ಪದ್ಯ ೪೦: ಪಾಂಡವರೇಕೆ ದುಃಖಿಸಿದರು?

ಮಿಡಿದನರ್ಜುನ ಧನುವ ಯಮಳರು
ತುಡುಕಿದರು ಕಯ್ದುಗಳ ಸಾತ್ಯಕಿ
ಮಿಡುಕಿದನು ಮರುಗಿದರು ಪಂಚದ್ರೌಪದೀಸುತರು
ಒಡೆಯನಳಿವಿನಲೆಲ್ಲಿಯದು ನೃಪ
ನುಡಿದ ನುಡಿಯೆನುತನಿಲತನುಜನ
ಪಡೆ ಗಜಾಶ್ವವ ಬಿಗಿಯೆ ಗಜಬಜಿಸಿತು ಭಟಸ್ತೋಮ (ಗದಾ ಪರ್ವ, ೭ ಸಂಧಿ, ೪೦ ಪದ್ಯ)

ತಾತ್ಪರ್ಯ:
ಅರ್ಜುನನು ಧನುಷ್ಟಂಕಾರ ಮಾಡಿದನು. ನಕುಲ ಸಹದೇವರು ಆಯುಧಗಳನ್ನು ಹಿದಿದರು. ಉಪಪಾಂಡವರೂ, ಸಾತ್ಯಕಿ, ದುಃಖಿಸಿದರು. ನಮ್ಮ ಒಡೆಯನು ಮರಣ ಹೊಂದಿದನೇ? ಧರ್ಮಜನ ಪ್ರತಿಜ್ಞೆ ಏನಾಯಿತು? ಎಂದುಕೊಂಡು ಆನೆ, ಕುದುರೆಗಳನ್ನು ಯುದ್ಧಕ್ಕೆ ಅನುವು ಮಾಡಿಕೊಂಡರು.

ಅರ್ಥ:
ಮಿಡಿ: ತವಕಿಸು; ಧನು: ಬಿಲ್ಲು; ಯಮಳ: ಅವಳಿ ಮಕ್ಕಳು; ತುಡುಕು: ಹೋರಾಡು, ಸೆಣಸು; ಕಯ್ದು: ಆಯುಧ; ಮಿಡುಕು: ಅಲುಗಾಟ, ಚಲನೆ; ಮರುಗು: ತಳಮಳ, ಸಂಕಟ; ಪಂಚ: ಐದು; ಸುತ: ಮಕ್ಕಳು; ಒಡೆಯ: ನಾಯಕ, ರಾಜ; ಅಳಿ: ನಾಶ; ನೃಪ: ರಾಜ; ನುಡಿ: ಮಾತಾಡು; ಅನಿಲ: ವಾಯು; ತನುಜ: ಮಗ; ಪಡೆ: ಗುಂಪು, ಸೈನ್ಯ; ಗಜ: ಆನೆ; ಅಶ್ವ: ಕುದುರೆ; ಬಿಗಿ: ಬಂಧಿಸು; ಗಜಬಜ: ಗೊಂದಲ; ಭಟ: ಸೈನಿಕ; ಸ್ತೋಮ: ಗುಂಪು;

ಪದವಿಂಗಡಣೆ:
ಮಿಡಿದನ್+ಅರ್ಜುನ +ಧನುವ +ಯಮಳರು
ತುಡುಕಿದರು +ಕಯ್ದುಗಳ+ ಸಾತ್ಯಕಿ
ಮಿಡುಕಿದನು +ಮರುಗಿದರು+ ಪಂಚ+ದ್ರೌಪದೀ+ಸುತರು
ಒಡೆಯನ್+ಅಳಿವಿನಲ್+ಎಲ್ಲಿಯದು +ನೃಪ
ನುಡಿದ +ನುಡಿಯೆನುತ್+ಅನಿಲತನುಜನ
ಪಡೆ +ಗಜಾಶ್ವವ+ ಬಿಗಿಯೆ +ಗಜಬಜಿಸಿತು +ಭಟಸ್ತೋಮ

ಅಚ್ಚರಿ:
(೧) ನುಡಿ ಪದದ ಬಳಕೆ – ನೃಪನುಡಿದ ನುಡಿಯೆನುತನಿಲತನುಜನ

ನಿಮ್ಮ ಟಿಪ್ಪಣಿ ಬರೆಯಿರಿ