; ನೃಪ: ರಾಜ; ನುಡಿ: ಮಾತಾಡು; ಅನಿಲ: ವಾಯು; ತನುಜ: ಮಗ; ಪಡೆ: ಗುಂಪು, ಸೈನ್ಯ; ಗಜ: ಆನೆ; ಅಶ್ವ: ಕುದುರೆ; ಬಿಗಿ: ಬಂಧಿಸು; ಗಜಬಜ: ಗೊಂದಲ; ಭಟ: ಸೈನಿಕ; ಸ್ತೋಮ: ಗುಂಪು;

ಪದವಿಂಗಡಣೆ:
ಮಿಡಿದನ್+ಅರ್ಜುನ +ಧನುವ +ಯಮಳರು
ತುಡುಕಿದರು +ಕಯ್ದುಗಳ+ ಸಾತ್ಯಕಿ
ಮಿಡುಕಿದನು +ಮರುಗಿದರು+ ಪಂಚ+ದ್ರೌಪದೀ+ಸುತರು
ಒಡೆಯನ್+ಅಳಿವಿನಲ್+ಎಲ್ಲಿಯದು +ನೃಪ
ನುಡಿದ +ನುಡಿಯೆನುತ್+ಅನಿಲತನುಜನ
ಪಡೆ +ಗಜಾಶ್ವವ+ ಬಿಗಿಯೆ +ಗಜಬಜಿಸಿತು +ಭಟಸ್ತೋಮ

ಅಚ್ಚರಿ:
(೧) ನುಡಿ ಪದದ ಬಳಕೆ – ನೃಪನುಡಿದ ನುಡಿಯೆನುತನಿಲತನುಜನ

ಪದ್ಯ ೩೯: ದೇವತೆಗಳು ಯಾರ ಮುಡಿಗೆ ಹೂ ಮಳೆಗರೆದರು?

ಅರಸ ಕೇಳಾಶ್ಚರಿಯವನು ನಿ
ಮ್ಮರಸನಾಹವ ಸಫಲ ಸುರಕುಲ
ವರಳ ಮಳೆಗರೆದುದು ಕಣಾ ಕುರುಪತಿಯ ಸಿರಿಮುಡಿಗೆ
ಅರಿನೃಪರು ತಲೆಗುತ್ತಿದರು ಮುರ
ಹರ ಯುಧಿಷ್ಠಿರ ಪಾರ್ಥ ಯಮಳರು
ಬೆರಲ ಮೂಗಿನಲಿದ್ದು ಸುಯ್ದರು ಬಯ್ದು ದುಷ್ಕೃತವ (ಗದಾ ಪರ್ವ, ೭ ಸಂಧಿ, ೩೯ ಪದ್ಯ)

ತಾತ್ಪರ್ಯ:
ಧೃತರಾಷ್ಟ್ರ, ಆಶ್ಚರ್ಯಕರವಾದ ಸಂಗತಿಯನ್ನು ಕೇಳು. ಕೌರವನು ಯುದ್ಧದಲ್ಲಿ ಸಫಲನಾದನು. ಕೌರವನ ಸಿರಿಮುಡಿಗೆ ದೇವತೆಗಳು ಹೂ ಮಳೆಗರೆದರು. ವೈರಿರಾಜರು ತಲೆ ತಗ್ಗಿಸಿದರು. ಶ್ರೀಕೃಷ್ಣನೂ, ಪಾಂಡವರೂ ಮೂಗಿನ ಮೇಲೆ ಬೆರಳಿಟ್ಟು ನಿಟ್ಟುಸಿರುಗರೆದು ತಮ್ಮ ಪಾಪ ಕರ್ಮವನ್ನು ಬೈದುಕೊಂಡರು.

