ಆರ ನೆರವಿಯೊಳಂಧಕಾರದ
ಭಾರವನು ರವಿ ಗೆಲುವನಿನ್ನೀ
ವೈರಿಬಲಭಂಜನಕೆ ಗುರು ಹಂಗಹನೆ ಕೆಲಬಲಕೆ
ಭೂರಿ ರಿಪುಚತುರಂಗಬಲಸಂ
ಹಾರದಲಿ ಒರವೆದ್ದ ರಕುತದ
ಪೂರದಲಿ ಮುಳುಗಿದರು ಪಾಂಚಾಲಾದಿ ನಾಯಕರು (ದ್ರೋಣ ಪರ್ವ, ೧೮ ಸಂಧಿ, ೪೮ ಪದ್ಯ)
ತಾತ್ಪರ್ಯ:
ಸೂರ್ಯನು ಯಾರ ಸಹಾಯದಿಂದ ಕತ್ತಲನ್ನು ಗೆಲ್ಲುತ್ತಾನೆ? ಶತ್ರುಸೈನ್ಯ ಸಂಹಾರಕ್ಕೆ ದ್ರೋಣನು ಇನ್ನೊಬ್ಬರ ಹಂಗಿಗೊಳಗಾಗುವನೇ? ಪಾಂಚಾಲ ಸೈನ್ಯವನ್ನು ದ್ರೋಣನು ಸಂಹರಿಸಲು ರಕ್ತದ ತೊರೆ ಹರಿದು ಪಾಂಚಾಲ ನಾಯಕರು ಮುಳುಗಿ ಹೋದರು.
ಅರ್ಥ:
ನೆರವು: ಸಹಾಯ; ಅಂಧಕಾರ: ಕತ್ತಲೆ; ಭಾರ: ಹೊರೆ; ರವಿ: ಸೂರ್ಯ; ಗೆಲುವು: ಜಯ; ವೈರಿ: ಶತ್ರು; ಬಲ: ಸೈನ್ಯ; ಭಂಜನ: ನಾಶಕಾರಿ, ಒಡೆಯುವುದು; ಗುರು: ಆಚಾರ್ಯ; ಹಂಗು: ದಾಕ್ಷಿಣ್ಯ, ಆಭಾರ; ಕೆಲಬಲ: ಅಕ್ಕಪಕ್ಕ, ಎಡಬಲ; ಭೂರಿ: ಹೆಚ್ಚು, ಅಧಿಕ; ರಿಪು: ವೈರಿ; ಚತುರಂಗ: ಸೈನ್ಯದ ಆನೆ, ಕುದುರೆ, ರಥ ಮತ್ತು ಕಾಲಾಳು ಎಂಬ ನಾಲ್ಕು ಅಂಗ; ಬಲ: ಸೈನ್ಯ; ಸಂಹಾರ: ನಾಶ, ಕೊನೆ; ಎದ್ದು: ಮೇಲೇಳು; ರಕುತ: ನೆತ್ತರು; ಪೂರ: ಭರ್ತಿ; ಮುಳುಗು: ನೀರಿನಲ್ಲಿ ಮೀಯು, ಕಾಣದಾಗು; ಆದಿ: ಮುಂತಾದ; ನಾಯಕ: ಒಡೆಯ;
ಪದವಿಂಗಡಣೆ:
ಆರ +ನೆರವಿಯೊಳ್+ಅಂಧಕಾರದ
ಭಾರವನು +ರವಿ +ಗೆಲುವನ್+ಇನ್ನೀ
ವೈರಿಬಲ+ಭಂಜನಕೆ +ಗುರು +ಹಂಗಹನೆ+ ಕೆಲಬಲಕೆ
ಭೂರಿ +ರಿಪು+ಚತುರಂಗ+ಬಲ+ಸಂ
ಹಾರದಲಿ +ಒರವೆದ್ದ+ ರಕುತದ
ಪೂರದಲಿ +ಮುಳುಗಿದರು +ಪಾಂಚಾಲಾದಿ +ನಾಯಕರು
ಅಚ್ಚರಿ:
(೧) ಉಪಮಾನದ ಪ್ರಯೋಗ – ಆರ ನೆರವಿಯೊಳಂಧಕಾರದ ಭಾರವನು ರವಿ ಗೆಲುವನ್
(೨) ಯುದ್ಧದ ಭೀಕರತೆ – ರಿಪುಚತುರಂಗಬಲಸಂಹಾರದಲಿ ಒರವೆದ್ದ ರಕುತದ ಪೂರದಲಿ ಮುಳುಗಿದರು