ಚೆಲ್ಲಿದರು ರಕ್ಕಸರು ಯಕ್ಷರು
ಬಿಲ್ಲ ಬಿಸುಟರು ಗುಹ್ಯಕರು ನಿಂ
ದಲ್ಲಿ ನಿಲ್ಲರು ಕಿನ್ನರರನಿನ್ನೇನು ಹೇಳುವೆನು
ಗೆಲ್ಲವಿದು ಲೇಸಾಯ್ತು ಮಾನವ
ನಲ್ಲ ನಮಗೀ ಭಂಗ ಭಯರಸ
ವೆಲ್ಲಿ ಭಾಪುರೆ ವಿಧಿಯೆನುತ ಚಿಂತಿಸಿತು ಭಟನಿಕರ (ಅರಣ್ಯ ಪರ್ವ, ೧೧ ಸಂಧಿ, ೫೫ ಪದ್ಯ)
ತಾತ್ಪರ್ಯ:
ರಾಕ್ಷಸರು ಓಡಿದರು, ಯಕ್ಷರು ಬಿಲ್ಲುಗಳನ್ನು ಬಿಸಾಡಿದರು, ಗುಹ್ಯಕರು ನಿಂತಲ್ಲಿ ನಿಲ್ಲಲಿಲ್ಲ, ಕಿನ್ನರರ ಪಾಡನ್ನು ನಾನೇನು ಹೇಳಲಿ, ಇವನಾರೋ ನಮ್ಮನ್ನು ಜಯಿಸಿದ, ಖಂಡಿತವಾಗಿ ಇವನು ಮನುಷ್ಯನಲ್ಲ, ನಮಗೆ ಇಂತಹ ಭಯ ಅಪಮಾನಗಳು ವಿಧಿವಶದಿಂದಾದವು ಭಾಪುರೆ ವಿಧಿ ಎಂದು ಯಕ್ಷ ಯೋಧರು ಚಿಂತಿಸಿದರು.
ಅರ್ಥ:
ಚೆಲ್ಲು: ಹರಡು; ರಕ್ಕಸ: ರಾಕ್ಷಸ; ಯಕ್ಷ: ದೇವತೆಗಳ ಒಂದು ಗುಂಪು; ಬಿಲ್ಲು: ಚಾಪ; ಬಿಸುಟು: ಹೊರಹಾಕು; ಗುಹ್ಯಕ: ಯಕ್ಷ; ನಿಲ್ಲು: ಸ್ಥಿರವಾಗು; ಕಿನ್ನರ: ದೇವತೆಗಳ ಒಂದುವರ್ಗ, ಕುಬೇರನ ಪ್ರಜೆ; ಗೆಲುವು: ಜಯ; ಲೇಸು: ಒಳಿತು; ಮಾನವ: ನರ; ಭಂಗ: ಮುರಿ, ತುಂಡು; ಭಯ: ಭೀತಿ; ರಸ: ಸಾರ; ಭಾಪುರೆ: ಭಲೆ; ವಿಧಿ: ಸೃಷ್ಟಿಕರ್ತ, ಬ್ರಹ್ಮ; ಚಿಂತಿಸು: ಯೋಚಿಸು; ಭಟ: ಸೈನ್ಯ; ನಿಕರ: ಗುಂಪು;
ಪದವಿಂಗಡಣೆ:
ಚೆಲ್ಲಿದರು +ರಕ್ಕಸರು +ಯಕ್ಷರು
ಬಿಲ್ಲ +ಬಿಸುಟರು +ಗುಹ್ಯಕರು +ನಿಂ
ದಲ್ಲಿ +ನಿಲ್ಲರು +ಕಿನ್ನರರನ್+ಇನ್ನೇನು +ಹೇಳುವೆನು
ಗೆಲ್ಲವಿದು +ಲೇಸಾಯ್ತು +ಮಾನವ
ನಲ್ಲ +ನಮಗೀ +ಭಂಗ +ಭಯರಸ
ವೆಲ್ಲಿ +ಭಾಪುರೆ+ ವಿಧಿಯೆನುತ +ಚಿಂತಿಸಿತು +ಭಟನಿಕರ
ಅಚ್ಚರಿ:
(೧) ಭ ಕಾರದ ತ್ರಿವಳಿ ಪದ – ಭಂಗ ಭಯರಸವೆಲ್ಲಿ ಭಾಪುರೆ