ತಡೆದು ನಿಂದನು ಪರಬಲವ ನಿ
ಮ್ಮೊಡೆಯನಾವೆಡೆ ಸೇನೆ ಕದನವ
ಕೊಡಲಿ ಕೊಂಬವನಲ್ಲ ಕೈದುವ ಸೆಳೆಯೆನುಳಿದರಿಗೆ
ಪೊಡವಿಗೊಡೆಯನು ಕೌರವೇಶ್ವರ
ನೊಡನೆ ಸಲ್ಲದು ಗಡ ಶರಾಸನ
ವಿಡಿಯ ಹೇಳಾ ಧರ್ಮಜನನೆಂದುರುಬಿದನು ಶಲ್ಯ (ಶಲ್ಯ ಪರ್ವ, ೩ ಸಂಧಿ, ೨೮ ಪದ್ಯ)
ತಾತ್ಪರ್ಯ:
ಶಲ್ಯನು ಪಾಂಡವ ಸೇನೆಯನ್ನು ತಡೆದು ನಿಲ್ಲಿಸಿ, ನಿಮ್ಮ ದೊರೆಯೆಲ್ಲಿ? ಅವನು ಯುದ್ಧಕ್ಕೆ ಬರಲಿ, ನೀವು ಯುದ್ಧ ಮಾಡಬಹುದು, ನಾನು ಅದನ್ನು ಸ್ವೀಕರಿಸುವುದಿಲ್ಲ. ಕೌರವನೊಡನೆ ಯುದ್ಧಮಾಡುವುದು ಧರ್ಮಜನಿಗೆ ಸಲ್ಲದು, ಧನುಸ್ಸನ್ನು ಹಿಡಿದು ನನ್ನೊಡನೆ ಯುದ್ಧಕ್ಕೆ ಬರಲಿ ಎಂದು ಘೋಷಿಸಿದನು.
ಅರ್ಥ:
ತಡೆ: ನಿಲ್ಲಿಸು; ನಿಂದು: ನಿಲ್ಲು; ಪರಬಲ: ವೈರಿಸೈನ್ಯ; ಒಡೆಯ: ನಾಯಕ; ಆವೆಡೆ: ಯಾವ ಕಡೆ; ಸೇನೆ: ಸೈನ್ಯ; ಕದನ: ಯುದ್ಧ; ಕೊಂಬು: ಸ್ವೀಕರಿಸು; ಕೈದು: ಆಯುಧ; ಸೆಳೆ: ಆಕರ್ಷಿಸು; ಉಳಿದ: ಮಿಕ್ಕ; ಪೊಡವಿ: ಭೂಮಿ; ಸಲ್ಲದು: ಸರಿಯಾದುದಲ್ಲ; ಗಡ: ಅಲ್ಲವೆ; ಶರಾಸನ: ಬಿಲ್ಲು; ಆಸನ: ಕೂರುವ ಸ್ಥಳ; ಶರ: ಬಾಣ; ವಿಡಿದು: ಹಿಡಿದು, ಗ್ರಹಿಸು; ಉರುಬು: ಅತಿಶಯವಾದ ವೇಗ;
ಪದವಿಂಗಡಣೆ:
ತಡೆದು +ನಿಂದನು +ಪರಬಲವ +ನಿಮ್ಮ್
ಒಡೆಯನ್+ಆವೆಡೆ+ ಸೇನೆ +ಕದನವ
ಕೊಡಲಿ +ಕೊಂಬವನಲ್ಲ+ ಕೈದುವ +ಸೆಳೆಯೆನ್+ಉಳಿದರಿಗೆ
ಪೊಡವಿಗ್+ಒಡೆಯನು +ಕೌರವೇಶ್ವರ
ನೊಡನೆ +ಸಲ್ಲದು +ಗಡ +ಶರಾಸನ+
ವಿಡಿಯ +ಹೇಳಾ +ಧರ್ಮಜನನೆಂದ್+ಉರುಬಿದನು +ಶಲ್ಯ
ಅಚ್ಚರಿ:
(೧) ಬಿಲ್ಲು ಎಂದು ಹೇಳಲು ಶರಾಸನ ಪದದ ಬಳಕೆ
(೨) ಕ ಕಾರದ ಸಾಲು ಪದ – ಕದನವ ಕೊಡಲಿ ಕೊಂಬವನಲ್ಲ ಕೈದುವ