ಸರ್ಪಯಾಗದೊಳಾದ ಕರ್ಮದ
ದರ್ಪವನು ಕೆಡೆಯೊದೆದು ಬೆಳಗಿದ
ನುಪ್ಪರದ ರವಿತೇಜದಲಿ ಸುರನರರು ಬೆರಗಾಗೆ
ತಪ್ಪದೀ ಭಾರತವ ಕೇಳ್ದಂ
ಗಪ್ಪುದಮರಸ್ರೀ ಕದಂಬದೊ
ಳೊಪ್ಪುವಿಂದ್ರನ ಪದವಿಯೆಂದನು ಸೂತ ಕೈಮುಗಿದು (ಗದಾ ಪರ್ವ, ೧೩ ಸಂಧಿ, ೧೯ ಪದ್ಯ)
ತಾತ್ಪರ್ಯ:
ಸೂತ ಪುರಾಣಿಕರು ಶೌನಕಾದಿ ಮುನಿಗಳಿಗೆ, ಮಹರ್ಷಿಗಳೇ, ವೈಶಂಪಾಯನನಿಂದ ಮಹಾಭಾರತವನ್ನು ಕೇಳಿದ ಜನಮೇಜಯರಾಯನು, ಸರ್ಪಯಾಗದಿಮ್ದಾದ ಪಾಪಕರ್ಮದ ದರ್ಪವನ್ನು ತೆಗೆದೊಗೆದು, ಸೂರ್ಯನ ತೇಜಸ್ಸಿಗೆ ಮೀರಿದ ತೇಜಸ್ಸಿನಿಂದ ಹೊಳೆದನು. ಅದನ್ನು ಕಂಡು ಮನುಷ್ಯರೂ, ದೇವತೆಗಳೂ ಬೆರಗಾದರು. ಈ ಭಾರತದ ಕತೆಯನ್ನು ತಪ್ಪದೇ ಕೇಳಿದವನಿಗೆ ದೇವೇಂದ್ರನ ಪದವಿ ದೊರಕುತ್ತದೆ ಎಂದು ಬಿನ್ನೈಸಿದನು.
ಅರ್ಥ:
ಸರ್ಪ: ಹಾವು, ಉರಗ; ಯಾಗ: ಯಜ್ಞ, ಕ್ರತು; ಕರ್ಮ: ಕೆಲಸ; ದರ್ಪ: ಅಹಂಕಾರ; ಕೆಡೆ: ಬೀಳು, ಕುಸಿ; ಬೆಳಗು: ಪ್ರಕಾಶ; ಉಪ್ಪರ:ಅತಿಶಯ; ರವಿ: ಸೂರ್ಯ; ತೇಜಸ್ಸು: ಪ್ರಕಾಶ; ಸುರ: ದೇವತೆ; ನರ: ಮನುಷ್ಯ; ಬೆರಗು: ಆಶ್ಚರ್ಯ; ತಪ್ಪದು: ಸರಿಯಾಗದು; ಅಪ್ಪುದು: ಆಲಿಂಗಿಸು, ಒಪ್ಪು; ಒಪ್ಪು: ಸಮ್ಮತಿ; ಅಮರಸ್ತ್ರೀ: ಅಪ್ಸರೆ; ಕದಂಬ: ಸಮೂಹ; ಒಪ್ಪು: ಸಮ್ಮತಿ; ಇಂದ್ರ: ದೇವತೆಗಳ ಅರಸ; ಪದವಿ: ಪಟ್ಟ; ಸೂತ: ಪುರಾಣಗಳನ್ನು ಬೋಧಿಸಿದ ಒಬ್ಬ ಋಷಿಯ ಹೆಸರು; ಕೈಮುಗಿ: ನಮಸ್ಕರಿಸು;
ಪದವಿಂಗಡಣೆ:
ಸರ್ಪಯಾಗದೊಳ್+ಆದ+ ಕರ್ಮದ
ದರ್ಪವನು+ ಕೆಡೆ+ಒದೆದು+ ಬೆಳಗಿದನ್
ಉಪ್ಪರದ +ರವಿತೇಜದಲಿ+ ಸುರನರರು +ಬೆರಗಾಗೆ
ತಪ್ಪದೀ +ಭಾರತವ +ಕೇಳ್ದಂಗ್
ಅಪ್ಪುದ್+ಅಮರಸ್ರೀ+ ಕದಂಬದೊಳ್
ಒಪ್ಪುವ್+ಇಂದ್ರನ +ಪದವಿ+ಎಂದನು +ಸೂತ +ಕೈಮುಗಿದು
ಅಚ್ಚರಿ:
(೧) ರೂಪಕದ ಪ್ರಯೋಗ – ಬೆಳಗಿದನುಪ್ಪರದ ರವಿತೇಜದಲಿ ಸುರನರರು ಬೆರಗಾಗೆ