ಪದ್ಯ ೩೯: ದೇವತೆಗಳು ಯಾರ ಮುಡಿಗೆ ಹೂ ಮಳೆಗರೆದರು?

ಅರಸ ಕೇಳಾಶ್ಚರಿಯವನು ನಿ
ಮ್ಮರಸನಾಹವ ಸಫಲ ಸುರಕುಲ
ವರಳ ಮಳೆಗರೆದುದು ಕಣಾ ಕುರುಪತಿಯ ಸಿರಿಮುಡಿಗೆ
ಅರಿನೃಪರು ತಲೆಗುತ್ತಿದರು ಮುರ
ಹರ ಯುಧಿಷ್ಠಿರ ಪಾರ್ಥ ಯಮಳರು
ಬೆರಲ ಮೂಗಿನಲಿದ್ದು ಸುಯ್ದರು ಬಯ್ದು ದುಷ್ಕೃತವ (ಗದಾ ಪರ್ವ, ೭ ಸಂಧಿ, ೩೯ ಪದ್ಯ)

ತಾತ್ಪರ್ಯ:
ಧೃತರಾಷ್ಟ್ರ, ಆಶ್ಚರ್ಯಕರವಾದ ಸಂಗತಿಯನ್ನು ಕೇಳು. ಕೌರವನು ಯುದ್ಧದಲ್ಲಿ ಸಫಲನಾದನು. ಕೌರವನ ಸಿರಿಮುಡಿಗೆ ದೇವತೆಗಳು ಹೂ ಮಳೆಗರೆದರು. ವೈರಿರಾಜರು ತಲೆ ತಗ್ಗಿಸಿದರು. ಶ್ರೀಕೃಷ್ಣನೂ, ಪಾಂಡವರೂ ಮೂಗಿನ ಮೇಲೆ ಬೆರಳಿಟ್ಟು ನಿಟ್ಟುಸಿರುಗರೆದು ತಮ್ಮ ಪಾಪ ಕರ್ಮವನ್ನು ಬೈದುಕೊಂಡರು.

ಅರ್ಥ:
ಅರಸ: ರಾಜ; ಆಶ್ಚರಿಯ: ಅದ್ಭುತ; ಅರಸ: ರಾಜ; ಆಹವ: ಯುದ್ಧ; ಸಫಲ: ಫಲಕಾರಿಯಾದ; ಸುರಕುಲ: ದೇವತೆಗಳ ಗುಂಪು; ಅರಳ: ಹೂವು; ಮಳೆ: ವರ್ಶ; ಸಿರಿಮುಡಿ: ಶ್ರೇಷ್ಠವಾದ ಶಿರ; ಅರಿ: ವೈರಿ; ನೃಪ: ರಾಜ; ತಲೆ: ಶಿರ; ಕುತ್ತು: ತಗ್ಗಿಸು; ಮುರಹರ: ಕೃಷ್ಣ; ಯಮಳ: ಅವಳಿ ಮಕ್ಕಳು; ಬೆರಳು: ಅಂಗುಲಿ; ಮೂಗು: ನಾಸಿಕ; ಸುಯ್ದು: ನಿಟ್ಟುಸಿರು; ಬಯ್ದು: ಜರೆದು; ದುಷ್ಕೃತ: ಕೆಟ್ಟ ಕೆಲಸ, ಕರ್ಮ;

ಪದವಿಂಗಡಣೆ:
ಅರಸ +ಕೇಳ್+ಆಶ್ಚರಿಯವನು +ನಿ
ಮ್ಮರಸನ್+ಆಹವ +ಸಫಲ+ ಸುರಕುಲವ್
ಅರಳ +ಮಳೆಗರೆದುದು +ಕಣಾ +ಕುರುಪತಿಯ +ಸಿರಿಮುಡಿಗೆ
ಅರಿ+ನೃಪರು +ತಲೆಗುತ್ತಿದರು +ಮುರ
ಹರ +ಯುಧಿಷ್ಠಿರ +ಪಾರ್ಥ +ಯಮಳರು
ಬೆರಳ+ ಮೂಗಿನಲಿದ್ದು+ ಸುಯ್ದರು+ ಬಯ್ದು +ದುಷ್ಕೃತವ

ಅಚ್ಚರಿ:
(೧) ಅರಸ, ನೃಪ -ಸಮಾನಾರ್ಥಕ ಪದ
(೨) ಜಯವನ್ನು ಆಚರಿಸಿದ ಪರಿ – ಸುರಕುಲವರಳ ಮಳೆಗರೆದುದು ಕಣಾ ಕುರುಪತಿಯ ಸಿರಿಮುಡಿಗೆ

ನಿಮ್ಮ ಟಿಪ್ಪಣಿ ಬರೆಯಿರಿ