ಪದ್ಯ ೨೮: ಅರ್ಜುನನಿಗೆ ಯಾರು ಶುಭ ನುಡಿಯಲೆಂದು ಧರ್ಮಜನು ಹೇಳಿದನು?

ಕರುಣಿಸಲಿ ಕಾಮಾರಿ ಕೃಪೆಯಿಂ
ವರ ಮಹಾಸ್ತ್ರವನಿಂದ್ರ ಯಮ ಭಾ
ಸ್ಕರ ಹುತಾಶನ ನಿರುತಿ ವರುಣ ಕುಬೇರ ಮಾರುತರು
ಸುರರು ವಸುಗಳು ಸಿದ್ಧ ವಿದ್ಯಾ
ಧರಮಹೋರಗ ಯಕ್ಷ ಮನುಕಿಂ
ಪುರುಷರೀಯಲಿ ನಿನಗೆ ವಿಮಳ ಸ್ವಸ್ತಿವಾಚನವ (ಅರಣ್ಯ ಪರ್ವ, ೫ ಸಂಧಿ, ೨೮ ಪದ್ಯ)

ತಾತ್ಪರ್ಯ:
ಶಿವನು ನಿನಗೆ ದಯೆತೋರಿ ಶ್ರೇಷ್ಠವಾದ ಆಯುಧವನ್ನು ನೀಡಲಿ. ಇಂದ್ರ, ಯಮ, ಸೂರ್ಯ, ಅಗ್ನಿ, ನಿರುತಿ, ವರುಣ, ಕುಬೇರ, ವಾಯು, ವಸುಗಳು, ಸಿದ್ಧರು, ವಿದ್ಯಾಧರರು, ಮಹಾಸರ್ಪಗಳು, ಯಕ್ಷರು, ಮನುಗಳು, ದೇವತೆಗಳು, ಕಿಂಪುರುಷರು ನಿನಗೆ ಶುಭನುಡಿಗಳಿಂದ ಹರಸಲಿ ಎಂದು ಧರ್ಮಜನು ನುಡಿದನು.

ಅರ್ಥ:
ಕರುಣಿಸು: ದಯೆತೋರು, ಆಶೀರ್ವದಿಸು; ಕಾಮ: ಮನ್ಮಥ; ಅರಿ: ವೈರಿ; ಕಾಮಾರಿ: ಶಿವ; ಕೃಪೆ: ದಯೆ, ಕರುಣೆ; ವರ: ಶ್ರೇಷ್ಠ; ಮಹಾಸ್ತ್ರ: ಶ್ರೇಷ್ಠವಾದ ಆಯುಧ; ಇಂದ್ರ: ಶಕ್ರ; ಭಾಸ್ಕರ: ಸೂರ್ಯ; ಹುತಾಶನ: ಹವಿಸ್ಸನ್ನು ಸೇವಿಸುವವನು, ಅಗ್ನಿ; ನಿರುತಿ: ನೈಋತ್ಯದಿಕ್ಕಿನ ಒಡೆಯ; ವರುಣ: ನೀರಿನ ಅಧಿದೇವತೆಯೂ ಪಶ್ಚಿಮ ದಿಕ್ಪಾಲಕನೂ ಆಗಿರುವ ಒಬ್ಬ ದೇವತೆ; ಕುಬೇರ: ಅಷ್ಟದಿಕ್ಪಾಲಕರಲ್ಲಿ ಒಬ್ಬ, ಧನಪತಿ; ಮಾರುತ: ವಾಯುದೇವತೆ; ಸುರರು: ದೇವತೆಗಳು; ವಸು: ದೇವತೆಗಳ ಒಂದು ವರ್ಗ; ಸಿದ್ಧ: ದೇವತೆಗಳಲ್ಲಿ ಒಂದು ಪಂಗಡ; ವಿದ್ಯಾಧರ: ದೇವತೆಗಳ ಗುಂಪು; ಉರಗ: ಹಾವು; ಯಕ್ಷ: ದೇವತೆಗಳಲ್ಲಿ ಒಂದು ವರ್ಗ; ಮನು: ಬ್ರಹ್ಮನ ಹದಿನಾಲ್ಕು ಜನ ಮಾನಸಪುತ್ರರಲ್ಲಿ ಪ್ರತಿಯೊಬ್ಬ; ಕಿಂಪುರುಷ: ಕುದುರೆಯ ಮುಖ ಮತ್ತು ಮನುಷ್ಯನ ಶರೀರವನ್ನುಳ್ಳ ಒಂದು ದೇವತೆ, ಕಿನ್ನರ; ವಿಮಳ: ಶುದ್ಧ; ಸ್ವಸ್ತಿ: ಒಳ್ಳೆಯದು, ಶುಭ; ವಾಚನ: ನುಡಿ;

ಪದವಿಂಗಡಣೆ:
ಕರುಣಿಸಲಿ +ಕಾಮಾರಿ +ಕೃಪೆಯಿಂ
ವರ+ ಮಹಾಸ್ತ್ರವನ್+ಇಂದ್ರ +ಯಮ +ಭಾ
ಸ್ಕರ+ ಹುತಾಶನ+ ನಿರುತಿ +ವರುಣ +ಕುಬೇರ +ಮಾರುತರು
ಸುರರು +ವಸುಗಳು +ಸಿದ್ಧ +ವಿದ್ಯಾ
ಧರ+ಮಹ+ಉರಗ +ಯಕ್ಷ +ಮನು+ಕಿಂ
ಪುರುಷರ್+ಈಯಲಿ +ನಿನಗೆ +ವಿಮಳ +ಸ್ವಸ್ತಿ+ವಾಚನವ

ಅಚ್ಚರಿ:
(೧) ಕ ಕಾರದ ತ್ರಿವಳಿ ಪದ – ಕರುಣಿಸಲಿ ಕಾಮಾರಿ ಕೃಪೆಯಿಂ
(೨) ಮಹಾಸ್ತ್ರ, ಮಹೋರಗ – ಮಹ ಪದದ ಬಳಕೆ