ಅರ್ಥ:
ಅರಸ: ರಾಜ; ಆಶ್ಚರಿಯ: ಅದ್ಭುತ; ಅರಸ: ರಾಜ; ಆಹವ: ಯುದ್ಧ; ಸಫಲ: ಫಲಕಾರಿಯಾದ; ಸುರಕುಲ: ದೇವತೆಗಳ ಗುಂಪು; ಅರಳ: ಹೂವು; ಮಳೆ: ವರ್ಶ; ಸಿರಿಮುಡಿ: ಶ್ರೇಷ್ಠವಾದ ಶಿರ; ಅರಿ: ವೈರಿ; ನೃಪ: ರಾಜ; ತಲೆ: ಶಿರ; ಕುತ್ತು: ತಗ್ಗಿಸು; ಮುರಹರ: ಕೃಷ್ಣ; ಯಮಳ: ಅವಳಿ ಮಕ್ಕಳು; ಬೆರಳು: ಅಂಗುಲಿ; ಮೂಗು: ನಾಸಿಕ; ಸುಯ್ದು: ನಿಟ್ಟುಸಿರು; ಬಯ್ದು: ಜರೆದು; ದುಷ್ಕೃತ: ಕೆಟ್ಟ ಕೆಲಸ, ಕರ್ಮ;

ಪದವಿಂಗಡಣೆ:
ಅರಸ +ಕೇಳ್+ಆಶ್ಚರಿಯವನು +ನಿ
ಮ್ಮರಸನ್+ಆಹವ +ಸಫಲ+ ಸುರಕುಲವ್
ಅರಳ +ಮಳೆಗರೆದುದು +ಕಣಾ +ಕುರುಪತಿಯ +ಸಿರಿಮುಡಿಗೆ
ಅರಿ+ನೃಪರು +ತಲೆಗುತ್ತಿದರು +ಮುರ
ಹರ +ಯುಧಿಷ್ಠಿರ +ಪಾರ್ಥ +ಯಮಳರು
ಬೆರಳ+ ಮೂಗಿನಲಿದ್ದು+ ಸುಯ್ದರು+ ಬಯ್ದು +ದುಷ್ಕೃತವ

ಅಚ್ಚರಿ:
(೧) ಅರಸ, ನೃಪ -ಸಮಾನಾರ್ಥಕ ಪದ
(೨) ಜಯವನ್ನು ಆಚರಿಸಿದ ಪರಿ – ಸುರಕುಲವರಳ ಮಳೆಗರೆದುದು ಕಣಾ ಕುರುಪತಿಯ ಸಿರಿಮುಡಿಗೆ

ಪದ್ಯ ೩೮: ಕೌರವನನ್ನು ಅಮರಗಣ ಹೇಗೆ ಹೊಗಳಿತು?

ಮೇಲೆ ಕಳವಳವಾಯ್ತು ದಿಕ್ಕಿನ
ಮೂಲೆ ಬಿರಿಯೆ ಪಿಶಾಚರಾಕ್ಷಸ
ಜಾಲ ವಿದ್ಯಾಧರ ಮಹೋರಗ ಯಕ್ಷ ಕಿನ್ನರರು
ಆಳು ನೀನಹೆ ನಳ ನಹುಷ ಭೂ
ಪಾಲಕುಲದಲಭಂಗನಾದೆ ಕ
ರಾಳಭುಜಬಲ ನೀನೆನುತ ಕೊಂಡಾಡಿತಮರಗಣಾ (ಗದಾ ಪರ್ವ, ೭ ಸಂಧಿ, ೩೮ ಪದ್ಯ)

ತಾತ್ಪರ್ಯ:
ಆಕಾಶದಲ್ಲಿ ಮಹಾಕೋಲಾಹಲವಾಯಿತು. ಪಿಶಾಚರು, ರಾಕ್ಷಸರು, ವಿದ್ಯಾಧರರು, ಉರಗರು, ಯಕ್ಷಕಿನ್ನನರು, ವೀರನೆಂದರೆ ನೀನೇ, ನಲ ನಹುಷದ ವಂಶದಲ್ಲಿ ಹುಟ್ಟಿ ವಿಜಯಿಯಾದೆ. ಕೌರವ, ನೀನು ಕರಾಳ ಬಾಹುಬಲವನ್ನುಳ್ಳವನು ಎಂದು ಕೂಗಿದರು.

