ಬರುತ ಸಂಜಯ ದೂರದಲಿ ಕೃಪ
ಗುರುಸುತರ ಕೃತವರ್ಮಕನ ಕಂ
ಡರಿರಥಿಗಳಿವರಲ್ಲಲೇ ಶಿವಶಿವ ಮಹಾದೇವ
ಭರತಕುಲ ಮೊದಲೊಂದು ಬಳಿಕಾ
ಯ್ತೆರಡುಕವಲೊಬ್ಬರಿಗೆ ಜಯವಿ
ಸ್ತರಣ ಗದುಗಿನ ವೀರನಾರಾಯಣನ ಕರುಣದಲಿ (ಗದಾ ಪರ್ವ, ೩ ಸಂಧಿ, ೪೫ ಪದ್ಯ)
ತಾತ್ಪರ್ಯ:
ಸಂಜಯನು ದೂರದಲ್ಲಿ ಕೃಪ, ಅಶ್ವತ್ಥಾಮ, ಕೃತವರ್ಮರನ್ನು ನೋಡಿ, ಇವರು ಶತ್ರುರಥಿಕರಾಗಿರಲಾರರು ಎಂದುಕೊಂಡನು. ಭರತಕುಲ ಒಂದಾಗಿದ್ದುದು ಬಳಿಕ ಎರಡಾಯ್ತು. ಒಂದು ಪಕ್ಷಕ್ಕೆ ಶ್ರೀಕೃಷ್ಣನ ದಯೆಯಿಂದ ಜಯವುಂಟಾಯಿತು ಎಂದು ಚಿಂತಿಸಿದನು.
ಅರ್ಥ:
ಬರುತ: ಆಗಮಿಸು; ದೂರ: ಅಂತರ; ಗುರು: ಆಚಾರ್ಯ; ಸುತ: ಮಗ; ಕಂಡು: ನೋಡಿ; ಅರಿ: ವೈರಿ; ರಥಿ: ರಥದಲ್ಲಿ ಕುಳಿತು ಯುದ್ಧ ಮಾಡುವವನು, ಪರಾಕ್ರಮ; ಕುಲ: ವಂಶ; ಬಳಿಕ: ನಂತರ; ಕವಲು: ವಂಶ ಯಾ ಕುಲದ ಶಾಖೆ; ಜಯ: ಗೆಲುವು; ವಿಸ್ತರಣ: ಹಬ್ಬುಗೆ, ವಿಸ್ತಾರ; ಕರುಣ: ದಯೆ;
ಪದವಿಂಗಡಣೆ:
ಬರುತ +ಸಂಜಯ +ದೂರದಲಿ +ಕೃಪ
ಗುರುಸುತರ +ಕೃತವರ್ಮಕನ +ಕಂಡ್
ಅರಿ+ರಥಿಗಳ್+ಇವರಲ್ಲಲೇ +ಶಿವಶಿವ +ಮಹಾದೇವ
ಭರತಕುಲ+ ಮೊದಲೊಂದು +ಬಳಿಕಾಯ್ತ್
ಎರಡು+ಕವಲ್+ಒಬ್ಬರಿಗೆ +ಜಯ+ವಿ
ಸ್ತರಣ +ಗದುಗಿನ +ವೀರನಾರಾಯಣನ +ಕರುಣದಲಿ
ಅಚ್ಚರಿ:
(೧) ಆಶ್ಚರ್ಯವನ್ನು ಸೂಚಿಸುವ ಪರಿ – ಶಿವಶಿವ ಮಹಾದೇವ