ಪದ್ಯ ೨೬: ಪುರದ ಸ್ತ್ರೀಯರು ಎತ್ತಕಡೆ ನಡೆದರು?

ತಿರುಗಿದರು ಬಳಿಕಿತ್ತಲೀ ಮೋ
ಹರದ ಕಾಂತಾಕೋಟಿ ಬಂದುದು
ಹರಳುಮುಳ್ಳುಗಳೊತ್ತು ಗಾಲಿನ ದೂರತರಪಥರ
ಉರಿಯ ಜಠರದ ಬಿಸಿಲ ಝಳದಲಿ
ಹುರಿದ ಕದಪುಗಳೆರಡು ಕಡೆಯಲಿ
ಸುರಿವ ನಯನಾಂಬುಗಳ ರಾಜನಿತಂಬೀನೀನಿಕರ (ಗದಾ ಪರ್ವ, ೧೧ ಸಂಧಿ, ೨೬ ಪದ್ಯ)

ತಾತ್ಪರ್ಯ:
ಅಶ್ವತ್ಥಾಮಾದಿಯರು ದ್ವಾರಕಿಯತ್ತಹೋದರು. ಇತ್ತ ಹಸ್ತಿನಾ ಪುರವನ್ನು ಬಿಟ್ಟು ಬಂದ ಸ್ತ್ರೀ ಸಮುದಾಯವು ಕಲ್ಲು ಮುಳ್ಳುಗಳೊತ್ತುತ್ತಿದ್ದ ದೂರದಾರಿಯನ್ನು ಬಿಸಿಲ ಝಳದಲ್ಲಿ ನಡೆಯುತ್ತಾ ಬರುತ್ತಿತ್ತು. ಅವರ ಹೊಟ್ಟೆಗಳಲ್ಲಿ ಉರಿ ಬಿದ್ದಿತ್ತು. ಎರಡು ಕೆನ್ನೆಗಳೂ ಹರಿದುಹೋದಂತೆ ಕಪ್ಪಾಗಿದ್ದವು. ಅವೈರಳ ಅಶ್ರುಧಾರೆಗಳನ್ನು ಸುರಿಸುತ್ತಾ ಅವರು ರಣರಂಗದತ್ತ ನಡೆದರು.

ಅರ್ಥ:
ತಿರುಗು: ಮರಳು; ಬಳಿಕ: ನಂತರ; ಮೋಹರ: ಯುದ್ಧ, ಸೈನ್ಯ; ಕಾಂತ: ಹೆಣ್ಣು; ಕೋಟಿ: ಅಸಂಖ್ಯಾತ; ಬಂದು: ಆಗಮಿಸು; ಹರಳು: ಕಲ್ಲಿನ ಚೂರು, ನೊರಜು; ಮುಳ್ಳು: ಮೊನಚಾದುದು; ಗಾಲಿ: ಚಕ್ರ; ದೂರ: ಅಂತರ; ಪಥ: ದಾರಿ; ಉರಿ: ಬೆಂಕಿ; ಜಠರ: ಹೊಟ್ಟೆ; ಬಿಸಿಲು: ಸೂರ್ಯನ ತಾಪ; ಝಳ: ತಾಪ; ಹುರಿ: ಕಾಯಿಸು; ಕದಪು: ಕೆನ್ನೆ; ಸುರಿ: ಹರಿಸು; ನಯನಾಂಬು: ಕಣ್ಣೀರು; ರಾಜನಿತಂಬಿನಿ: ರಾಣಿ; ನಿತಂಬಿನಿ: ಹೆಣ್ಣು; ನಿಕರ: ಗುಂಪು; ನಿತಂಬ: ಸೊಂಟದ ಕೆಳಗಿನ ಹಿಂಭಾಗ, ಕಟಿ ಪ್ರದೇಶ;

ಪದವಿಂಗಡಣೆ:
ತಿರುಗಿದರು +ಬಳಿಕ್+ಇತ್ತಲೀ+ ಮೋ
ಹರದ +ಕಾಂತಾಕೋಟಿ +ಬಂದುದು
ಹರಳು+ಮುಳ್ಳುಗಳ್+ಒತ್ತು+ ಗಾಲಿನ +ದೂರತರ+ಪಥರ
ಉರಿಯ +ಜಠರದ +ಬಿಸಿಲ +ಝಳದಲಿ
ಹುರಿದ +ಕದಪುಗಳೆರಡು+ ಕಡೆಯಲಿ
ಸುರಿವ +ನಯನಾಂಬುಗಳ +ರಾಜನಿತಂಬೀನೀ+ನಿಕರ

ಅಚ್ಚರಿ:
(೧) ರಾಣಿಯರು ಎಂದು ಹೇಳಲು – ರಾಜನಿತಂಬೀನೀ ಪದ ಬಳಕೆ
(೨) ರಾಣಿಯರ ದುಃಖದ ಸ್ಥಿತಿ – ಉರಿಯ ಜಠರದ ಬಿಸಿಲ ಝಳದಲಿ ಹುರಿದ ಕದಪುಗಳೆರಡು ಕಡೆಯಲಿ
ಸುರಿವ ನಯನಾಂಬುಗಳ ರಾಜನಿತಂಬೀನೀನಿಕರ

ನಿಮ್ಮ ಟಿಪ್ಪಣಿ ಬರೆಯಿರಿ