ಅರ್ಥ:
ಕಳವಳ: ಗೊಂದಲ; ದಿಕ್ಕು: ದಿಶೆ; ಮೂಲೆ: ಕೊನೆ; ಬಿರಿ: ಹೊಡೆ, ಸೀಳು; ಪಿಶಾಚ: ದೆವ್ವ; ರಾಕ್ಷಸ: ಅಸುರ; ಜಾಲ: ಬಲೆ, ಸಮೂಹ; ಉರಗ: ಹಾವು; ಆಳು: ಪರಾಕ್ರಮಿ, ಶೂರ; ಭೂಪಾಲಕ: ರಾಜ; ಕುಲ: ವಂಶ; ಭಂಗ: ಸೋಲು, ಮುರಿ; ಅಭಂಗ: ಜಯಶಾಲಿ; ಕರಾಳ: ದುಷ್ಟ; ಭುಜಬಲ: ಪರಾಕ್ರಮಿ; ಕೊಂಡಾಡು: ಹೊಗಳು; ಅಮರಗಣ: ದೇವತೆಗಳ ಗುಂಪು;

ಪದವಿಂಗಡಣೆ:
ಮೇಲೆ +ಕಳವಳವಾಯ್ತು +ದಿಕ್ಕಿನ
ಮೂಲೆ +ಬಿರಿಯೆ +ಪಿಶಾಚ+ರಾಕ್ಷಸ
ಜಾಲ +ವಿದ್ಯಾಧರ +ಮಹ+ಉರಗ +ಯಕ್ಷ+ ಕಿನ್ನರರು
ಆಳು +ನೀನಹೆ +ನಳ+ ನಹುಷ +ಭೂ
ಪಾಲ+ಕುಲದಲ್+ಅಭಂಗನಾದೆ +ಕ
ರಾಳ+ಭುಜಬಲ +ನೀನೆನುತ +ಕೊಂಡಾಡಿತ್+ಅಮರಗಣಾ

ಅಚ್ಚರಿ:
(೧) ದುರ್ಯೋಧನನನ್ನು ಹೊಗಳುವ ಪರಿ – ಭೂಪಾಲಕುಲದಲಭಂಗನಾದೆ ಕರಾಳಭುಜಬಲ ನೀನೆನುತ ಕೊಂಡಾಡಿತಮರಗಣಾ

ಪದ್ಯ ೩೭: ದುರ್ಯೋಧನನು ಏನು ಹೇಳುತ್ತಾ ಗದೆಯನ್ನು ತಿರುಗಿಸಿದನು?

ಮಡಿದವನ ಹೊಯ್ಯೆನು ಧನಂಜಯ
ತೊಡು ಮಹಾಸ್ತ್ರವನವನಿಪತಿ ಬಿಲು
ದುಡುಕು ಯಮಳರು ಕೈದುಗೊಳಿ ಸಾತ್ಯಕಿ ಶರಾಸನವ
ಹಿಡಿ ಶಿಖಂಡಿ ದ್ರುಪದಸುತರವ
ಗಡಿಸಿರೈ ನಿಮ್ಮವನ ಹರಿಬಕೆ
ಮಿಡುಕುವಡೆ ಬಹುದೆನುತ ತೂಗಿದನವನಿಪತಿ ಗದೆಯ (ಗದಾ ಪರ್ವ, ೭ ಸಂಧಿ, ೩೭ ಪದ್ಯ)

ತಾತ್ಪರ್ಯ:
ಕೌರವನು ಗರ್ಜಿಸುತ್ತಾ, ಸತ್ತು ಹೋದವನನ್ನು ನಾನು ಹೊಡೆಯುವುದಿಲ್ಲ, ಅರ್ಜುನ ಮಹಾಸ್ತ್ರವನ್ನು ಹೂದು, ಧರ್ಮಜ ಬಿಲ್ಲನ್ನು ಹಿಡಿ, ನಕುಲ ಸಹದೇವರು ಆಯುಧಗಳನ್ನು ಹಿದಿಯಲಿ, ಸಾತ್ಯಕಿ ಬಿಲ್ಲನ್ನು ಹಿಡಿ, ಶಿಖಂಡಿ, ಧೃಷ್ಟದ್ಯುಮ್ನರೇ ನನ್ನನ್ನು ಇದಿರಿಸಿ, ನಿಮ್ಮವನ ಸೇಡನ್ನು ತೀರಿಸಲು ಬನ್ನಿ ಎಂದು ಕೌರವನು ಗದೆಯನ್ನು ತಿರುಗಿಸಿದನು.

