ಶೋಕವೇತಕೆ ಜೀಯ ನೀನವಿ
ವೇಕಿತನದಲಿ ಮಗನ ಹೆಚ್ಚಿಸಿ
ಸಾಕಿ ಕಲಿಸಿದೆ ಕುಟಿಲತನವನು ಕುಹಕ ವಿದ್ಯೆಗಳ
ಆಕೆವಾಳರು ಹೊರಿಗೆಯುಳ್ಳ ವಿ
ವೇಕಿಗಳು ನಿಮ್ಮಲ್ಲಿ ಸಲ್ಲರು
ಸಾಕಿದೇತಕೆ ಸೈರಿಸೆಂದನು ಸಂಜಯನು ನೃಪನ (ದ್ರೋಣ ಪರ್ವ, ೧ ಸಂಧಿ, ೫ ಪದ್ಯ)
ತಾತ್ಪರ್ಯ:
ಸಂಜಯನು ಮಾತನಾಡುತ್ತಾ, ರಾಜ ನೀನೇಕೆ ಈಗ ದುಃಖಿಸುವೆ? ಅವಿವೇಕತನದಿಂದ ಮಗನನ್ನು ಉಬ್ಬಿಸಿ, ಬೆಳೆಸಿ, ಕುಹಕದ ಕುಟಿಲದ ವಿದ್ಯೆಗಳನ್ನು ಕಲಿಸಿದೆ, ವಿವೇಕಿಗಳಿಗೆ ವೀರರಿಗೆ ನಿಮ್ಮಲ್ಲಿ ಸ್ಥಳವಿಲ್ಲ, ಈಗ ದುಃಖಿಸಿ ಏನು ಬಂತು? ಸಹಿಸಿಕೋ ಎಂದು ಧೃತರಾಷ್ಟ್ರನಿಗೆ ಹೇಳಿದನು.
ಅರ್ಥ:
ಶೋಕ: ದುಃಖ; ಜೀಯ: ಒಡೆಯ; ಅವಿವೇಕ: ಯುಕ್ತಾಯುಕ್ತ ವಿಚಾರವಿಲ್ಲದ; ಮಗ: ಸುತ; ಹೆಚ್ಚಿಸು: ಏರಿಸು; ಸಾಕು: ಸಲಹು, ರಕ್ಷಿಸು; ಕಲಿಸು: ಹೇಳಿಕೊಟ್ಟ; ಕುಟಿಲ: ಮೋಸ, ವಂಚನೆ; ಕುಹಕ: ಮೋಸ, ವಂಚನೆ; ವಿದ್ಯೆ: ಜ್ಞಾನ; ಆಕೆವಾಳ: ವೀರ, ಪರಾಕ್ರಮಿ; ಹೊರಿಗೆ: ಭಾರ, ಹೊರೆ, ಹೊಣೆಗಾರಿಕೆ; ವಿವೇಕ: ಯುಕ್ತಾಯುಕ್ತ ವಿಚಾರ; ಸಲ್ಲು: ಸರಿಹೊಂದು; ಸಾಕು: ತಡೆ; ಸೈರಿಸು: ತಾಳು; ನೃಪ: ರಾಜ;
ಪದವಿಂಗಡಣೆ:
ಶೋಕವೇತಕೆ+ ಜೀಯ +ನೀನ್+ಅವಿ
ವೇಕಿತನದಲಿ +ಮಗನ +ಹೆಚ್ಚಿಸಿ
ಸಾಕಿ +ಕಲಿಸಿದೆ+ ಕುಟಿಲತನವನು+ ಕುಹಕ +ವಿದ್ಯೆಗಳ
ಆಕೆವಾಳರು +ಹೊರಿಗೆಯುಳ್ಳ +ವಿ
ವೇಕಿಗಳು+ ನಿಮ್ಮಲ್ಲಿ+ಸಲ್ಲರು
ಸಾಕ್+ಇದೇತಕೆ +ಸೈರಿಸೆಂದನು+ ಸಂಜಯನು +ನೃಪನ
ಅಚ್ಚರಿ:
(೧) ಅವಿವೇಕ, ವಿವೇಕ – ವಿರುದ್ಧ ಪದಗಳು
(೨) ಕ ಕಾರದ ತ್ರಿವಳಿ ಪದ – ಕಲಿಸಿದೆ ಕುಟಿಲತನವನು ಕುಹಕ
(೩) ಸ ಕಾರದ ಸಾಲು ಪದ – ಸಲ್ಲರು ಸಾಕಿದೇತಕೆ ಸೈರಿಸೆಂದನು ಸಂಜಯನು