ಇವನ ಧಾಳಿಯನಿವನ ಧೈರ್ಯವ
ನಿವನ ಹೂಣಿಗತನವನಿವನಾ
ಹವದ ಹೊರಿಗೆಯನಿವನ ಭಾರಿಯ ವೆಗ್ಗಳೆಯತನವ
ದಿವಿಜರಾನಲು ನೂಕದಿದು ನ
ಮ್ಮವರ ಪಾಡೇನೈ ಪಲಾಯನ
ತವನಿಧಿಯಲೇ ನಿಮ್ಮ ಬಲ ಧೃತರಾಷ್ಟ್ರ ಕೇಳೆಂದ (ದ್ರೋಣ ಪರ್ವ, ೧೬ ಸಂಧಿ, ೧೪ ಪದ್ಯ)
ತಾತ್ಪರ್ಯ:
ಧೃತರಾಷ್ಟ್ರ ಕೇಳು, ಘಟೋತ್ಕಚನ ದಾಳಿ, ಧೈರ್ಯ, ಯುದ್ಧದ ಚಾತುರ್ಯ, ಇವನ ಮೀರಿದ ಸತ್ವಗಳನ್ನು ದೇವತೆಗಳೂ ಎದುರಿಸಿ ನಿಲ್ಲಲಾರರು ಎಂದ ಮೇಲೆ ನಮ್ಮ ಕುರುಸೈನ್ಯದ ಪಾಡೇನು. ನಿಮ್ಮ ಸೈನ್ಯವು ಪಲಾಯನ ಮಾಡಿದರು.
ಅರ್ಥ:
ಧಾಳಿ: ಆಕ್ರಮಣ; ಧೈರ್ಯ: ದಿಟ್ಟತನ; ಹೂಣಿಗ: ಬಾಣವನ್ನು ಹೂಡುವವನು, ಬಿಲ್ಲುಗಾರ, ಸಾಹಸಿ; ಆಹವ: ಯುದ್ಧ; ಹೊರೆಗೆ: ಭಾರ, ಹೊರೆ; ಭಾರಿ: ಅತಿಶಯವಾದ; ವೆಗ್ಗಳಿಕೆ: ಶ್ರೇಷ್ಠತೆ; ದಿವಿಜ: ಅಮರರು; ನೂಕು: ತಳ್ಳು; ಪಾಡು: ಸ್ಥಿತಿ; ಪಲಾಯನ: ಓಡುವಿಕೆ, ಪರಾರಿ; ತವನಿಧಿ: ಕೊನೆಯಾಗದ ಭಂಡಾರ; ಬಲ: ಸೈನ್ಯ; ಕೇಳು: ಆಲಿಸು;
ಪದವಿಂಗಡಣೆ:
ಇವನ+ ಧಾಳಿಯನ್+ಇವನ +ಧೈರ್ಯವನ್
ಇವನ +ಹೂಣಿಗತನವನ್+ಇವನ್
ಆಹವದ +ಹೊರಿಗೆಯನ್+ಇವನ +ಭಾರಿಯ +ವೆಗ್ಗಳೆಯತನವ
ದಿವಿಜರಾನಲು +ನೂಕದಿದು+ ನ
ಮ್ಮವರ +ಪಾಡೇನೈ +ಪಲಾಯನ
ತವನಿಧಿಯಲೇ +ನಿಮ್ಮ +ಬಲ +ಧೃತರಾಷ್ಟ್ರ +ಕೇಳೆಂದ
ಅಚ್ಚರಿ:
(೧) ಪಲಾಯನವನ್ನು ವಿವರಿಸುವ ಪರಿ – ನಮ್ಮವರ ಪಾಡೇನೈ ಪಲಾಯನ ತವನಿಧಿಯಲೇ ನಿಮ್ಮ ಬಲ