ಅರ್ಥ:
ಮಡಿ: ಸಾವು; ಹೊಯ್ಯು: ಹೊಡೆ; ತೊಡು: ಹೂಡು; ಮಹಾಸ್ತ್ರ: ಶ್ರೇಷ್ಠವಾದ ಶಸ್ತ್ರ; ಬಿಲು: ಬಿಲ್ಲು, ಚಾಪ; ತುಡುಕು: ಹೋರಾಡು, ಸೆಣಸು; ಯಮಳರು: ಅವಳಿ ಮಕ್ಕಳು; ಕೈದು: ಆಯುಧ; ಶರ: ಬಾಣ; ಶರಾಸನ: ಬಿಲ್ಲು; ಹಿಡಿ: ಗ್ರಹಿಸು; ಸುತ: ಮಗ; ಅವಗಡಿಸು: ಸೋಲಿಸು; ಹರಿಬ: ಕೆಲಸ, ಕಾರ್ಯ; ಮಿಡುಕು: ಅಲುಗಾಟ, ಚಲನೆ; ತೂಗು: ಅಲ್ಲಾಡಿಸು; ಅವನಿಪತಿ: ರಾಜ; ಗದೆ: ಮುದ್ಗರ;

ಪದವಿಂಗಡಣೆ:
ಮಡಿದವನ +ಹೊಯ್ಯೆನು+ ಧನಂಜಯ
ತೊಡು +ಮಹಾಸ್ತ್ರವನ್+ಅವನಿಪತಿ +ಬಿಲು
ದುಡುಕು +ಯಮಳರು +ಕೈದುಗೊಳಿ +ಸಾತ್ಯಕಿ +ಶರಾಸನವ
ಹಿಡಿ +ಶಿಖಂಡಿ +ದ್ರುಪದಸುತರ್+ಅವ
ಗಡಿಸಿರೈ +ನಿಮ್ಮವನ+ ಹರಿಬಕೆ
ಮಿಡುಕುವಡೆ +ಬಹುದೆನುತ +ತೂಗಿದನ್+ಅವನಿಪತಿ +ಗದೆಯ

ಅಚ್ಚರಿ:
(೧) ಬಿಲ್ಲು ಎಂದು ಹೇಳಲು ಶರಾಸನ ಪದದ ಬಳಕೆ

ಪದ್ಯ ೩೬: ಕೌರವನ ಹೊಡೆತದಿಂದ ಭೀಮನ ಸ್ಥಿತಿ ಹೇಗಿತ್ತು?

ಮತ್ತೆ ಹೊಯ್ದನು ಭೀಮಸೇನನ
ನೆತ್ತಿಯನು ನಿಪ್ಪಸರದಲಿ ಕಳೆ
ಹತ್ತಿ ಝೋಂಪಿಸಿ ತಿರುಗಿ ಬಿದ್ದನು ಬಿಗಿದ ಮೂರ್ಛೆಯಲಿ
ಕೆತ್ತ ಕಂಗಳ ಸುಯ್ಲ ಲಹರಿಯ
ಸುತ್ತಲೊಗುವರುಣಾಂಬುಗಳ ಕೆಲ
ದತ್ತ ಸಿಡಿದಿಹ ಗದೆಯ ಭಟನೊರಗಿದನು ಮರವೆಯಲಿ (ಗದಾ ಪರ್ವ, ೭ ಸಂಧಿ, ೩೬ ಪದ್ಯ)

ತಾತ್ಪರ್ಯ:
ಕೌರವನು ಮತ್ತೆ ಭೀಮನ ನೆತ್ತಿಯನ್ನು ಸರ್ವಶಕ್ತಿಯಿಂದಲೂ ಹೊಡೆಯಲು, ಭೀಮನು ಓಲಿ ಮೂರ್ಛೆಯಿಮ್ದ ಕೆಳಬಿದ್ದನು. ಕಣ್ಣುಗಳು ನೆಟ್ಟವು. ಉಸಿರಾಡುವಾಗ ರಕ್ತದ ಹನಿಗಳು ಒಸರಿಸಿದವು. ಗದೆ ಪಕ್ಕಕ್ಕೆ ಹಾರಿತು, ಭೀಮನು ನೆಲದ ಮೇಲೊರಗಿದನು.

