ಐದು ದಿವಸದೊಳಹಿತ ಬಲವನು
ಹೊಯ್ದು ಹೊಡೆಕುಟ್ಟಾಡಿ ರಿಪುಗಳೊ
ಳೈದೆ ದೊರೆಗಳನಿರಿದು ಮೆರೆದನು ಭುಜಮಹೋನ್ನತಿಯ
ಕೈದುಕಾರರ ಗುರು ಛಡಾಳಿಸಿ
ಮೈದೆಗೆದು ನಿರ್ಜರ ರನಗರಿಗೆ
ಹಾಯ್ದನೆನಲುರಿ ಜಠರದಲಿ ಮೋಹರಿಸಿತವನಿಪನ (ದ್ರೋಣ ಪರ್ವ, ೧ ಸಂಧಿ, ೩ ಪದ್ಯ)
ತಾತ್ಪರ್ಯ:
ದ್ರೋಣನು ಐದು ದಿವಸಗಳ ಕಾಲ ಯುದ್ಧಮಾಡಿ, ಶತ್ರು ಸೈನ್ಯವನ್ನು ಹೊಡೆದು ಕುಟ್ಟಿ, ವೈರಿರಾಜರನ್ನು ಸಂಹರಿಸಿ ತನ್ನ ಭುಜಬಲವನ್ನು ಮೆರೆದನು. ಆಯುಧದಾರಿಗಳ ಗುರುವಾದ ದ್ರೋಣನು ಆ ಬಳಿಕ ಅಮರಾವತಿಗೆ ಪ್ರಯಾಣ ಮಾಡಿದನು ಎಂದು ಸಂಜಯನು ಹೇಳಲು ಧೃತರಾಷ್ಟ್ರನ ಹೊಟ್ಟೆಯಲ್ಲಿ ಉರಿಬಿದ್ದಿತು.
ಅರ್ಥ:
ದಿವಸ: ದಿನ; ಅಹಿತ: ವೈರಿ; ಬಲ: ಸೈನ್ಯ; ಹೊಯ್ದು: ಹೋರಾಡು; ಹೊಡೆ: ಏಟು; ಕುಟ್ಟು: ಅಪ್ಪಳಿಸು; ರಿಪು: ವೈರಿ; ಐದು: ಬಂದುಸೇರು; ದೊರೆ: ರಾಜ; ಇರಿ: ಚುಚ್ಚು; ಮೆರೆ: ಹೊಳೆ; ಭುಜ: ಬಾಹು; ಮಹೋನ್ನತಿ: ಅತಿಶಯ, ಹೆಚ್ಚುಗಾರಿಗೆ; ಕೈದು: ಆಯುಧ; ಗುರು: ಆಚಾರ್ಯ; ಛಡಾಳಿಸು: ಪ್ರಜ್ವಲಿಸು, ಥಳಥಳಿಸು; ಮೈ: ತನು; ತೆಗೆ: ಹೊರತಉ; ನಿರ್ಜರ: ದೇವತೆ; ನಗರ: ಊರು; ಹಾಯ್ದು: ಹಾರು, ಉರಿ: ಬೆಂಕಿ; ಜಠರ: ಹೊಟ್ಟೆ; ಮೋಹರ: ಸೈನ್ಯ, ಯುದ್ಧ; ಅವನಿಪ: ರಾಜ;
ಪದವಿಂಗಡಣೆ:
ಐದು +ದಿವಸದೊಳ್+ಅಹಿತ +ಬಲವನು
ಹೊಯ್ದು +ಹೊಡೆ+ಕುಟ್ಟಾಡಿ +ರಿಪುಗಳೊಳ್
ಐದೆ+ ದೊರೆಗಳನ್+ಇರಿದು +ಮೆರೆದನು +ಭುಜ+ಮಹೋನ್ನತಿಯ
ಕೈದುಕಾರರ+ ಗುರು +ಛಡಾಳಿಸಿ
ಮೈದೆಗೆದು +ನಿರ್ಜರರ+ನಗರಿಗೆ
ಹಾಯ್ದನ್+ಎನಲ್+ಉರಿ+ ಜಠರದಲಿ+ ಮೋಹರಿಸಿತ್+ಅವನಿಪನ
ಅಚ್ಚರಿ:
(೧) ಸತ್ತನು ಎಂದು ಹೇಳಲು – ಕೈದುಕಾರರ ಗುರು ಛಡಾಳಿಸಿಮೈದೆಗೆದು ನಿರ್ಜರರ ನಗರಿಗೆಹಾಯ್ದನ್
(೨) ಐದು, ಹೊಯ್ದು, ಕೈದು – ಪ್ರಾಸ ಪದಗಳು