ಕ್ಷಿತಿಪ ಚಿತ್ತೈಸೀಚೆಯಲಿ ಗುರು
ಸುತ ಸುಶರ್ಮಕ ಶಲ್ಯ ನಿನ್ನಯ
ಸುತನು ಕೃತವರ್ಮನು ಕೃಪಾಚಾರ್ಯಾದಿಗಳು ಮಸಗಿ
ಘೃತಸಮುದ್ರದ ಸೆರಗ ಸೋಂಕಿದ
ಹುತವಹನ ಸೊಂಪಿನಲಿ ವೈರಿ
ಪ್ರತತಿಯನು ತರುಬಿದರು ತರಿದರು ಸರಳ ಸಾರದಲಿ (ಶಲ್ಯ ಪರ್ವ, ೩ ಸಂಧಿ, ೩ ಪದ್ಯ)
ತಾತ್ಪರ್ಯ:
ಧೃತರಾಷ್ಟ್ರನೇ ಕೇಳು, ಈಚೆಕಡೆಯಲ್ಲಿ ಅಶ್ವತ್ಥಾಮ, ಸುಧರ್ಮ, ದುರ್ಯೋಧನ ಕೃತವರ್ಮ, ಕೃಪನೇ ಮೊದಲಾದವರು ಮುನ್ನುಗ್ಗಿ ಹೊಡೆಯಲು, ಅವರ ಬಾಣಗಳ ಏಟಿಗೆ ಬಿಸಿಗೆ ತುಪ್ಪದ ಸಾಗರವು ಕರಗಿದಂತೆ ಪಾಂಡವ ಸೇನೆಯು ನಾಶವಾಯಿತು.
ಅರ್ಥ:
ಕ್ಷಿತಿಪ: ರಾಜ; ಚಿತ್ತೈಸು: ಗಮನವಿಟ್ಟು ಕೇಳು; ಸುತ: ಮಗ; ಆದಿ: ಮುಂತಾದ; ಮಸಗು: ಕೆರಳು; ತಿಕ್ಕು; ಘೃತ: ತುಪ್ಪ; ಸಮುದ್ರ: ಸಾಗರ; ಸೆರಗು: ಅಂಚು, ತುದಿ; ಸೋಂಕು: ಮುಟ್ಟು, ತಾಗು; ಹುತವಹ: ಅಗ್ನಿ; ಸೊಂಪು: ಸೊಗಸು, ಚೆಲುವು; ವೈರಿ: ಅರಿ, ಶತ್ರು; ಪ್ರತತಿ: ಗುಂಪು; ತರುಬು: ತಡೆ, ನಿಲ್ಲಿಸು; ತರಿ: ಕಡಿ, ಕತ್ತರಿಸು; ಸರಳ: ಬಾಣ; ಸಾರ: ಸತ್ವ;
ಪದವಿಂಗಡಣೆ:
ಕ್ಷಿತಿಪ +ಚಿತ್ತೈಸ್+ಈಚೆಯಲಿ +ಗುರು
ಸುತ +ಸುಶರ್ಮಕ +ಶಲ್ಯ+ ನಿನ್ನಯ
ಸುತನು +ಕೃತವರ್ಮನು +ಕೃಪಾಚಾರ್ಯ+ಆದಿಗಳು+ ಮಸಗಿ
ಘೃತ+ಸಮುದ್ರದ +ಸೆರಗ+ ಸೋಂಕಿದ
ಹುತವಹನ+ ಸೊಂಪಿನಲಿ +ವೈರಿ
ಪ್ರತತಿಯನು +ತರುಬಿದರು +ತರಿದರು+ ಸರಳ+ ಸಾರದಲಿ
ಅಚ್ಚರಿ:
(೧) ರೂಪಕದ ಪ್ರಯೋಗ – ಘೃತಸಮುದ್ರದ ಸೆರಗ ಸೋಂಕಿದ ಹುತವಹನ ಸೊಂಪಿನಲಿ ವೈರಿ ಪ್ರತತಿಯನು ತರುಬಿದರು
(೨) ಸುತ – ೨, ೩ ಸಾಲಿನ ಮೊದಲ ಪದ