ಅರ್ಥ:
ಮತ್ತೆ: ಪುನಃ; ಹೊಯ್ದು: ಹೊಡೆ; ನೆತ್ತಿ: ಶಿರ; ನಿಪ್ಪಸರ: ಅತಿಶಯ, ಹೆಚ್ಚಳ; ಕಳೆ: ಬೀಡು, ತೊರೆ, ಹೋಗಲಾಡಿಸು; ಝೋಂಪು: ಮೂರ್ಛೆ; ತಿರುಗು: ಹೊರಲಾಡು; ಬಿದ್ದು: ಎರಗು, ಬೀಳು; ಬಿಗಿ: ಕಟ್ಟು, ಬಂಧಿಸು; ಮೂರ್ಛೆ: ಎಚ್ಚರವಿಲ್ಲದ ಸ್ಥಿತಿ; ಕೆತ್ತು: ನಡುಕ, ಸ್ಪಂದನ; ಕಂಗಳು: ಕಣ್ಣು; ಸುಯ್ಲು: ನಿಟ್ಟುಸಿರು; ಲಹರಿ: ರಭಸ, ಆವೇಗ; ಸುತ್ತಲು: ಎಲ್ಲಾಕಡೆ; ಅರುಣಾಂಬು: ರಕ್ತ; ಸಿಡಿ: ಹಾರು; ಗದೆ: ಮುದ್ಗರ; ಭಟ: ಸೈನಿಕ; ಒರಗು: ಕೆಳಕ್ಕೆ ಬಾಗು; ಮರವೆ: ಮರವು, ಜ್ಞಾಪಕವಿಲ್ಲದಿರುವುದು;

ಪದವಿಂಗಡಣೆ:
ಮತ್ತೆ +ಹೊಯ್ದನು +ಭೀಮಸೇನನ
ನೆತ್ತಿಯನು +ನಿಪ್ಪಸರದಲಿ +ಕಳೆ
ಹತ್ತಿ+ ಝೋಂಪಿಸಿ +ತಿರುಗಿ +ಬಿದ್ದನು +ಬಿಗಿದ +ಮೂರ್ಛೆಯಲಿ
ಕೆತ್ತ+ ಕಂಗಳ +ಸುಯ್ಲ+ ಲಹರಿಯ
ಸುತ್ತಲೊಗುವ್+ಅರುಣಾಂಬುಗಳ +ಕೆಲ
ದತ್ತ +ಸಿಡಿದಿಹ +ಗದೆಯ +ಭಟನ್+ಒರಗಿದನು+ಮರವೆಯಲಿ

ಅಚ್ಚರಿ:
(೧) ಮೂರ್ಛೆ, ಮರವೆ – ಸಾಮ್ಯಾರ್ಥ ಪದ
(೨) ಭೀಮನನ್ನು ಗದೆಯ ಭಟ ಎಂದು ಕರೆದಿರುವುದು

ಪದ್ಯ ೩೫: ಕೌರವನು ಭೀಮನ ಮೇಲೆ ಹೇಗೆ ಆಕ್ರಮಣ ಮಾಡಿದನು?

ಅವನಿಪತಿ ಕೇಳ್ ಭೀಮಸೇನನ
ತಿವಿಗುಳನು ತಪ್ಪಿಸಿ ಸುಯೋಧನ
ಕವಿದು ನಾಭಿಗೆ ತೋರಿ ಜಂಘೆಗೆ ಹೂಡಿ ಝಳಪದಲಿ
ಲವಣಿಯಲಿ ಲಳಿಯೆದ್ದು ಹೊಯ್ದನು
ಪವನಜನ ಭುಜಶಿರವ ಸೀಸಕ
ಕವಚವಜಿಗಿಜಿಯಾಗೆ ಬೀಳೆನುತರಸ ಬೊಬ್ಬಿರಿದ (ಗದಾ ಪರ್ವ, ೭ ಸಂಧಿ, ೩೫ ಪದ್ಯ)

