ಸಾಕು ದೈತ್ಯನ ಕೆಡಹು ಸೇನೆಯ
ಸಾಕು ಸುಭಟರು ಬಾಯಬಿಡುತಿದೆ
ನೂಕು ನೂಕಮರಾರಿಯನು ತಡೆ ತಡವುಮಾಡದಿರು
ಆಕೆವಾಲರು ವಿಗಡ ವೀರಾ
ನೀಕವಿದೆ ತಲ್ಲಣದ ತಗಹಿನ
ಲೇಕೆ ಕಾಲಕ್ಷೇಪವೆಂದನು ಕೌರವರರಾಯ (ದ್ರೋಣ ಪರ್ವ, ೧೬ ಸಂಧಿ, ೨೩ ಪದ್ಯ)
ತಾತ್ಪರ್ಯ:
ಕರ್ಣ, ಈ ಮಾತು ಸಾಕು, ದೈತ್ಯನನ್ನು ಸಂಹರಿಸು, ನಮ್ಮ ಪರಾಕ್ರಮಿಗಳು ಬಾಯಿಬಾಯಿ ಬಿಡುತ್ತಿದ್ದಾರೆ, ತಡೆಯದೆ ತಡಮಾಡದೆ ಈ ರಾಕ್ಷಸನನ್ನು ಸಂಹರಿಸು. ವೀರರೂ ಸಮರ್ಥರೂ ತಲ್ಲಣಗೊಂಡಿದ್ದಾರೆ. ಕಾಲವನ್ನು ಸುಮ್ಮನೇ ವ್ಯರ್ಥಮಾಡಬೇಡ ಎಂದು ದುರ್ಯೋಧನನು ಕರ್ಣನಿಗೆ ಹೇಳಿದನು.
ಅರ್ಥ:
ಸಾಕು: ನಿಲ್ಲಿಸು; ದೈತ್ಯ: ರಾಕ್ಷಸ; ಕೆಡಹು: ಬೀಳಿಸು, ನಾಶಮಾಡು; ಸೇನೆ: ಸೈನ್ಯ; ಸುಭಟ: ವೀರ; ನೂಕು: ತಳ್ಳು; ಅಮರಾರಿ: ದೇವತೆಗಳ ವೈರಿ (ರಾಕ್ಷಸ); ತಡೆ: ನಿಲ್ಲಿಸು; ತಡ: ನಿಧಾನ; ಆಕೆವಾಳ: ವೀರ, ಪರಾಕ್ರಮಿ; ವಿಗಡ: ಶೌರ್ಯ, ಪರಾಕ್ರಮ; ವೀರ: ಶೂರ; ತಲ್ಲಣ: ಅಂಜಿಕೆ, ಭಯ; ತಗಹು: ಅಡ್ಡಿ, ತಡೆ; ಕಾಲಕ್ಷೇಪ: ಕಾಲ ಕಳೆಯುವುದು; ರಾಯ: ರಾಜ; ಆನೀಕ: ಸಮೂಹ;
ಪದವಿಂಗಡಣೆ:
ಸಾಕು +ದೈತ್ಯನ +ಕೆಡಹು +ಸೇನೆಯ
ಸಾಕು +ಸುಭಟರು +ಬಾಯಬಿಡುತಿದೆ
ನೂಕು +ನೂಕ್+ಅಮರಾರಿಯನು +ತಡೆ +ತಡವು+ಮಾಡದಿರು
ಆಕೆವಾಳರು +ವಿಗಡ +ವೀರಾ
ನೀಕವಿದೆ +ತಲ್ಲಣದ +ತಗಹಿನ
ಲೇಕೆ +ಕಾಲಕ್ಷೇಪವೆಂದನು +ಕೌರವರ+ರಾಯ
ಅಚ್ಚರಿ:
(೧) ಸಾಕು, ನೂಕು – ಪ್ರಾಸ ಪದಗಳು
(೨) ಆಕೆವಾಳ, ಸುಭಟ, ವಿಗಡ, ವೀರಾನೀಕ – ಸಾಮ್ಯಾರ್ಥ ಪದಗಳು
(೩) ತಡೆ, ತಡ – ಪದಗಳ ಬಳಕೆ