ಪದ್ಯ ೪೩: ಅರ್ಜುನನು ಕೃಷ್ಣನಲ್ಲಿ ಏನೆಂದು ಬೇಡಿದನು?

ದೇವ ಬೆಸಸಿನ್ನನಿಲಸೂನು ಸ
ಜೀವನಹಿತನಿಬರ್ಹಣ ಪ್ರ
ಸ್ತಾವವನು ಕರುಣಿಸುವುದಾತನ ಧರ್ಮವಿಕೃತಿಗ
ನೀವು ಕಂಡಿರೆ ನಾಭಿ ಜಂಘೆಗೆ
ಡಾವರಿಸಿದನು ಹಲವು ಬಾರಿ ಜ
ಯಾವಲಂಬನವೆಂತು ಕೃಪೆಮಾಡೆಂದನಾ ಪಾರ್ಥ (ಗದಾ ಪರ್ವ,೭ ಸಂಧಿ, ೪೩ ಪದ್ಯ)

ತಾತ್ಪರ್ಯ:
ಅರ್ಜುನನು ಕೃಷ್ಣನ ಬಳಿಗೆ ಹೋಗಿ, ಭೀಮನು ಜೀವಿಸಿದ್ದಾನೆ, ಶತ್ರುವು ಹಲವು ಬಾರಿ ಅವನ ನಾಭಿ ಮತ್ತು ಜಂಘೆಗೂ ಹೊಡೆದಿದ್ದಾನೆ. ಶತ್ರುವಿನ ವಧೆ ಹೇಗಾಗಬೇಕೆಂದು ದಯವಿಟ್ಟು ತಿಳಿಸು ಎಂದು ಅರ್ಜುನನು ಬೇಡಿದನು.

ಅರ್ಥ:
ದೇವ: ಭಗವಂತ; ಬೆಸಸು: ಹೇಳು; ಅನಿಲಸೂನು: ಭೀಮ; ಸಜೀವ: ಪ್ರಾಣವಿರುವ; ಅಹಿತ: ವೈರಿ; ಪ್ರಸ್ತಾವ: ವಿಚಾರ ಹೇಳುವುದು; ಕರುಣಿಸು: ದಯೆ ತೋರು; ಧರ್ಮ: ಧಾರಣೆ ಮಾಡಿದುದು; ವಿಕೃತಿ: ಬದಲಾವಣೆ, ವ್ಯತ್ಯಾಸ, ಕುರೂಪ; ಕಂಡು: ನೋಡು; ನಾಭಿ: ಹೊಕ್ಕಳು; ಜಂಘೆ: ತೊಡೆ; ಡಾವರಿಸು: ಹೊಡೆ; ಹಲವು: ಬಹಳ; ಬಾರಿ: ಸಾರ್ತಿ; ಜಯ: ಗೆಲುವು; ಅವಲಂಬನ: ಆಶ್ರಯ, ಆಸರೆ; ಕೃಪೆ: ದಯೆ;

ಪದವಿಂಗಡಣೆ:
ದೇವ +ಬೆಸಸಿನ್ನ್+ಅನಿಲಸೂನು +ಸ
ಜೀವನ್+ಅಹಿತನಿಬರ್ಹಣ+ ಪ್ರ
ಸ್ತಾವವನು +ಕರುಣಿಸುವುದ್+ಆತನ +ಧರ್ಮ+ವಿಕೃತಿಗ
ನೀವು +ಕಂಡಿರೆ +ನಾಭಿ +ಜಂಘೆಗೆ
ಡಾವರಿಸಿದನು +ಹಲವು +ಬಾರಿ +ಜಯ
ಅವಲಂಬನವೆಂತು +ಕೃಪೆಮಾಡೆಂದನಾ +ಪಾರ್ಥ

ಅಚ್ಚರಿ:
(೧) ಕರುಣಿಸು, ಕೃಪಮಾಡು – ಸಾಮ್ಯಾರ್ಥ ಪದಗಳು

ನಿಮ್ಮ ಟಿಪ್ಪಣಿ ಬರೆಯಿರಿ