ಪದ್ಯ ೩೫: ಕೌರವನು ಭೀಮನ ಮೇಲೆ ಹೇಗೆ ಆಕ್ರಮಣ ಮಾಡಿದನು?

ಅವನಿಪತಿ ಕೇಳ್ ಭೀಮಸೇನನ
ತಿವಿಗುಳನು ತಪ್ಪಿಸಿ ಸುಯೋಧನ
ಕವಿದು ನಾಭಿಗೆ ತೋರಿ ಜಂಘೆಗೆ ಹೂಡಿ ಝಳಪದಲಿ
ಲವಣಿಯಲಿ ಲಳಿಯೆದ್ದು ಹೊಯ್ದನು
ಪವನಜನ ಭುಜಶಿರವ ಸೀಸಕ
ಕವಚವಜಿಗಿಜಿಯಾಗೆ ಬೀಳೆನುತರಸ ಬೊಬ್ಬಿರಿದ (ಗದಾ ಪರ್ವ, ೭ ಸಂಧಿ, ೩೫ ಪದ್ಯ)

ತಾತ್ಪರ್ಯ:
ಎಲೈ ರಾಜನೇ ಕೇಳು, ಭೀಮನ ತಿವಿತವನ್ನು ತಪ್ಪಿಸಿಕೊಂಡು ಕೌರಾನು ನಾಭಿಗೆ ಗುರಿಯಿಟ್ಟು ಜಂಘೆಗೆ ಹೂಡಿ, ಮೇಲೆ ಹಾರಿ ಭೀಮನ ತಲೆ, ಭುಜಗಳಿದ್ದ ಸೀಸಕ, ಕವಚಗಳನ್ನು ಪುಡಿಪುಡಿಯಾಗುವಂತೆ ಹೊಡೆದು ಗರ್ಜಿಸಿದನು.

ಅರ್ಥ:
ಅವನಿಪತಿ: ರಾಜ; ಕೇಳ್: ಆಲಿಸು; ತಿವಿ: ಚುಚ್ಚು; ತಪ್ಪಿಸು: ಸುಳ್ಳಾಗು; ಕವಿ: ಆವರಿಸು; ನಾಭಿ: ಹೊಕ್ಕಳು; ತೋರು: ಪ್ರಕಟಿಸು; ಜಂಘೆ: ತೊಡೆ; ಝಳಪ: ವೇಗ; ಲವಣಿ: ಕಾಂತಿ; ಲಳಿ: ರಭಸ; ಎದ್ದು: ಮೇಲೆ ಬಂದು; ಹೊಯ್ದು: ಹೊಡೆ; ಪವನಜ: ಭೀಮ; ಭುಜ: ಬಾಹು; ಶಿರ: ತಲೆ; ಸೀಸಕ: ಶಿರಸ್ತ್ರಾಣ; ಕವಚ: ಹೊದಿಕೆ; ಜಿಗಿಜಿಯಾಗಿ: ಪುಡಿಯಾಗಿ; ಬೀಳು: ಎರಗು, ಬಾಗು; ಬೊಬ್ಬಿರಿ: ಗರ್ಜಿಸು; ಅರಸ: ರಾಜ;

ಪದವಿಂಗಡಣೆ:
ಅವನಿಪತಿ +ಕೇಳ್ +ಭೀಮಸೇನನ
ತಿವಿಗುಳನು+ ತಪ್ಪಿಸಿ+ ಸುಯೋಧನ
ಕವಿದು +ನಾಭಿಗೆ +ತೋರಿ +ಜಂಘೆಗೆ +ಹೂಡಿ +ಝಳಪದಲಿ
ಲವಣಿಯಲಿ +ಲಳಿಯೆದ್ದು+ ಹೊಯ್ದನು
ಪವನಜನ +ಭುಜ+ಶಿರವ +ಸೀಸಕ
ಕವಚವ+ಜಿಗಿಜಿಯಾಗೆ +ಬೀಳೆನುತ್+ಅರಸ +ಬೊಬ್ಬಿರಿದ

ಅಚ್ಚರಿ:
(೧) ಲ ಕಾರದ ಜೋಡಿ ಪದ – ಲವಣಿಯಲಿ ಲಳಿಯೆದ್ದು
(೨) ಅವನಿಪತಿ, ಅರಸ – ಸಮಾನಾರ್ಥಕ ಪದ

ನಿಮ್ಮ ಟಿಪ್ಪಣಿ ಬರೆಯಿರಿ