ತಾತ್ಪರ್ಯ:
ಎಲೈ ರಾಜನೇ ಕೇಳು, ಭೀಮನ ತಿವಿತವನ್ನು ತಪ್ಪಿಸಿಕೊಂಡು ಕೌರಾನು ನಾಭಿಗೆ ಗುರಿಯಿಟ್ಟು ಜಂಘೆಗೆ ಹೂಡಿ, ಮೇಲೆ ಹಾರಿ ಭೀಮನ ತಲೆ, ಭುಜಗಳಿದ್ದ ಸೀಸಕ, ಕವಚಗಳನ್ನು ಪುಡಿಪುಡಿಯಾಗುವಂತೆ ಹೊಡೆದು ಗರ್ಜಿಸಿದನು.

ಅರ್ಥ:
ಅವನಿಪತಿ: ರಾಜ; ಕೇಳ್: ಆಲಿಸು; ತಿವಿ: ಚುಚ್ಚು; ತಪ್ಪಿಸು: ಸುಳ್ಳಾಗು; ಕವಿ: ಆವರಿಸು; ನಾಭಿ: ಹೊಕ್ಕಳು; ತೋರು: ಪ್ರಕಟಿಸು; ಜಂಘೆ: ತೊಡೆ; ಝಳಪ: ವೇಗ; ಲವಣಿ: ಕಾಂತಿ; ಲಳಿ: ರಭಸ; ಎದ್ದು: ಮೇಲೆ ಬಂದು; ಹೊಯ್ದು: ಹೊಡೆ; ಪವನಜ: ಭೀಮ; ಭುಜ: ಬಾಹು; ಶಿರ: ತಲೆ; ಸೀಸಕ: ಶಿರಸ್ತ್ರಾಣ; ಕವಚ: ಹೊದಿಕೆ; ಜಿಗಿಜಿಯಾಗಿ: ಪುಡಿಯಾಗಿ; ಬೀಳು: ಎರಗು, ಬಾಗು; ಬೊಬ್ಬಿರಿ: ಗರ್ಜಿಸು; ಅರಸ: ರಾಜ;

ಪದವಿಂಗಡಣೆ:
ಅವನಿಪತಿ +ಕೇಳ್ +ಭೀಮಸೇನನ
ತಿವಿಗುಳನು+ ತಪ್ಪಿಸಿ+ ಸುಯೋಧನ
ಕವಿದು +ನಾಭಿಗೆ +ತೋರಿ +ಜಂಘೆಗೆ +ಹೂಡಿ +ಝಳಪದಲಿ
ಲವಣಿಯಲಿ +ಲಳಿಯೆದ್ದು+ ಹೊಯ್ದನು
ಪವನಜನ +ಭುಜ+ಶಿರವ +ಸೀಸಕ
ಕವಚವ+ಜಿಗಿಜಿಯಾಗೆ +ಬೀಳೆನುತ್+ಅರಸ +ಬೊಬ್ಬಿರಿದ

ಅಚ್ಚರಿ:
(೧) ಲ ಕಾರದ ಜೋಡಿ ಪದ – ಲವಣಿಯಲಿ ಲಳಿಯೆದ್ದು
(೨) ಅವನಿಪತಿ, ಅರಸ – ಸಮಾನಾರ್ಥಕ ಪದ

ಪದ್ಯ ೩೪: ಭೀಮನು ಕೌರವನನ್ನು ಹೇಗೆ ಹಂಗಿಸಿದನು?

