ಪದ್ಯ ೮: ಯಾವ ಮುನಿಗಳು ಯಾಗಕ್ಕೆ ಆಗಮಿಸಿದರು?

ಜನಪ ಕೇಳೀಚೆಯಲಿ ಬಂದುದು
ಮುನಿಗಳಾಂಗಿರ ಕಣ್ವ ಭೃಗು ಜೈ
ಮಿನಿ ಸುಮಂತ ವಸಿಷ್ಠ ಶೌನಕ ಗಾರ್ಗ್ಯ ಬೃಹದಶ್ವ
ಸನಕ ಶುಕ ಜಾಬಾಲಿ ತಿತ್ತಿರಿ
ವಿನುತ ಮಾರ್ಕಂಡೇಯ ಮುದ್ಗಲ
ತನಯ ರೋಮಶರೈಭ್ಯವತ್ಸನು ಶೈಬ್ಯ ನಾರದರು (ಸಭಾ ಪರ್ವ, ೮ ಸಂಧಿ, ೮ ಪದ್ಯ)

ತಾತ್ಪರ್ಯ:
ಜನಮೇಜಯ ರಾಜ ಕೇಳು, ರಾಜಸೂಯ ಯಾಗಕ್ಕೆ ರಾಜರಲ್ಲದೆ ಶ್ರೇಷ್ಠ ಮುನಿವರ್ಗವು ಆಗಮಿಸಿದರು. ಅಂಗಿರಸ, ಕಣ್ವ, ಭೃಗು, ಜೈಮಿನಿ, ಸುಮಂತ, ವಸಿಷ್ಠ, ಶೌನಕ, ಗಾರ್ಗ್ಯ, ಬೃಹದಶ್ವ, ಸನಕ, ಶುಕ, ಜಾಬಾಲಿ, ತಿತ್ತಿರಿ, ಮಾರ್ಕಂಡೇಯ, ಮೌದ್ಗಲ್ಯ, ರೋಮಶ, ರೈಭ್ಯ, ಶ್ರೀವತ್ಸ, ಶೈಬ್ಯ, ನಾರದರೇ ಮೊದಲಾದ ಋಷಿಗ್ತಳು ಆಗಮಿಸಿದರು.

ಅರ್ಥ:
ಜನಪ: ರಾಜ (ಇಲ್ಲಿ ಜನಮೇಜಯ); ಕೇಳು: ಆಲಿಸು; ಈಚೆಯಲಿ: ಇತ್ತಕಡೆ; ಬಂದುದು: ಆಗಮಿಸಿದರು; ಮುನಿ: ಋಷಿ; ತನಯ: ಮಗ;

ಪದವಿಂಗಡಣೆ:
ಜನಪ +ಕೇಳ್+ಈಚೆಯಲಿ +ಬಂದುದು
ಮುನಿಗಳ್+ಆಂಗಿರ+ ಕಣ್ವ+ ಭೃಗು +ಜೈ
ಮಿನಿ +ಸುಮಂತ +ವಸಿಷ್ಠ +ಶೌನಕ+ ಗಾರ್ಗ್ಯ +ಬೃಹದಶ್ವ
ಸನಕ+ ಶುಕ +ಜಾಬಾಲಿ +ತಿತ್ತಿರಿ
ವಿನುತ +ಮಾರ್ಕಂಡೇಯ +ಮುದ್ಗಲ
ತನಯ +ರೋಮಶ+ರೈಭ್ಯ+ವತ್ಸನು+ ಶೈಬ್ಯ+ ನಾರದರು

ಅಚ್ಚರಿ:
(೧) ೨೦ ಋಷಿಗಳ ಹೆಸರನ್ನು ಹೊಂದಿರುವ ಪದ್ಯ