ಪದ್ಯ ೩೦: ಶಲ್ಯನು ಧರ್ಮಜನ ಮೇಲೆ ಬಿಟ್ಟ ಬಾಣಗಳು ಏನಾದವು?

ಹಳಚಿದನು ದಳಪತಿಯನವನಿಪ
ತಿಲಕನೆಚ್ಚನು ನೂರು ಶರದಲಿ
ಕಳಚಿ ಕಯ್ಯೊಡನೆಚ್ಚು ಬೇಗಡೆಗಳೆದನವನಿಪನ
ಅಳುಕಲರಿವುದೆ ಸಿಡಿಲ ಹೊಯ್ಲಲಿ
ಕುಲಕುಧರವೀ ಧರ್ಮಸುತನ
ಗ್ಗಳಿಕೆಗುಪ್ಪಾರತಿಗಳಾದುವು ಶಲ್ಯನಂಬುಗಳು (ಶಲ್ಯ ಪರ್ವ, ೨ ಸಂಧಿ, ೩೦ ಪದ್ಯ)

ತಾತ್ಪರ್ಯ:
ಧರ್ಮಜನು ಶಲ್ಯನ ಮೇಲೆ ನೂರು ಬಾಣಗಳನನ್ನು ಬಿಡಲು, ಶಲ್ಯನು ಅವನ್ನು ಕತ್ತರಿಸಿ ಅರಸನ ಮೇಲೆ ಬಾಣಗಳನ್ನು ಬಿಟ್ಟನು. ಸಿಡಿಲಿಗೆ ಕುಲಪರ್ವತವು ಅಳುಕುವುದೇ ಧರ್ಮಜನ ಪರಾಕ್ರಮಕ್ಕೆ ಎತ್ತಿದ ಉಪ್ಪಾರತಿಗಳಂತೆ ಶಲ್ಯನ ಬಾಣಗಳು ನಿಷ್ಫಲವಾದವು.

ಅರ್ಥ:
ಹಳಚು: ತಾಗು, ಬಡಿ; ದಳಪತಿ: ಸೇನಾಧಿಪತಿ; ಅವನಿಪ: ರಾಜ; ತಿಲಕ: ಶ್ರೇಷ್ಠ; ಎಚ್ಚು: ಬಾಣ ಪ್ರಯೋಗ ಮಾಡು; ನೂರು: ಶತ; ಶರ: ಬಾಣ; ಕಳಚು: ಬೇರ್ಪಡಿಸು, ಬೇರೆಮಾಡು; ಕೈ: ಹಸ್ತ; ಒಡ್ಡು: ನೀಡು; ಬೇಗಡೆ: ಹೊಳಪಿನ ತಗಡು; ಅಳುಕು: ಹೆದರು; ಅರಿ: ತಿಳಿ; ಸಿಡಿಲು: ಅಶನಿ; ಹೊಯ್ಲು: ಹೊಡೆ; ಕುಲಕುಧರ: ಕುಲಪರ್ವತ; ಸುತ: ಮಗ; ಅಗ್ಗಳಿಕೆ: ಶ್ರೇಷ್ಠ; ಉಪ್ಪಾರತಿ: ಉಪ್ಪನ್ನು ನಿವಾಳಿಸಿ ದೃಷ್ಟಿ ತೆಗೆಯುವುದು; ಅಂಬು: ಬಾಣ;

ಪದವಿಂಗಡಣೆ:
ಹಳಚಿದನು +ದಳಪತಿಯನ್+ಅವನಿಪ
ತಿಲಕನ್+ಎಚ್ಚನು +ನೂರು +ಶರದಲಿ
ಕಳಚಿ +ಕಯ್ಯೊಡನ್+ಎಚ್ಚು +ಬೇಗಡೆಗಳೆದನ್+ಅವನಿಪನ
ಅಳುಕಲ್+ಅರಿವುದೆ +ಸಿಡಿಲ +ಹೊಯ್ಲಲಿ
ಕುಲಕುಧರವೀ +ಧರ್ಮಸುತನ್
ಅಗ್ಗಳಿಕೆಗ್+ಉಪ್ಪಾರತಿಗಳಾದುವು +ಶಲ್ಯನ್+ಅಂಬುಗಳು

ಅಚ್ಚರಿ:
(೧) ಉಪಮಾನದ ಪ್ರಯೋಗ -ಅಳುಕಲರಿವುದೆ ಸಿಡಿಲ ಹೊಯ್ಲಲಿ ಕುಲಕುಧರವೀ
(೨) ಅವನಿಪತಿಲಕ, ಧರ್ಮಸುತ – ಯುಧಿಷ್ಠಿರನನ್ನು ಕರೆದ ಪರಿ