ಪದ್ಯ ೧೭: ಭೀಮನು ಕೌರವನ ಯಾವ ಭಾಗಕ್ಕೆ ಹೊಡೆದನು?

ಧರಣಿಪತಿ ಕೇಳ್ ಭೀಮಸೇನನ
ಧರಧುರದ ಹೊಯ್ಲುಗಳ ಗದೆಯಲಿ
ಹೊರಳಿಗಿಡಿ ಝೊಂಪಿಸಿದುವುರು ಖದ್ಯೋತ ಮಂಡಲವ
ಅರಸನೆರಗಿದಡನಿಲಸುತ ಪೈ
ಸರಿಸಿ ಕಳಚಿದನಾ ಕ್ಷಣದೊಳ
ಬ್ಬರಿಸಿ ಹೊಯ್ದನು ಭೀಮ ಕೌರವನೃಪನ ಕಂಧರವ (ಗದಾ ಪರ್ವ, ೭ ಸಂಧಿ, ೧೭ ಪದ್ಯ)

ತಾತ್ಪರ್ಯ:
ರಾಜನೇ ಕೇಳು, ಭೀಮನು ಗದೆಯಂದ ಹೊಡೆದರೆ, ಅದರಿಂದುದುರುವ ಕಿಡಿಗಳು ಸೂರ್ಯಮಂಡಲವನ್ನು ಮುಸುಕುವುವು. ಕೌರವನು ಗದೆಯಿಂದ ಹೊಡೆಯಲು ಭೀಮನು ತಪ್ಪಿಸಿಕೊಂಡು, ಅಬ್ಬರಿಸಿ ಶತ್ರುವಿನ ಕೊರಳಿಗೆ ಹೊಡೆದನು.

ಅರ್ಥ:
ಧರಣಿಪತಿ: ರಾಜ; ಕೇಳು: ಆಲಿಸು; ಧರಧುರ: ಆರ್ಭಟ, ಕೋಲಾಹಲ; ಹೊಯ್ಲು: ಹೊಡೆತ; ಗದೆ: ಮುದ್ಗರ; ಹೊರಳು: ತಿರುಗು; ಕಿಡಿ: ಬೆಂಕಿ; ಝೊಂಪಿಸು: ಮೈಮರೆ, ಎಚ್ಚರತಪ್ಪು; ಉರು: ಹೆಚ್ಚಾದ, ಅತಿದೊಡ್ಡ; ಖದ್ಯೋತ: ಸೂರ್ಯ; ಮಂಡಲ: ವರ್ತುಲಾಕಾರ; ಅರಸ: ರಾಜ; ಎರಗು: ಬಾಗು; ಅನಿಲಸುತ: ಭೀಮ; ಪೈಸರಿಸು: ಹಿಮ್ಮೆಟ್ಟು, ಹಿಂಜರಿ; ಕಳಚು: ಸಡಲಿಸು; ಕ್ಷಣ: ಸಮಯದ ಪ್ರಮಾಣ; ಅಬ್ಬರಿಸು: ಗರ್ಜಿಸು; ಹೊಯ್ದು: ಹೊಡೆ; ನೃಪ: ರಾಜ; ಕಂಧರ: ಕೊರಳು;

ಪದವಿಂಗಡಣೆ:
ಧರಣಿಪತಿ +ಕೇಳ್ +ಭೀಮಸೇನನ
ಧರಧುರದ +ಹೊಯ್ಲುಗಳ +ಗದೆಯಲಿ
ಹೊರಳಿ+ಕಿಡಿ +ಝೊಂಪಿಸಿದುವ್+ಉರು +ಖದ್ಯೋತ +ಮಂಡಲವ
ಅರಸನ್+ಎರಗಿದಡ್+ಅನಿಲಸುತ +ಪೈ
ಸರಿಸಿ+ ಕಳಚಿದನಾ +ಕ್ಷಣದೊಳ್
ಅಬ್ಬರಿಸಿ+ ಹೊಯ್ದನು+ ಭೀಮ +ಕೌರವ+ನೃಪನ +ಕಂಧರವ

ಅಚ್ಚರಿ:
(೧) ರೂಪಕದ ಪ್ರಯೋಗ – ಗದೆಯಲಿ ಹೊರಳಿಗಿಡಿ ಝೊಂಪಿಸಿದುವುರು ಖದ್ಯೋತ ಮಂಡಲವ

ನಿಮ್ಮ ಟಿಪ್ಪಣಿ ಬರೆಯಿರಿ