ಕೇಳು ಧೃತರಾಷ್ಟ್ರವನಿಪ ಗುರು
ಬೀಳುಕೊಟ್ಟನು ದೇಹವನು ನ
ಮ್ಮಾಳ ವಿಧಿಯೇನಪಜಯದ ತವನಿಧಿಯಲೇ ನಮಗೆ
ಮೇಲೆ ಬಂದುದು ಕಷ್ಟವರಿಭೂ
ಪಾಲರಿಗೆ ಕೇಳಿದನು ಖಳ ಪಾಂ
ಚಾಲಸುತನೈತಂದನಲ್ಲಿಗೆ ಜಡಿವಡಾಯುಧದಿ (ದ್ರೋಣ ಪರ್ವ, ೧೯ ಸಂಧಿ, ೧ ಪದ್ಯ)
ತಾತ್ಪರ್ಯ:
ರಾಜ ಧೃತರಾಷ್ಟ್ರ ಕೇಳು, ದ್ರೋಣನು ದೇಹತ್ಯಾಗ ಮಾಡಿದನು. ಅವನಿಗೆ ಬಂದ ವಿಧಿಯು ನಮ್ಮ ಸೋಲಿಗೆ ತವನಿಧಿ, ನಂತರ ವೈರಿರಾಜರಿಗೆ ಕಷ್ಟ ಬಂದಿತು. ದ್ರೋಣನ ದೇಹತ್ಯಾಗವನ್ನು ಕೇಳಿದ ಧೃಷ್ಟದ್ಯುಮ್ನನು ಕತ್ತಿಯನ್ನು ಝಳಪಿಸುತ್ತಾ ದ್ರೋಣನ ರಥದ ಬಳಿಗೆ ಬಂದನು.
ಅರ್ಥ:
ಕೇಳು: ಆಲಿಸು; ಅವನಿಪ: ರಾಜ; ಗುರು: ಆಚಾರ್ಯ; ಬೀಳುಕೊಡು: ತೆರಳು; ದೇಹ: ಶರೀರ; ಆಳು: ಸೇವಕ; ವಿಧಿ: ನಿಯಮ; ಅಪಜಯ: ಸೋಲು; ನಿಧಿ: ಐಶ್ವರ್ಯ; ಬಂದು: ಆಗಮಿಸು; ಕಷ್ಟ: ತೊಂದರೆ; ಅರಿ: ವೈರಿ; ಭೂಪಾಲ: ರಾಜ; ಕೇಳು: ಆಲಿಸು; ಖಳ: ದುಷ್ಟ; ಸುತ: ಮಗ; ಐತಂದು: ಬಂದು ಸೇರು; ಜಡಿ: ಬೆದರಿಕೆ; ಆಯುಧ: ಶಸ್ತ್ರ; ತವ: ನಿನ್ನ;
ಪದವಿಂಗಡಣೆ:
ಕೇಳು +ಧೃತರಾಷ್ಟ್ರ್+ಅವನಿಪ +ಗುರು
ಬೀಳುಕೊಟ್ಟನು +ದೇಹವನು +ನ
ಮ್ಮಾಳ +ವಿಧಿಯೇನ್+ಅಪಜಯದ +ತವನಿಧಿಯಲೇ +ನಮಗೆ
ಮೇಲೆ +ಬಂದುದು +ಕಷ್ಟವ್+ಅರಿ+ಭೂ
ಪಾಲರಿಗೆ +ಕೇಳ್+ಇದನು +ಖಳ+ ಪಾಂ
ಚಾಲಸುತನ್ +ಐತಂದನ್+ಅಲ್ಲಿಗೆ +ಜಡಿವಡ್+ಆಯುಧದಿ
ಅಚ್ಚರಿ:
(೧) ಅವನಿಪ, ಭೂಪಾಲ – ಸಮಾನಾರ್ಥಕ ಪದ
(೨) ದ್ರೋಣನು ಸತ್ತನು ಎಂದು ಹೇಳಲು – ಗುರು ಬೀಳುಕೊಟ್ಟನು ದೇಹವನು