ಪ್ರಳಯ ಮೇಘವನೊಡೆವ ರವಿಮಂ
ಡಲ ಸಹಸ್ರದ ರಶ್ಮಿಯೋ ಜಗ
ದಳಿವಿನಲಿ ಝೊಂಪಿಸುವ ಹರನುರಿಗಣ್ಣ ದೀಧಿತಿಯೊ
ಮುಳಿದ ನರಕೇಸರಿಯ ದಾಡೆಯ
ಥಳಥಲತ್ಕಾರವೊ ಮಹಾಸ್ತ್ರದ
ಬೆಳಗೊ ಹೆಸರಿಡಲಾರು ಬಲ್ಲರು ಭೂಪ ಕೇಳೆಂದ (ದ್ರೋಣ ಪರ್ವ, ೧೯ ಸಂಧಿ, ೧೫ ಪದ್ಯ)
ತಾತ್ಪರ್ಯ:
ಪ್ರಳಯ ಮೇಘವನ್ನು ಭೇದಿಸಬಲ್ಲ ಸಹಸ್ರ ಸೂರ್ಯರ ಕಿರಣಗಳೋ, ಪ್ರಳಯಕಾಲದಲ್ಲಿ ಶಿವನು ತೆಗೆಯುವ ಉರಿಗಣ್ಣಿನ ಪ್ರಕಾಶವೋ, ಕೋಪಗೊಂಡ ನರಸಿಂಹನ ಹಲ್ಲುಗಳ ಹೊಳಪೋ ಎಂಬಂತೆ ನಾರಾಯಣಾಸ್ತ್ರದ ಪ್ರಕಾಶ ಹಬ್ಬುತ್ತಿತ್ತು, ಅದನ್ನು ಹೇಗೆಂದು ಹೇಳೋಣ ಎಂದು ಸಂಜಯನು ವಿವರಿಸಿದನು.
ಅರ್ಥ:
ಪ್ರಳಯ: ಕಲ್ಪದ ಕೊನೆಯಲ್ಲಿ ಉಂಟಾಗುವ ಪ್ರಪಂಚದ ನಾಶ, ಅಳಿವು; ಮೇಘ: ಮೋಡ; ಒಡೆವ: ಸೀಳು; ರವಿ: ಸೂರ್ಯ; ಮಂಡಲ: ನಾಡಿನ ಒಂದು ಭಾಗ, ವರ್ತುಲಾಕಾರ; ಸಹಸ್ರ: ಸಾವಿರ; ರಶ್ಮಿ: ಕಾಂತಿ, ಪ್ರಕಾಶ; ಜಗ: ಪ್ರಪಂಚ; ಅಳಿವು: ನಾಶ; ಝೊಂಪಿಸು: ಬೆಚ್ಚಿಬೀಳು; ಹರ: ಶಂಕರ; ಉರಿಗಣ್ಣು: ಬೆಂಕಿಯ ಕಣ್ಣು; ದೀಧಿತಿ: ಹೊಳಪು; ಮುಳಿ: ಸಿಟ್ಟು, ಕೋಪ; ನರಕೇಸರಿ: ನರಸಿಂಹ; ದಾಡೆ: ದವಡೆ, ಒಸಡು; ಥಳ: ಪ್ರಕಾಶ, ಹೊಳಪು; ಮಹಾಸ್ತ್ರ: ಶ್ರೇಷ್ಠವಾದ ಆಯುಧ; ಬೆಳಗು: ಕಾಂತಿ, ಪ್ರಕಾಶ; ಹೆಸರು: ನಾಮ; ಬಲ್ಲರು: ತಿಳಿದವರು; ಭೂಪ: ರಾಜ; ಕೇಳು: ಆಲಿಸು;
ಪದವಿಂಗಡಣೆ:
ಪ್ರಳಯ +ಮೇಘವನ್+ಒಡೆವ +ರವಿ+ಮಂ
ಡಲ +ಸಹಸ್ರದ +ರಶ್ಮಿಯೋ +ಜಗದ್
ಅಳಿವಿನಲಿ +ಝೊಂಪಿಸುವ +ಹರನ್+ಉರಿಗಣ್ಣ+ ದೀಧಿತಿಯೊ
ಮುಳಿದ +ನರಕೇಸರಿಯ +ದಾಡೆಯ
ಥಳಥಳತ್ಕಾರವೊ+ ಮಹಾಸ್ತ್ರದ
ಬೆಳಗೊ +ಹೆಸರಿಡಲಾರು+ ಬಲ್ಲರು +ಭೂಪ +ಕೇಳೆಂದ
ಅಚ್ಚರಿ:
(೧) ರೂಪಕದ ಪ್ರಯೋಗ – ಪ್ರಳಯ ಮೇಘವನೊಡೆವ ರವಿಮಂಡಲ ಸಹಸ್ರದ ರಶ್ಮಿಯೋ ಜಗದಳಿವಿನಲಿ ಝೊಂಪಿಸುವ ಹರನುರಿಗಣ್ಣ ದೀಧಿತಿಯೊ