ಪದ್ಯ ೬೦: ದುರ್ಯೋಧನನು ಅಶ್ವತ್ಥಾಮನ ಪ್ರಮಾಣಕ್ಕೆ ಏನೆಂದು ಹೇಳಿದನು?

ಅಕಟ ಮರುಳೇ ಗುರುಸುತನ ಮತಿ
ವಿಕಳತನವನು ಕೃಪನು ಕೃತವ
ರ್ಮಕರು ಕಂಡಿರೆ ಪಾಂಡವರ ತಲೆ ತನಗೆ ಗೋಚರವೆ
ಬಕನ ಧರ್ಮಸ್ಥಿತಿಯವೊಲು ದೇ
ವಕಿಯ ಮಗ ಕಾದಿಹನಲೇ ಕೌ
ಳಿಕದ ಸಿದ್ಧನ ಕೃತಿಯನಾರಿಗೆ ಮೀರಬಹುದೆಂದ (ಗದಾ ಪರ್ವ, ೮ ಸಂಧಿ, ೬೦ ಪದ್ಯ)

ತಾತ್ಪರ್ಯ:
ದುರ್ಯೋಧನನು ತನ್ನ ಮಾತನ್ನು ಮುಂದುವರೆಸುತ್ತಾ, ಕೃಪ, ಕೃತವರ್ಮ, ನೀವು ಅಶ್ವತ್ಥಾಮನ ಮರಳುತನದ ಮಾತುಗಳನ್ನು ಕೇಳಿದ್ದೀರೇ? ಪಾಂಡವರ ತಲೆ ಅವನಿಗೆ ಸಿಕ್ಕೀತೇ? ಕೃಷ್ಣನು ಬಕಧ್ಯಾನ ಮಾಡುತ್ತಾ ಅವರನ್ನು ಕಾದುಕೋಂಡಿದ್ದಾನೆ, ಆ ಕಪಟಸಿದ್ಧನ ಮಾಟವನ್ನು ಯಾರು ಮೀರಬಲ್ಲರು ಎಂದು ಹೇಳಿದನು.

ಅರ್ಥ:
ಅಕಟ: ಅಯ್ಯೋ; ಮರುಳ: ಮೂಢ, ದಡ್ಡ; ಸುತ: ಮಗ; ಮತಿ: ಬುದ್ಧಿ; ವಿಕಳ: ಭ್ರಮೆ, ಭ್ರಾಂತಿ; ಕಂಡು: ನೋಡು; ತಲೆ: ಶಿರ; ಗೋಚರ: ಕಾಣು, ತೋರು; ಬಕ: ಕಪಟಿ, ವಂಚಕ, ಕೃಷ್ಣನಿಂದ ಹತನಾದ ಒಬ್ಬ ರಾಕ್ಷಸ; ಧರ್ಮ: ಧಾರಣೆ ಮಾಡಿದುದು; ಸ್ಥಿತಿ: ಅವಸ್ಥೆ; ಮಗ: ಸುತ; ಕಾದಿಹ: ರಕ್ಷಿಸು; ಕೌಳಿಕ: ಕಟುಕ, ಮೊಸ; ಸಿದ್ಧ: ಅಲೌಕಿಕ ಸಾಮರ್ಥ್ಯವುಳ್ಳವನು; ಕೃತಿ: ಕಾರ್ಯ; ಮೀರು: ಉಲ್ಲಂಘಿಸು;

ಪದವಿಂಗಡಣೆ:
ಅಕಟ+ ಮರುಳೇ +ಗುರುಸುತನ +ಮತಿ
ವಿಕಳತನವನು +ಕೃಪನು +ಕೃತವ
ರ್ಮಕರು +ಕಂಡಿರೆ +ಪಾಂಡವರ +ತಲೆ +ತನಗೆ+ ಗೋಚರವೆ
ಬಕನ +ಧರ್ಮಸ್ಥಿತಿಯವೊಲು +ದೇ
ವಕಿಯ +ಮಗ +ಕಾದಿಹನಲೇ +ಕೌ
ಳಿಕದ +ಸಿದ್ಧನ+ ಕೃತಿಯನ್+ ಆರಿಗೆ +ಮೀರಬಹುದೆಂದ

ಅಚ್ಚರಿ:
(೧) ಕೃಷ್ಣನ ಸಾಮರ್ಥ್ಯವನ್ನು ಹೇಳುವ ಪರಿ – ಬಕನ ಧರ್ಮಸ್ಥಿತಿಯವೊಲು ದೇವಕಿಯ ಮಗ ಕಾದಿಹನಲೇ

ನಿಮ್ಮ ಟಿಪ್ಪಣಿ ಬರೆಯಿರಿ