ಆರು ಕೊಟ್ಟರು ಶರವನಿದ ಮದ
ನಾರಿಯೋ ನಿಮ್ಮಯ್ಯನಹ ಜಂ
ಭಾರಿಯೋ ಮೇಣ್ ಕೃಷ್ಣ ದ್ರೋನರೊ ಹೇಳು ಹುಸಿಯದಿರು
ವೀರನಹೆಯೋ ಪಾರ್ಥ ನಿನ್ನವೊ
ಲಾರು ಬಿಲುಗಾರರು ಮಹಾಸ್ತ್ರವಿ
ದಾರು ಕಲಿಸಿದ ವಿದ್ಯವುಪಯೋಗಿಸಿತು ನಿನಗೆಂದ (ದ್ರೋಣ ಪರ್ವ, ೧೪ ಸಂಧಿ, ೧೫ ಪದ್ಯ)
ತಾತ್ಪರ್ಯ:
ಭೂರಿಶ್ರವನು ಮಾತನಾಡುತ್ತಾ, ಅರ್ಜುನ, ನಿನಗೆ ಈ ಭಾಣವನ್ನು ಕೊಟ್ಟವರಾರು? ಶಿವನೋ, ದೇವೇಂದ್ರನೋ, ಕೃಷ್ಣನೋ, ದ್ರೋಣನೋ, ಹೇಳು, ಸುಳ್ಳನ್ನು ಹೇಳಬೇಡ, ನೀನು ಶ್ರೇಷ್ಠ ಧನುರ್ಧರ, ನಿನ್ನ ಸಮಾನದ ವೀರನಾರು, ನೀನು ಬಳಸಿದ ಈ ಮಹಾಸ್ತ್ರವು ಯಾರು ಕಲಿಸಿದ ವಿದ್ಯೆ ಈ ದಿನ ನಿನ್ನ ಉಪಯೋಗಕ್ಕೆ ಬಂದಿತಲ್ಲವೇ ಎಂದು ಕೇಳಿದನು.
ಅರ್ಥ:
ಕೊಟ್ಟರು: ನೀಡಿದರು; ಶರ: ಬಾಣ; ಮದನಾರಿ: ಶಿವ; ಅಯ್ಯ: ತಂದೆ; ಜಂಭಾರಿ: ದೇವೇಂದ್ರ; ಮೇಣ್: ಅಥವ; ಹೇಳು: ತಿಳಿಸು; ಹುಸಿ: ಸುಳ್ಳು; ವೀರ: ಶೂರ; ಬಿಲುಗಾರ: ಬಿಲ್ವಿದ್ಯೆಯಲ್ಲಿ ನಿಪುಣ; ಅಸ್ತ್ರ: ಶಸ್ತ್ರ; ಕಲಿಸು: ಹೇಳಿಕೊಡು; ಉಪಯೋಗಿಸು: ಪ್ರಯೋಗಿಸು;
ಪದವಿಂಗಡಣೆ:
ಆರು +ಕೊಟ್ಟರು +ಶರವನ್+ ಇದ+ ಮದ
ನಾರಿಯೋ +ನಿಮ್ಮಯ್ಯನಹ ಜಂ
ಭಾರಿಯೋ +ಮೇಣ್ +ಕೃಷ್ಣ+ ದ್ರೋಣರೊ+ ಹೇಳು +ಹುಸಿಯದಿರು
ವೀರನಹೆಯೋ +ಪಾರ್ಥ +ನಿನ್ನವೊಲ್
ಆರು +ಬಿಲುಗಾರರು +ಮಹಾಸ್ತ್ರವಿದ್
ಆರು +ಕಲಿಸಿದ +ವಿದ್ಯ+ಉಪಯೋಗಿಸಿತು +ನಿನಗೆಂದ
ಅಚ್ಚರಿ:
(೧) ಶಿವ ಮತ್ತು ಇಂದ್ರನನ್ನು ಕರೆದ ಪರಿ – ಮದನಾರಿ, ಜಂಭಾರಿ