ಹೊಯ್ದು ತೋರಾ ಬಂಜೆ ನುಡಿಯಲಿ
ಬಯ್ದಡಧಿಕನೆ ಬಾಹುವಿಂ ಹೊರ
ಹೊಯ್ದವನೊ ಮೇಣ್ ಮುಖದಲೋ ನೀನಾರು ಜಾತಿಯಲಿ
ಕಯ್ದು ನಿನಗಿದೆ ಲಕ್ಷ್ಯ ಪಣ ನಮ
ಗೆಯ್ದುವಡೆ ಗುಪ್ತಪ್ರತಾಪವ
ನೆಯ್ದೆ ಪ್ರಕಟಿಸೆನುತ್ತ ತಿವಿದನು ಭೀಮ ಕುರುಪತಿಯ (ಗದಾ ಪರ್ವ, ೭ ಸಂಧಿ, ೩೪ ಪದ್ಯ)

ತಾತ್ಪರ್ಯ:
ಎಲೈ ದುರ್ಯೋಧನ, ಕೇವಲ ನಿಷ್ಪ್ರಯೋಜಕ ಮಾತುಗಳಿಂದ ಬೈದರೆ ನೀನೇನು ದೊಡ್ಡವನೇ? ಬಾಯಿಂದ ಗದಾಪ್ರಹಾರ ಮಾಡುವೆಯೋ ಅಥವ ಕೈಗಳಿಂದ ತೋರುವೆಯೋ? ನೀನು ಜಾತಿಯಿಂದ ಕ್ಷತ್ರಿಯನಲ್ಲವೇ? ನಿನ್ನ ಕೈಯಲ್ಲಿ ಆಯುಧವಿದೆ, ಗುರಿಯಾಗಿ ನಾನಿದ್ದೇನೆ, ನಿನ್ನಲ್ಲಡಗಿರುವ ಪರಾಕ್ರಮವನ್ನು ಪ್ರಕಟಿಸು ಎನ್ನುತ್ತಾ ಭಿಮನು ಕೌರವನನ್ನು ತಿವಿದನು.

ಅರ್ಥ:
ಹೊಯ್ದು: ಹೊಡೆ; ತೋರು: ಗೋಚರಿಸು; ಬಂಜೆ: ನಿಷ್ಫಲ; ನುಡಿ: ಮಾತು; ಬಯ್ದು: ಜರೆ, ಹಂಗಿಸು; ಅಧಿಕ: ಹೆಚ್ಚು; ಬಾಹು: ತೋಳು; ಮೇಣ್: ಅಥವ; ಮುಖ: ಆನನ; ಜಾತಿ: ಕುಲ; ಕಯ್ದು: ಆಯುಧ; ಪಣ: ಸ್ಪರ್ಧೆ, ಧನ; ಗುಪ್ತ: ಗುಟ್ಟು; ಪ್ರತಾಪ: ಶಕ್ತಿ, ಪರಾಕ್ರಮ; ಪ್ರಕಟಿಸು: ತೋರು; ತಿವಿ: ಚುಚ್ಚು;

ಪದವಿಂಗಡಣೆ:
ಹೊಯ್ದು +ತೋರಾ +ಬಂಜೆ +ನುಡಿಯಲಿ
ಬಯ್ದಡ್+ಅಧಿಕನೆ +ಬಾಹುವಿಂ +ಹೊರ
ಹೊಯ್ದವನೊ+ ಮೇಣ್ +ಮುಖದಲೋ +ನೀನಾರು +ಜಾತಿಯಲಿ
ಕಯ್ದು+ ನಿನಗಿದೆ +ಲಕ್ಷ್ಯ+ ಪಣ +ನಮಗ್
ಎಯ್ದುವಡೆ +ಗುಪ್ತ+ಪ್ರತಾಪವನ್
ಎಯ್ದೆ +ಪ್ರಕಟಿಸ್+ಎನುತ್ತ+ ತಿವಿದನು +ಭೀಮ +ಕುರುಪತಿಯ

ಅಚ್ಚರಿ:
(೧) ಕೌರವನನ್ನು ಹಂಗಿಸುವ ಪರಿ – ಬಂಜೆ ನುಡಿಯಲಿಬಯ್ದಡಧಿಕನೆ
(೨) ಕೌರವನನ್ನು ಕೆರಳಿಸುವ ಪರಿ – ಬಾಹುವಿಂ ಹೊರಹೊಯ್ದವನೊ ಮೇಣ್ ಮುಖದಲೋ ನೀನಾರು ಜಾತಿಯಲಿ